ಲಖನೌ: ಉತ್ತರ ಪ್ರದೇಶದಾದ್ಯಂತ ಸಂಭವಿಸಿದ ಭೀಕರ ಚಂಡಮಾರುತ ಮತ್ತು ಮಳೆ ಸಂಬಂಧಿತ ಅವಘಡಗಳಲ್ಲಿ ಮೃತಪಟ್ಟವರ ಸಂಖ್ಯೆ 142ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯದ ಪೂರ್ವ ಮತ್ತು ಮಧ್ಯ ಭಾಗದ ಜಿಲ್ಲೆಗಳಲ್ಲಿ ಬುಧವಾರ ಚಂಡಮಾರುತ ಅಪ್ಪಳಿಸಿತ್ತು. ಇದರಿಂದಾಗಿ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದ್ದು, ಜಾನುವಾರುಗಳ ಸಾವಿಗೂ ಕಾರಣವಾಗಿದೆ.
ವಾರಾಣಸಿ, ಪ್ರಯಾಗ್ರಾಜ್ ಮತ್ತು ಕಾನ್ಪುರ ಜಿಲ್ಲೆಗಳು ಅತಿ ಹೆಚ್ಚು ಹಾನಿಗೊಳಗಾಗಿದ್ದು, ಹೆಚ್ಚಿನ ಸಾವುನೋವು ವರದಿಯಾಗಿದೆ. ಗೋಡೆ ಕುಸಿತದಂತಹ ಘಟನೆಗಳಿಂದಲೇ ಹೆಚ್ಚಿನ ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ರಾಜ್ಯ ಸರ್ಕಾರವು ಈಗಾಗಲೇ ಸಂಕಷ್ಟ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯಾಚರಣೆ ಪ್ರಾರಂಭಿಸಿದೆ. ಆಸ್ತಿಪಾಸ್ತಿ ಹಾನಿ ಮತ್ತು ಜಾನುವಾರುಗಳ ನಷ್ಟವನ್ನು ಅಂದಾಜು ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಪರಿಹಾರ ಘೋಷಣೆ...
ಮೃತರ ಕುಟುಂಬದವರಿಗೆ ತಲಾ ₹4 ಲಕ್ಷ ತುರ್ತು ಪರಿಹಾರವನ್ನು ಸರ್ಕಾರ ಘೋಷಿಸಿದೆ. ಅಲ್ಲದೆ, ಸಂಕಷ್ಟಕ್ಕೊಳಗಾದ ರೈತರಿಗೆ ಮತ್ತು ಇತರರಿಗೆ ತಕ್ಷಣ ನೆರವು ನೀಡಲು ಅಧಿಕಾರಿಗಳಿಗೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ನಿರ್ದೇಶನ ನೀಡಿದ್ದಾರೆ.
ಮಳೆಯಿಂದ ಶೇಕಡ 33ಕ್ಕಿಂತ ಹೆಚ್ಚಿನ ಪ್ರಮಾಣದ ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ನೀಡಲಾಗುವುದು. ಜಾನುವಾರುಗಳನ್ನು ಕಳೆದುಕೊಂಡವರಿಗೂ ಆರ್ಥಿಕ ನೆರವು ಒದಗಿಸಲಾಗುವುದು ಎಂದೂ ಯೋಗಿ ತಿಳಿಸಿದ್ದಾರೆ.

