ಭದೋಹಿ/ಫತೇಪುರ : ರಾಜ್ಯದ ಭದೋಹಿ, ಫತೇಪುರ ಮತ್ತು ಬದಾಂವೂ ಸೇರಿದಂತೆ ಐದು ಜಿಲ್ಲೆಗಳಲ್ಲಿ ಬುಧವಾರ ಭಾರಿ ಮಳೆ, ಬಿರುಗಾಳಿಗೆ ವ್ಯಾಪಕ ಹಾನಿ ಸಂಭವಿಸಿದ್ದು, 89 ಜನ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭದೋಹಿಯಲ್ಲಿ ಕನಿಷ್ಠ 16 ಜನ, ಫತೇಪುರದಲ್ಲಿ 9, ಬದಾಂವೂನಲ್ಲಿ ಐವರು, ಚಂದೌಲಿಯಲ್ಲಿ ಇಬ್ಬರು ಮತ್ತು ಸೋನ್ಭದ್ರ ಜಿಲ್ಲೆಯಲ್ಲಿ ಒಬ್ಬರು ಸಾವಿಗೀಡಾಗಿದ್ದಾರೆ ಎಂದು ಅವರು ಹೇಳಿದ್ದಾರೆ.
ಭಾರಿ ಮಳೆ ಹಾಗೂ ಬಿರುಗಾಳಿಯಿಂದ ಹಲವಾರು ಪ್ರದೇಶಗಳಲ್ಲಿ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ. ನೆಟ್ವರ್ಕ್ ಸಮಸ್ಯೆಯಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ತೊಡಕುಂಟಾಗಿದೆ ಎಂದು ಭದೋಹಿಯ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಕುನ್ವರ್ ವೀರೇಂದ್ರ ಕುಮಾರ್ ಮೌರ್ಯ ಹೇಳಿದ್ದಾರೆ.
ಸಂತ್ರಸ್ತರಿಗೆ ಪರಿಹಾರ ಘೋಷಿಸಿದ ಸಿಎಂ:
ಅಕಾಲಿಕ ಗುಡುಗು ಸಹಿತ ಮಳೆ ಮತ್ತು ಸಿಡಿಲಿನಿಂದ ಹಾನಿಗೊಳಗಾದ ಜನರಿಗೆ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ 24 ಗಂಟೆಗಳ ಒಳಗೆ ಪರಿಹಾರ ನೀಡಬೇಕೆಂದು ಅವರು ಸೂಚಿಸಿದ್ದಾರೆ.
ದುರಂತಕ್ಕೆ ತೀವ್ರ ಸಂತಾಪ ಸೂಚಿಸಿದ ಮುಖ್ಯಮಂತ್ರಿ, ಕೃಷಿ ಮತ್ತು ಕಂದಾಯ ಇಲಾಖೆಗಳು ತಕ್ಷಣವೇ ಬೆಳೆ ಹಾನಿ ಮತ್ತು ಆಸ್ತಿ ಪಾಸ್ತಿ ಹಾನಿಯ ಸಮೀಕ್ಷೆ ನಡೆಸಿ ವರದಿ ಸಲ್ಲಿಸಬೇಕು ಎಂದೂ ನಿರ್ದೇಶನ ನೀಡಿದ್ದಾರೆ.
ನಿರ್ಲಕ್ಷ್ಯ ಸಲ್ಲ:
ಪರಿಹಾರ ಕಾರ್ಯದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ವಹಿಸಿದರೆ ಸಹಿಸುವುದಿಲ್ಲ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಸಿಎಂ ಮನುಷ್ಯರಿಗೆ ಮಾತ್ರವಲ್ಲದೇ, ಜಾನುವಾರುಗಳ ಸಾವಿಗೂ ಸೂಕ್ತ ಪರಿಹಾರ ನೀಡುವಂತೆ ಸೂಚಿಸಿದ್ದಾರೆ.

