ಕಾಸರಗೋಡು: 2026 ರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಮೇ 4 ರಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದೆ. ಕಾಸರಗೋಡು ಜಿಲ್ಲೆಯಲ್ಲಿ ಎಣಿಕೆ ಪ್ರಕ್ರಿಯೆಗಳು ಪೂರ್ಣಗೊಂಡಿದ್ದು, ಮತ ಎಣಿಕೆಯ ದಿನದಂದು ಸಾರ್ವಜನಿಕ ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ಕಾರ್ಯಕರ್ತರು ಮತ್ತು ಸಾರ್ವಜನಿಕರು ಸಹಕರಿಸುವಂತೆ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ಮನವಿ ಮಾಡಿದರು.
ಜಿಲ್ಲಾಧಿಕಾರಿ ಚೇಂಬರ್ನಲ್ಲಿ ಸಾರ್ವಜನಿಕ ಶಾಂತಿ, ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ವಿವಿಧ ರಾಜಕೀಯ ಪಕ್ಷಗಳ ಸಭೆ ನಡೆಸಿ, ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ಈ ಮಾಹಿತಿ ನೀಡಿದರು. ಮಂಜೇಶ್ವರ, ಕಾಸರಗೋಡು ಹಾಗೂ ಉದುಮ ಕ್ಷೇತ್ರಗಳ ಮತ ಎಣಿಕೆ ಕಾಸರಗೋಡು ಸರ್ಕಾರಿ ಕಾಲೇಜಿನಲ್ಲಿ ಮತ್ತು ಕಾಞಂಗಾಡು, ತ್ರಿಕರಿಪುರ ಕ್ಷೇತ್ರಗಳ ಮತ ಎಣಿಕೆ ಕಾಞಂಗಾಡು ದುರ್ಗಾ ಹೈಯರ್ ಸೆಕೆಂಡರಿ ಶಾಲೆಯ ಕೇಂದ್ರಗಳಲ್ಲಿ ನಡೆಯಲಿದೆ. ಮತ ಎಣಿಕೆಯ ಬಗ್ಗೆ ಜಿಲ್ಲೆಯ ಪತ್ರಕರ್ತರಿಗೆ ಮಾಹಿತಿ ಒದಗಿಸಲು ವ್ಯವಸ್ಥೆ ಮಾಡಲಾಗಿದೆ. ಕೇಂದ್ರ ಚುನಾವಣಾ ಆಯೋಗದಿಂದ ಅಂಗೀಕಾರ ಪತ್ರ ಪಡೆದ ಪತ್ರಕರ್ತರಿಗೆ ಮಾತ್ರ ಎಣಿಕೆ ಕೇಂದ್ರಗಳಲ್ಲಿರುವ ಮಾಧ್ಯಮ ಕೇಂದ್ರಗಳನ್ನು ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಮತ ಎಣಿಕಾ ಕೇಂದ್ರಗಳಿಗೆ ಭೇಟಿ:
ಜಿಲ್ಲಾ ಚುನಾವಣಾ ಅಧಿಕಾರಿ ಮತ್ತು ಜಿಲ್ಲಾಧಿಕಾರಿ ಅರ್ಜುನ್ಪಾಂಡ್ಯನ್ ಮತ್ತು ಜಿಲ್ಲಾ ಪೆÇಲೀಸ್ ಮುಖ್ಯಸ್ಥ ವಿಜಯ್ ಭರತ್ ರೆಡ್ಡಿ ಅವರು ಕಾಸರಗೋಡಿನ ಸರ್ಕಾರಿ ಕಾಲೇಜಿನ ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿ ಸಿದ್ಧತೆ ಮತ್ತು ಭದ್ರತಾ ವ್ಯವಸ್ಥೆ ಪರಿಶೀಲಿಸಿದರು. ಕಾಸರಗೋಡು, ಮಂಜೇಶ್ವರ ಮತ್ತು ಉದುಮ ಕ್ಷೇತ್ರಗಳ ಎಣಿಕೆ ಕೇಂದ್ರಗಳಲ್ಲಿ ಸಿದ್ಧತೆಗಳನ್ನು ಪರಿಶೀಲಿಸಲಾಯಿತು. ಚುನಾವಣಾಧಿಕಾರಿಗಳಾದ ಲಿಪು ಎಸ್. ಲಾರೆನ್ಸ್ ಮತ್ತು ವಿ.ಪಿ. ರಘುಮಣಿ ಉಪಸ್ಥಿತರಿದ್ದರು.



