ಕೋಲ್ಕತ್ತ; ವಿಧಾನ ಸಭಾ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿರುವ ತೃಣಮೂಲ ಕಾಂಗ್ರೆಸ್ (Trinamool Congress) ಮುಖ್ಯಸ್ಥೆ ಮಮತಾ ಬ್ಯಾನರ್ಜಿ (Mamata Banerjee) ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರಾಕರಿಸಿದ್ದಾರೆ.
ವಿಧಾನ ಸಭಾ ಚುನಾವಣಾ ಫಲಿತಾಂಶ ಹೊರಬಿದ್ದ ಬಳಿಕ ತಮ್ಮ ಅಸಮಾಧಾನವನ್ನು ವ್ಯಕ್ತ ಪಡಿಸಿದ ಅವರು, ಚುನಾವಣಾ ಆಯೋಗದ ವಿರುದ್ಧ ಹರಿಹಾಯ್ದರು. ಚುನಾವಣಾ ಆಯೋಗವು ಕೆಟ್ಟ ಆಟ ಆಡುತ್ತಿದೆ ಎಂದಿರುವ ಅವರು ಯಾವುದೇ ಕಾರಣಕ್ಕೂ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿದ್ದಾರೆ. ಇದು ಈಗ ಸಾಂವಿಧಾನಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ. ಇದರಿಂದ ಮುಂದೆ ರಾಜ್ಯಪಾಲರು ಸುಪ್ರೀಂ ಕೋರ್ಟ್ ಮೊರೆ ಹೋಗುವ ಸಾಧ್ಯತೆ ಇದೆ.
ಇತ್ತೀಚೆಗೆ ನಡೆದಿರುವ ವಿಧಾನಸಭಾ ಚುನಾವಣಾ ಫಲಿತಾಂಶ ಸೋಮವಾರ ಬಹಿರಂಗವಾದ ಬಳಿಕ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರಾಕರಿಸಿದ್ದರೆ. ಇದು ರಾಜ್ಯದಲ್ಲಿ ಸಾಂವಿಧಾನಿಕ ಬಿಕ್ಕಟ್ಟನ್ನು ಉಂಟುಮಾಡಿದೆ.
ಮಮತಾ ಬ್ಯಾನರ್ಜಿ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಾವು ಚುನಾವಣೆಯಲ್ಲಿ ಸೋತಿಲ್ಲ. ಇದು ಕೇಸರಿ ಪಕ್ಷದ ಜೊತೆಗೂಡಿ ಚುನಾವಣಾ ಆಯೋಗ ನಡೆಸಿರುವ ಅಕ್ರಮವಾಗಿದೆ. ಹೀಗಾಗಿ ನಾನು ರಾಜಭವನಕ್ಕೆ ಹೋಗುವುದಿಲ್ಲ. ನಾನು ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿದ್ದಾರೆ.
ಮುಂದೇನು?
ಚುನಾವಣೆಯಲ್ಲಿ ಸೋತ ಮೇಲೆ ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಎನ್ನುವ ನಿಯಮ ಸಂವಿಧಾನದಲ್ಲಿ ಇಲ್ಲ. ಇದು ನಿಯಮಕ್ಕಿಂತ ಹೆಚ್ಚಾಗಿ ಗೌರವಯುತ ಸಂಪ್ರದಾಯವಾಗಿ ಪಾಲಿಸಲಾಗುತ್ತದೆ. ಮುಖ್ಯಮಂತ್ರಿಯೊಬ್ಬರು ತಮ್ಮ ಸ್ಥಾನದಲ್ಲಿ ಮುಂದುವರಿಯಲು ಶಾಸಕಾಂಗ ಸಭೆಯ ವಿಶ್ವಾಸವನ್ನು ಹೊಂದಿರಬೇಕು. ಒಂದು ವೇಳೆ ಹೊಂದಿಲ್ಲವಾದರೆ ರಾಜೀನಾಮೆ ನೀಡಬೇಕಾಗುತ್ತದೆ. ಆಗ ಮಮತಾ ಬ್ಯಾನರ್ಜಿ ರಾಜೀನಾಮೆ ನೀಡಲು ನಿರಾಕರಿಸಿದರೆ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಿ ಶಾಸಕಾಂಗವನ್ನು ಅಮಾನತುಗೊಳಿಸುವುದು ಸೇರಿದಂತೆ ರಾಜ್ಯಪಾಲರ ಮುಂದೆ ಹಲವು ಆಯ್ಕೆಗಳಿವೆ. ಆದರೆ ಅದು ಕೊನೆಯ ಆಯ್ಕೆಯಾಗಿರುತ್ತದೆ.
