ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆಯ ಪ್ರಕಟನೆ ಹೊರಬೀಳುತ್ತಿದ್ದಂತೆಯೇ ದಿಲ್ಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಸಿ.ವೇಣುಗೋಪಾಲ್, "ಅಂತಿಮ ನಿರ್ಧಾರ ಹೊರ ಬಿದ್ದಿದೆ ಹಾಗೂ ಕಾಂಗ್ರೆಸ್ ಹೈಕಮಾಂಡ್ ವಿ.ಡಿ.ಸತೀಶನ್ ಅವರನ್ನು ಕೇರಳ ಸರಕಾರದ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದೆ.
ನಾನು ಈ ನಿರ್ಧಾರವನ್ನು ಹೃದಯಪೂರ್ವಕವಾಗಿ ಸ್ವಾಗತಿಸುತ್ತೇನೆ" ಎಂದು ತಿಳಿಸಿದರು.
ಮೇ 4ರಂದು ಪ್ರಕಟವಾದ ಕೇರಳ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಯುಡಿಎಫ್ ಮೈತ್ರಿಕೂಟ ಭಾರಿ ಬಹುಮತದೊಂದಿಗೆ ಒಂದು ದಶಕದ ಬಳಿಕ ಅಧಿಕಾರಕ್ಕೆ ಮರಳಿತ್ತು. ಆದರೆ, ಕಳೆದ 11 ದಿನಗಳಿಂದ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಕಾಂಗ್ರೆಸ್ ನಾಯಕತ್ವದ ಪಾಲಿಗೆ ಬಗೆಹರಿಸಲಾಗದ ಕಗ್ಗಂಟಾಗಿ ಪರಿಣಮಿಸಿತ್ತು. ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಹೈಕಮಾಂಡ್ ನ ಒಂದು ವರ್ಗ ವೇಣುಗೋಪಾಲ್ ಅವರನ್ನು ಮುಖ್ಯಮಂತ್ರಿ ಹುದ್ದೆಗೆ ಆಯ್ಕೆ ಮಾಡಲು ಬಯಸಿದೆ ಎಂದು ಹೇಳಲಾಗಿತ್ತು. ಆದರೆ, ಮೈತ್ರಿಪಕ್ಷಗಳು, ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರ ವ್ಯಾಪಕ ಬೆಂಬಲ ಪಡೆದಿದ್ದ ವಿ.ಡಿ.ಸತೀಶನ್, ಅಂತಿಮವಾಗಿ ಕೇರಳ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.

