ಭೋಪಾಲ್: ಪಶ್ಚಿಮ ಏಶ್ಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಇಂಧನ ಮಿತವ್ಯಯ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಜನತೆಗೆ ಕರೆ ನೀಡಿದ ಬೆನ್ನಲ್ಲೇ ಬಿಜೆಪಿ ನಾಯಕರೊಬ್ಬರು 50 ಬೆಂಗಾವಲು ವಾಹನಗಳೊಂದಿಗೆ ಪ್ರಯಾಣಿಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ವ್ಯಕ್ತವಾಗಿದೆ.
ಮಧ್ಯಪ್ರದೇಶ ಪಠ್ಯ ಪುಸ್ತಕ ನಿಗಮದ ಅಧ್ಯಕ್ಷರಾಗಿ ನೂತನವಾಗಿ ನೇಮಕಗೊಂಡಿರುವ ಸೌಭಾಗ್ಯ ಸಿಂಗ್ ಠಾಕೂರ್, ಅಧಿಕಾರ ಗ್ರಹಣ ಮಾಡಲು ಉಜ್ಜಯಿನಿಯಿಂದ ಭೋಪಾಲ್ ವರೆಗೆ ಬೆಂಗಾವಲು ವಾಹನಗಳು ಹಾಗೂ ಬೆಂಬಲಿಗರ ವಾಹನಗೊಳೊಂದಿಗೆ ತೆರಳಿದ್ದಾರೆ.
ಈ ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಸೌಭಾಗ್ಯ ಸಿಂಗ್ ಠಾಕೂರ್ ಅವರ ಬೆಂಗಾವಲು ವಾಹನಗಳು ಹೆದ್ದಾರಿಯಲ್ಲಿ ಸಾಗುತ್ತಿರುವುದು ಹಾಗೂ ವಿವಿಧ ಸ್ಥಳಗಳಲ್ಲಿ ಠಾಕೂರ್ ಅವರನ್ನು ಸ್ವಾಗತಿಸಲು ಬೆಂಬಲಿಗರು ವಾಹನಗಳನ್ನು ನಿಲ್ಲಿಸಿರುವುದು ವಿಡಿಯೊದಲ್ಲಿ ಸೆರೆಯಾಗಿದೆ. ವಿವಿಧ ಸ್ಥಳಗಳಲ್ಲಿ ಸಂಚಾರ ವ್ಯತ್ಯಯಗೊಂಡಿತು ಎಂದು ವರದಿಯಾಗಿದೆ. ಇದರಿಂದ ವಾಹನ ಸವಾರರಿಗೆ ಅನನುಕೂಲವಾಗಿ, ವಾಹನ ಚಲಾಯಿಸಲು ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು.
ಪಶ್ಚಿಮ ಏಶ್ಯ ಬಿಕ್ಕಟ್ಟು ಮುಂದುವರಿದಿರುವ ಹಿನ್ನೆಲೆಯಲ್ಲಿ ಭಾರತದ ಆರ್ಥಿಕತೆಯ ಮೇಲೆ ಒತ್ತಡವುಂಟಾಗುವ ಸಾಧ್ಯತೆ ಇರುವುದರಿಂದ, ಇಂಧನವನ್ನು ಮಿತವ್ಯಯವಾಗಿ ಬಳಕೆ ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ ಜನತೆಗೆ ಕರೆ ನೀಡಿದ ಕೇವಲ ಎರಡೇ ದಿನಗಳ ಅಂತರದಲ್ಲಿ ಘಟನೆ ನಡೆದಿದೆ.
ಪ್ರಧಾನಿ ನರೇಂದ್ರ ಮೋದಿಯ ಕರೆಯ ವಿರುದ್ಧ ವಾಗ್ದಾಳಿ ನಡೆಸಿದ್ದ ಪ್ರತಿಪಕ್ಷ ಕಾಂಗ್ರೆಸ್, ಪ್ರಧಾನಿಯ ಮನವಿಯು ಅವರ ಆಡಳಿತದ ವೈಫಲ್ಯವನ್ನು ಸೂಚಿಸುತ್ತಿದೆ ಎಂದು ಟೀಕಿಸಿತ್ತು. ಇದರ ಬೆನ್ನಿಗೇ ಈ ಘಟನೆ ನಡೆದಿರುವುದು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಗೆ ತೀವ್ರ ಮುಜುಗರವನ್ನುಂಟು ಮಾಡಿದೆ.

