ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಟಿವಿಕೆಗೆ ಸರ್ಕಾರ ರಚಿಸಲು ಅನುಮತಿ ನೀಡದ ರಾಜ್ಯಪಾಲ ವಿಶ್ವನಾಥ್ ಅರ್ಲೇಕರ್ ಅವರ ನಿರ್ಧಾರವನ್ನು ಖಂಡಿಸಿ, ಕಾಂಗ್ರೆಸ್ ಪಕ್ಷವು ಶುಕ್ರವಾರ(ಮೇ 8) ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದೆ.
ರಾಜಭವನವು ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರದ ಕೈಗೊಂಬೆಯಂತೆ ವರ್ತಿಸುವ ಮೂಲಕ, ಸಾಂವಿಧಾನಿಕ ನಿಯಮಗಳನ್ನು ಬುಡಮೇಲು ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.
ರಾಜ್ಯಪಾಲ ವಿಶ್ವನಾಥ್ ಅರ್ಲೇಕರ್ ಅವರು ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಅಣತಿಯಂತೆ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ಟಿವಿಕೆಗೆ ಸರ್ಕಾರ ರಚಿಸಲು ಅನುಮತಿ ನೀಡುತ್ತಿಲ್ಲ ಎಂದು ಗಿರೀಶ್ ಚೋಡಂಕರ್ ಆರೋಪಿಸಿದ್ದಾರೆ.
ಡಿಎಂಕೆ ಮತ್ತು ಎಐಎಡಿಎಂಕೆ ಮೈತ್ರಿಯ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, 'ಎಲ್ಲರೂ ಒಟ್ಟಾಗಿ ಬರಲಿ. ಆಗ ತಮಿಳುನಾಡಿನ ಜನತೆಯ ಮುಂದೆ ಅವರ ಬಣ್ಣ ಬಯಲಾಗುತ್ತದೆ. ನಿಜವಾದ ಜಾತ್ಯತೀತರು ಯಾರು ಮತ್ತು ಜನರ ಪರವಾಗಿ ನಿಲ್ಲುವವರು ಯಾರು ಎನ್ನುವುದು ತಿಳಿಯಲಿದೆ' ಎಂದು ಹೇಳಿದ್ದಾರೆ.
ಪ್ರಜಾಪ್ರಭುತ್ವದಲ್ಲಿ ಜನರೇ ರಾಜರು. ಅವರ ನಿರ್ಧಾರವೇ ಅಂತಿಮ. ಜನರ ತೀರ್ಪನ್ನು ನಾವು ಸ್ವಾಗತಿಸುತ್ತೇವೆ. ಹಾಗಾಗಿ ಟಿವಿಕೆಯೊಂದಿಗೆ ಕೈಜೋಡಿಸಿದ್ದೇವೆ ಎಂದು ಹೇಳಿದ್ದಾರೆ.
ಬಹುತೇಕ ಜಾತ್ಯತೀತ ಪಕ್ಷಗಳು ತಮಿಳುನಾಡಿನಲ್ಲಿ ಬಿಜೆಪಿ ಅಥವಾ ಆರ್ಎಸ್ಎಸ್ ಅಧಿಕಾರಕ್ಕೆ ಬರುವುದನ್ನು ಬಯಸುವುದಿಲ್ಲ. ನಾನಂತೂ ಅದನ್ನು ಖಂಡಿತವಾಗಿ ವಿರೋಧಿಸುತ್ತೇನೆ ಎಂದು ಹೇಳಿದ್ದಾರೆ.
ಟಿಎನ್ಸಿಸಿ ಮುಖ್ಯಸ್ಥ ಗಿರೀಶ್ ಚೋಡಂಕರ್, ಅಧ್ಯಕ್ಷ ಕೆ. ಸೆಲ್ವಪೆರುಂತಗೈ ಸೇರಿದಂತೆ ಹಲವು ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಟಿವಿಕೆ 108 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಕೂಡ, ಸ್ಪಷ್ಟ ಬಹುಮತವಿಲ್ಲದ ಕಾರಣ, ಕಾಂಗ್ರೆಸ್ನೊಂದಿಗೆ ಚುನಾವಣಾ ನಂತರ ಮೈತ್ರಿ ಮಾಡಿಕೊಂಡಿದೆ. ಟಿವಿಕೆ ಮತ್ತು ಕಾಂಗ್ರೆಸ್ ಮೈತ್ರಿಯಿಂದ 113 ಸ್ಥಾನಗಳಾಗಿವೆ, ಆದರೆ, ಸರ್ಕಾರ ರಚಿಸಲು 118 ಸ್ಥಾನಗಳ ಅಗತ್ಯವಿದೆ.
ಸರ್ಕಾರ ರಚಿಸಲು ವಿಜಯ್ ನಾಯಕತ್ವದ ಟಿವಿಕೆ ಎರಡು ಬಾರಿ ರಾಜ್ಯಪಾಲರ ಬಳಿ ಮನವಿ ಮಾಡಿಕೊಂಡರೂ, ಇನ್ನೂ 5 ಸ್ಥಾನಗಳ ಕೊರತೆಯಿದೆ ಎಂದು ಹೇಳಿ ಅವರು ಒಪ್ಪಿಗೆ ಸೂಚಿಸಿಲ್ಲ.

