ಕೋಲ್ಕತ್ತ: ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕೇಂದ್ರಗಳ ಪ್ರವೇಶಕ್ಕೆ ಕ್ಯೂಆರ್ ಕೋಡ್ ಆಧಾರಿತ ಗುರುತಿನ ಚೀಟಿಗಳನ್ನು ಚುನಾವಣಾ ಆಯೋಗ ಪರಿಚಯಿಸಿದೆ.
ಎಣಿಕೆ ಸಮಯದಲ್ಲಿ ಅನಧಿಕೃತ ಪ್ರವೇಶಗಳನ್ನು ತಡೆಯಲು ಆಯೋಗ ಈ ಕ್ರಮ ತೆಗೆದುಕೊಂಡಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಗುರುವಾರ ಮಾಹಿತಿ ನೀಡಿದರು.
ಈ ವ್ಯವಸ್ಥೆಯನ್ನು ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ತಮಿಳುನಾಡು ಮತ್ತು ಪುದುಚೆರಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕೇಂದ್ರಗಳಲ್ಲಿ ಮತ್ತು ಐದು ರಾಜ್ಯಗಳಲ್ಲಿನ ಏಳು ಉಪ ಚುನಾವಣೆಗಳ ಮತ ಎಣಿಕೆ ಕೇಂದ್ರಗಳಲ್ಲಿ ಜಾರಿಗೆ ತರಲಾಗುವುದು. ನಂತರ ಇದನ್ನು ಎಲ್ಲ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳಿಗೆ ವಿಸ್ತರಿಸಲಾಗುವುದು ಎಂದರು.
ಎಣಿಕೆ ಕೇಂದ್ರಗಳಲ್ಲಿ ಮೂರು ಹಂತದ ಭದ್ರತಾ ವ್ಯವಸ್ಥೆ ಜಾರಿಗೆ ತರಲಾಗಿದೆ. ಅದರಲ್ಲಿ ಮೊದಲ ಎರಡು ಭದ್ರತಾ ಚೆಕ್ಪಾಯಿಂಟ್ಗಳಲ್ಲಿ ಗುರುತಿನ ಚೀಟಿಗಳನ್ನು ಪರಿಶೀಲಾಗುತ್ತದೆ. ಎಣಿಕೆ ಕೊಠಡಿಯ ಬಳಿಯ ಒಳಗಿನ ಭದ್ರತಾ ಚೆಕ್ಪಾಯಿಂಟ್ನಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನಿಂಗ್ ಯಶಸ್ವಿಯಾದ ನಂತರವೇ, ಒಳಗೆ ಪ್ರವೇಶಿಸಲು ಅನುಮತಿಸಲಾಗುವುದು ಎಂದು ಅವರು ತಿಳಿಸಿದರು.
ರಿಟರ್ನಿಂಗ್, ಸಹಾಯಕ ರಿಟರ್ನಿಂಗ್ ಅಧಿಕಾರಿಗಳು, ಎಣಿಕೆ ಸಿಬ್ಬಂದಿ, ತಾಂತ್ರಿಕ ಸಿಬ್ಬಂದಿ, ಅಭ್ಯರ್ಥಿಗಳು, ಚುನಾವಣಾ ಏಜೆಂಟ್ಗಳು ಮತ್ತು ಎಣಿಕೆ ಏಜೆಂಟ್ಗಳಿಗೆ ಎಣಿಕೆ ಕೇಂದ್ರ ಪ್ರವೇಶಿಸಲು ಕ್ಯೂಆರ್ ಕೋಡ್ ಸಕ್ರಿಯಗೊಳಿಸಿದ ಕಾರ್ಡ್ಗಳನ್ನು ನೀಡಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.
ಎಣಿಕೆ ಕಾರ್ಯದಲ್ಲಿ ಪಾರದರ್ಶಕತೆ, ಭದ್ರತೆ ಮತ್ತು ದಕ್ಷಣೆಯ ಮನದಂಡಗಳನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಇದು ಹೊಂದಿದೆ ಎಂದು ಅವರು ವಿವರಿಸಿದರು.

