ನವದೆಹಲಿ: 'ಸಿದ್ದರಾಮಯ್ಯ ಅವರ ಸಾರ್ವಜನಿಕ ಜೀವನವು ಘನತೆ, ಕರುಣೆ ಮತ್ತು ಸಾಮಾಜಿಕ ನ್ಯಾಯದ ಕಡೆಗಿನ ಅವರ ಆಳವಾದ ಬದ್ಧತೆಯನ್ನು ಪ್ರತಿಬಿಂಬಿಸಿದೆ' ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ರಾಜೀನಾಮೆ ಬೆನ್ನಲ್ಲೇ ದೆಹಲಿಗೆ ತೆರಳಿದ್ದ ಸಿದ್ದರಾಮಯ್ಯ, ಇಂದು ಮಲ್ಲಿಕಾರ್ಜುನ ಖರ್ಗೆ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ್ದಾರೆ.
ಈ ಭೇಟಿ ಕುರಿತ ಫೋಟೊಗಳನ್ನು 'ಎಕ್ಸ್' ಹಂಚಿಕೊಂಡಿರುವ ಖರ್ಗೆ, ಸಿದ್ದರಾಮಯ್ಯ ಅವರ ರಾಜಕೀಯ ಸೇವೆಯನ್ನು ಕೊಂಡಾಡಿದ್ದಾರೆ.
ಇದಕ್ಕೂ ಮೊದಲು ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ಚರ್ಚಿಸಿದ್ದರು.
'ಸಾಮಾನ್ಯ ಹಿನ್ನೆಲೆಯಿಂದ ಬಂದು ಕರ್ನಾಟಕದ ಮುಖ್ಯಮಂತ್ರಿಯಾಗಿ ಎರಡು ಬಾರಿ ಸೇವೆ ಸಲ್ಲಿಸಿರುವ ಅವರು ಸಮಾನತೆ, ಸಾಮರಸ್ಯ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸಿದ್ದರು' ಎಂದು ಖರ್ಗೆ ಹೇಳಿದ್ದಾರೆ.
'ಸಾರ್ವಜನಿಕ ಜೀವನಕ್ಕೆ ಅವರು ನೀಡಿದ ಕೊಡುಗೆಗಾಗಿ ಕರ್ನಾಟಕ ಮತ್ತು ಕಾಂಗ್ರೆಸ್ ಪಕ್ಷ ಕೃತಜ್ಞರಾಗಿವೆ. ಅವರಿಗೆ ಉತ್ತಮ ಆರೋಗ್ಯ ಸಿಗಲಿ ಮತ್ತು ಜನರ ನಿರಂತರ ಸೇವೆಯಲ್ಲಿ ತೊಡಗಿಸಿಕೊಳ್ಳಲಿ' ಎಂದು ಆಶಿಸಿದ್ದಾರೆ.