ಸಂವಿಧಾನದ 164(1) ನೇ ವಿಧಿಯ ಪ್ರಕಾರ ಮುಖ್ಯಮಂತ್ರಿಗಳು ಮತ್ತು ಅವರ ಸಂಪುಟವು ರಾಜ್ಯಪಾಲರ ಸೂಚನೆಯ ಬಳಿಕ ಅಧಿಕಾರ ವಹಿಸಿಕೊಳ್ಳುತ್ತದೆ. ಈ ಸಂದರ್ಭದಲ್ಲಿ ರಾಜ್ಯಪಾಲರಿಗೆ ಅವರನ್ನು ವಜಾಗೊಳಿಸಲು ಬಹುದಾಗಿದೆ.
ಚುನಾವಣಾ ಆಯೋಗದ ಫಲಿತಾಂಶಗಳ ಪ್ರಕಾರ ತೃಣಮೂಲ ಕಾಂಗ್ರೆಸ್ 80 ಸ್ಥಾನಗಳನ್ನು ಗೆದ್ದಿದ್ದು, ಬಹುಮತಕ್ಕೆ ಅದು 68 ಸ್ಥಾನಗಳ ಕೊರತೆ ಅನುಭವಿಸುತ್ತಿದೆ. ಇದನ್ನು ತುಂಬಿಕೊಳ್ಳುವುದು ಈಗ ಅದಕ್ಕೆ ಕಠಿಣವಾಗಿದೆ.
ಚುನಾವಣಾ ಫಲಿತಾಂಶದ ಬಳಿಕ ಮಾತನಾಡಿದ ಮಮತಾ ಬ್ಯಾನರ್ಜಿ, ಚುನಾವಣಾ ಆಯೋಗವು ಕೆಟ್ಟ ಆಟಗಳನ್ನು ಆಡುತ್ತಿದೆ. ಮಹಾರಾಷ್ಟ್ರ, ಹರಿಯಾಣ ಮತ್ತು ಬಿಹಾರದಲ್ಲಿ ಇತ್ತೀಚೆಗೆ ನಡೆದ ಚುನಾವಣೆಗಳಲ್ಲಿ ಬಿಜೆಪಿಯೇತರ ಮೈತ್ರಿಕೂಟಗಳ ಸೋತಿವೆ. ಇದು ಹೇಗೆ ಸಾಧ್ಯ? ಚುನಾವಣಾ ಆಯೋಗವು ಪಕ್ಷಪಾತದಿಂದ ವರ್ತಿಸಿದಾಗ ಮತ್ತು (ಕೇಂದ್ರ) ಸರ್ಕಾರವು ಏಕಪಕ್ಷೀಯ ಆಡಳಿತವನ್ನು ಬಯಸಿದಾಗ ಮಾತ್ರ ಇದು ನಡೆಯುತ್ತದೆ ಎಂದು ಆರೋಪಿಸಿರುವುದು ಮಾತ್ರವಲ್ಲದೆ ಮತಗಳನ್ನು ಎಣಿಕೆ ಮಾಡುತ್ತಿರುವಾಗ ಮತಗಟ್ಟೆಯಲ್ಲಿ ತನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ.

