ರೈತರು ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಅವರ ಮೇಲೆ ಬೆಂಗಾವಲು ಪಡೆಯ ವಾಹನ ಹರಿಸಿ ಐವರು ರೈತರ ಸಾವಿಗೆ ಕಾರಣರಾದ ಆರೋಪ ಎದುರಿಸುತ್ತಿರುವ ಮಾಜಿ ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ ಆಶಿಶ್ ಮಿಶ್ರಾ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿ ಜೋಯ್ ಮಲ್ಯ ಬಾಗ್ಚಿ ಅವರನ್ನೊಳಗೊಂಡ ನ್ಯಾಯಪೀಠ ನಡೆಸಿತು.
ಸುಪ್ರೀಂ ಕೋರ್ಟ್ನ ಹಿಂದಿನ ಆದೇಶದಂತೆ ಆಶಿಶ್ ಮಿಶ್ರಾ ಮಧ್ಯಂತರ ಜಾಮೀನಿನ ಮೇಲೆ ಹೊರಗಿದ್ದಾನೆ.
ಪ್ರಮುಖ ಪ್ರಕರಣಕ್ಕೆ ಸಂಬಂಧಿಸಿದ ಮೊದಲ ವಿಚಾರಣೆಯಲ್ಲಿ 44 ಸಾಕ್ಷಿಗಳ ವಿಚಾರಣೆ ಪೂರ್ಣಗೊಂಡಿದ್ದು, 15 ಮಂದಿಯನ್ನು ಬಿಡುಗಡೆಗೊಳಿಸಲಾಗಿದೆ. ಇನ್ನೂ 72 ಸಾಕ್ಷಿಗಳ ವಿಚಾರಣೆ ಬಾಕಿಯಿದೆ ಎಂದು ರಾಜ್ಯ ಸರ್ಕಾರದ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು.
ಎರಡನೇ ವಿಚಾರಣೆಯಲ್ಲಿ 35 ಸಾಕ್ಷಿಗಳ ಪೈಕಿ 25 ಮಂದಿಯನ್ನು ಬಿಡುಗಡೆಗೊಳಿಸಲಾಗಿದ್ದು, ಇನ್ನೂ ಒಂಭತ್ತು ಮಂದಿ ವಿಚಾರಣೆಗೆ ಬಾಕಿಯಿದ್ದಾರೆ ಎಂದೂ ಮಾಹಿತಿ ನೀಡಲಾಯಿತು.
ಆಶಿಶ್ ಮಿಶ್ರಾ ಪರ ಹಿರಿಯ ವಕೀಲ ಸಿದ್ಧಾರ್ಥ್ ದವೆ ವಾದ ಮಂಡಿಸಿ, ಸಾಕ್ಷಿಗಳ ವಿರುದ್ಧ ಜಾಮೀನುಸಹಿತ ಹಾಗೂ ಜಾಮೀನುರಹಿತ ವಾರೆಂಟ್ಗಳನ್ನು ಹೊರಡಿಸಿದ್ದರೂ ಕಳೆದ ಎರಡು ತಿಂಗಳಿಂದ ಯಾವುದೇ ಸಾಕ್ಷಿಯನ್ನು ವಿಚಾರಣೆಗೊಳಪಡಿಸಲಾಗಿಲ್ಲ ಎಂದು ಹೇಳಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ವಿಚಾರಣೆಯ ವಿಳಂಬದ ಬಗ್ಗೆ ಪ್ರಾಸಿಕ್ಯೂಷನ್ ಅನ್ನು ಪ್ರಶ್ನಿಸಿತು. "ಮಾರ್ಚ್ನಿಂದ ಇಲ್ಲಿಯವರೆಗೆ ನೀವು ಏನು ಮಾಡಿದ್ದೀರಿ?" ಎಂದು ನ್ಯಾಯಪೀಠ ಪ್ರಶ್ನಿಸಿತು.
ಇದಕ್ಕೆ ಉತ್ತರಿಸಿದ ರಾಜ್ಯ ಸರ್ಕಾರದ ಪರ ವಕೀಲರು, ವಿಚಾರಣೆಯ ವಿಳಂಬದ ಕುರಿತು ಸಂಬಂಧಿತ ಪ್ರಾಸಿಕ್ಯೂಷನ್ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ನ್ಯಾಯಾಲಯಕ್ಕೆ ತಿಳಿಸಿದರು.

