ತಿರುವನಂತಪುರ: ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯವು (ಇ.ಡಿ) ಬುಧವಾರ ಕೇರಳಂನ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಇತರರ ನಿವಾಸಗಳ ಮೇಲೆ ದಾಳಿ ನಡೆಸಿ ಶೋಧ ಕಾರ್ಯ ಕೈಗೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತಿರುವನಂತಪುರದಲ್ಲಿರುವ ಪಿಣರಾಯಿ ಅವರ ಬಾಡಿಗೆ ಮನೆ ಸೇರಿದಂತೆ ರಾಜ್ಯದ ಒಟ್ಟು 10 ಸ್ಥಳಗಳ ಮೇಲೆ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಸೆಕ್ಷನ್ ಅಡಿಯಲ್ಲಿ ದಾಳಿ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ವಿವಾದಿತ ಗಣಿ ಕಂಪನಿ ಕೊಚ್ಚಿನ್ ಮಿನರಲ್ಸ್ ಮತ್ತು ರೂಟೈಲ್ಸ್ ಲಿಮಿಟೆಡ್ (ಸಿಎಂಆರ್ಎಲ್) ಹಾಗೂ ಪಿಣರಾಯಿ ಅವರ ಪುತ್ರಿ ವೀಣಾ ಟಿ. ಅವರ ಬೆಂಗಳೂರು ಮೂಲದ ಐಟಿ ಸಂಸ್ಥೆ ಎಕ್ಸ್ಲಾಜಿಕ್ ಸಲ್ಯೂಷನ್ ನಡುವೆ ನಡೆದಿದೆ ಎನ್ನಲಾದ ₹1.72 ಕೋಟಿ ಪಾವತಿ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ.
ಪುತ್ರಿಯ ಸಂಸ್ಥೆಯ ಮೂಲಕ ಆ ಹಣ ಪಿಣರಾಯಿ ಅವರನ್ನು ತಲುಪಿದೆ ಎಂದು ಪತ್ರಕರ್ತ ಎಂ.ಆರ್.ಅಜಯನ್ ಆರೋಪಿಸಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ನ್ಯಾಯಾಲಯಕ್ಕೆ ಕೋರಿದ್ದರು.
ಈ ಪ್ರಕರಣದಲ್ಲಿ ಇ.ಡಿ ಕೈಗೊಂಡಿರುವ ಕ್ರಮಗಳನ್ನು ರದ್ದುಗೊಳಿಸುವಂತೆ ಕೋರಿ ಸಿಎಂಆರ್ಎಲ್ ಸಲ್ಲಿಸಿದ್ದ ಅರ್ಜಿಯನ್ನು ಕೇರಳಂ ಹೈಕೋರ್ಟ್ ಮಂಗಳವಾರವಷ್ಟೇ ವಜಾಗೊಳಿಸಿತ್ತು.

