ನವದೆಹಲಿ: ನಾಲ್ಕು ದಿನಗಳ ಭಾರತ ಪ್ರವಾಸದಲ್ಲಿರುವ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರು, ಇರಾನ್ ಜೊತೆಗಿನ ಶಾಂತಿ ಒಪ್ಪಂದಕ್ಕೆ ಸಂಬಂಧಿಸಿದಂತೆ ಇಂದು 'ಶುಭ ಸುದ್ದಿ' ಹೊರಬೀಳುವ ಸಾಧ್ಯತೆಯಿದೆ ಎಂದು ದೆಹಲಿಯಲ್ಲಿ ತಿಳಿಸಿದ್ದಾರೆ.
ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರೊಂದಿಗೆ ನಡೆಸಿದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ಮುಂದಿನ ಕೆಲವು ಗಂಟೆಗಳಲ್ಲಿ ಇಡೀ ಜಗತ್ತಿಗೆ ಒಂದು ಒಳ್ಳೆಯ ಸುದ್ದಿ ಸಿಗುವ ಸಾಧ್ಯತೆಯಿದೆ ಎಂದು ನಾನು ಭಾವಿಸುತ್ತೇನೆ' ಎಂದಿದ್ದಾರೆ.
ಅಮೆರಿಕ ಮತ್ತು ಇಸ್ರೇಲ್ ಜಂಟಿ ದಾಳಿಗೆ ಪ್ರತಿಯಾಗಿ ಇರಾನ್ ಬಹುತೇಕ ಬಂದ್ ಮಾಡಿದ್ದ 'ಹೊರ್ಮುಜ್ ಜಲಸಂಧಿ'ಯ ಬಗ್ಗೆ ಈ ಹೊಸ ಶಾಂತಿ ಒಪ್ಪಂದವು ಪರಿಹರಿಸಲಿದೆ ಎಂದು ರುಬಿಯೊ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
'ಇರಾನ್ ಯಾವುದೇ ಕಾರಣಕ್ಕೂ ಪರಮಾಣು ಅಸ್ತ್ರವನ್ನು ಹೊಂದಬಾರದು ಎಂಬುದು ಅಮೆರಿಕ ಅಧ್ಯಕ್ಷರ ಅಂತಿಮ ಗುರಿಯಾಗಿದೆ. ಈ ಒಪ್ಪಂದವು ಆ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಲಿದೆ. ಹೊರ್ಮುಜ್ ಜಲಸಂಧಿಯು ಅಂತರರಾಷ್ಟ್ರೀಯ ಜಲಮಾರ್ಗವಾಗಿದೆ. ಅಲ್ಲಿ ವಾಣಿಜ್ಯ ಹಡಗುಗಳ ಮೇಲೆ ದಾಳಿ ಮಾಡುವುದಾಗಿ ಇರಾನ್ ಬೆದರಿಕೆ ಹಾಕುತ್ತಿರುವುದು ಅಂತರರಾಷ್ಟ್ರೀಯ ಕಾನೂನಿನ ಉಲ್ಲಂಘನೆಯಾಗಿದೆ' ಎಂದರು.
ಸುಮಾರು 53 ನಿಮಿಷಗಳ ಕಾಲ ನಡೆದ ಈ ಪತ್ರಿಕಾಗೋಷ್ಠಿಯಲ್ಲಿ ಜಾಗತಿಕ ವಿದ್ಯಮಾನಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು.

