ಕೋಲ್ಕತ್ತ: ಕೊಲ್ಕತ್ತಾದ ನೇತಾಜಿ ಸುಭಾಷ್ ಚಂದ್ರ ಭೋಸ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪರವಾನಿಗೆ ರಹಿತ ಮದ್ದುಗುಂಡುಗಳೊಂದಿಗೆ ಸಿಕ್ಕಿಬಿದ್ದ ಪ್ರಕರಣಕ್ಕೆ ಸಂಬಂಧಿಸಿ ಹಲವು ತಿಂಗಳುಗಳ ಬಳಿಕ ದಕ್ಷಿಣ 24 ಪರಗಣ ಪುಜಾಲಿ ಪುರಸಭೆಯ ತೃಣಮೂಲ ಕಾಂಗ್ರೆಸ್ ಕೌನ್ಸಿಲರ್ ನನ್ನು ಪೊಲೀಸರು ಬಂಧಿಸಿದ್ದಾರೆ.
14ನೇ ವಾರ್ಡ್ ಅನ್ನು ಪ್ರತಿನಿಧಿಸುತ್ತಿರುವ ಅಮೀರುಲ್ ಶೇಖ್ ಇಸ್ಲಾಮ್ ರನ್ನು ಶಸ್ತ್ರಾಸ್ತ್ರ ಕಾಯ್ದೆ ಅಡಿಯಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
2025ರ ಸೆಪ್ಟೆಂಬರ್ 21ರಂದು 6ಇ 5227 ವಿಮಾನ ಏರಲು ಪ್ರಯತ್ನಿಸುತ್ತಿದ್ದ ಸಂದರ್ಭ ಅಮೀರುಲ್ ಅವರನ್ನು ಸಿಐಎಸ್ಎಫ್ ಸಬ್ ಇನ್ಸ್ಪೆಕ್ಟರ್ ಗೋಪಾಲ್ ಶಾ ತಡೆದಿದ್ದರು. ಭದ್ರತಾ ಸ್ಕ್ಯಾನರ್ ನಲ್ಲಿ ಅವರ ಬ್ಯಾಗ್ ನ ಒಳಗಡೆ ಖಾಲಿ ಮ್ಯಾಗಝಿನ್ ಹಾಗೂ 7.65 ಎಂಎಂನ 6 ಸುತ್ತು ಸಜೀವ ಕಾಟ್ರಿಜ್ ಇರುವುದು ಪತ್ತೆಯಾಗಿತ್ತು.
ಈ ಸಂದರ್ಭ ಇಸ್ಲಾಮ್ ಅವರು ತಾನು ಬಂದೂಕು ಪರವಾನಿಗೆ ಹೊಂದಿರುವುದಾಗಿ ತಿಳಿಸಿದ್ದರು. ಆದರೆ ದಾಖಲೆಗಳನ್ನು ಸಲ್ಲಿಸಲು ಸಮಯಾವಕಾಶ ನೀಡುವಂತೆ ಕೋರಿದ್ದರು. ಡೈಮಂಡ್ ಹಾರ್ಬರ್ ಲೋಕಸಭಾ ಕ್ಷೇತ್ರದಲ್ಲಿ ಜನಪ್ರತಿನಿಧಿಯ ಸ್ಥಾನಮಾನದ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಖಲೆಗಳನ್ನು ಒದಗಿಸಲು ಅವರಿಗೆ 7 ದಿನಗಳ ಕಾಲಾವಕಾಶ ನೀಡಿದ್ದರು. ಆದರೆ, ಅವರು ದಾಖಲೆಗಳನ್ನು ಸಲ್ಲಿಸಲು ವಿಫಲರಾಗಿದ್ದರು.
ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಲ್ಲದೆ, ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

