ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಎರಡು ಹಂತದ ವಿಧಾನಸಭಾ ಚುನಾವಣೆಗೆ ಸ್ವಲ್ಪ ಮೊದಲು, ಅಂದರೆ ಏಪ್ರಿಲ್ 21 ಮತ್ತು ಏಪ್ರಿಲ್ 27ರೊಳಗೆ ಎಸ್ಐಆರ್ ಪೂರ್ಣಗೊಳಿಸುವವರಿಗೆ ಪೂರಕ ಮತದಾರರ ಪಟ್ಟಿ ಬಿಡುಗಡೆ ಮಾಡುವ ಮೂಲಕ ಮತದಾನಕ್ಕೆ ಅವಕಾಶ ನೀಡಬೇಕೆಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.
ಮತದಾರರ ಪಟ್ಟಿಯಿಂದ ಹೆಸರು ತೆಗೆಯಲಾಗಿರುವ ಮತದಾರರು ಈ ಕುರಿತು ಪರಿಶೀಲನೆ ನಡೆಸಲು ರಚಿಸಲಾದ ಮೇಲ್ಮನವಿ ನ್ಯಾಯಮಂಡಳಿಗಳ ಮುಂದೆ ಅರ್ಜಿ ಸಲ್ಲಿಸಿದ್ದಾರೆ. ಎರಡು ಹಂತದ ಚುನಾವಣೆಗೆ ಮುಂಚಿತವಾಗಿ ಈ ಅರ್ಜಿಗಳ ವಿಲೇವಾರಿಯಾಗಿ ಮತದಾನಕ್ಕೆ ಅರ್ಹರೆಂದು ಸಾಬೀತಾದರೆ, ಅಂಥವರಿಗೆ ಮತ ಚಲಾಯಿಸಲು ಅವಕಾಶ ನೀಡಲಾಗುವುದು ಎಂದು ನ್ಯಾಯಾಲಯ ಹೇಳಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ವಿಪುಲ್ ಎಂ ಪಾಂಚೋಲಿ ಅವರ ಪೀಠವು ಪೂರಕ ಪರಿಷ್ಕೃತ ಮತದಾರರ ಪಟ್ಟಿಯಲ್ಲಿ ಅಂತಹ ವ್ಯಕ್ತಿಗಳ ಹೆಸರುಗಳನ್ನು ಸೇರಿಸಲು ಅಗತ್ಯ ವ್ಯವಸ್ಥೆಗಳನ್ನು ಮಾಡುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.
ಮೇಲ್ಮನವಿ ನ್ಯಾಯಮಂಡಳಿಗಳ ಮುಂದೆ ಮೇಲ್ಮನವಿ ಬಾಕಿ ಉಳಿದಿರುವವರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಲು ಅರ್ಹತೆ ಪಡೆಯುವುದಿಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ.
ತಪ್ಪಾಗಿ ಹೊರಗಿಟ್ಟಿರುವುದರ ವಿರುದ್ಧ ಮಾತ್ರವಲ್ಲದೆ ಪರಿಷ್ಕೃತ ಮತದಾರರ ಪಟ್ಟಿಗೆ ಸೇರಿಸದಿರುವುದರ ವಿರುದ್ಧವೂ ಸೇರಿದಂತೆ 34 ಲಕ್ಷ ಮೇಲ್ಮನವಿಗಳು ದಾಖಲಾಗಿವೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಯಿತು. ಏಪ್ರಿಲ್ 13ರಿಂದ ಆ ಮೇಲ್ಮನವಿಗಳನ್ನು ನಿರ್ವಹಿಸಲು 19 ಮೇಲ್ಮನವಿ ನ್ಯಾಯಮಂಡಳಿಗಳನ್ನು ರಚಿಸಲಾಗಿದೆ ಎಂದು ಗಮನಕ್ಕೆ ತರಲಾಗಿದೆ.
ಪಶ್ಚಿಮ ಬಂಗಾಳದ 294 ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 23 ಮತ್ತು 29ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಮೇ 4ರಂದು ಮತ ಎಣಿಕೆ ನಡೆಯಲಿದೆ.

