ನವದೆಹಲಿ: ಕೇಂದ್ರ ಪ್ರೌಢ ಶಿಕ್ಷಣ ಮಂಡಳಿಯು (ಸಿಬಿಎಸ್ಇ) 9ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರಸಕ್ತ ಸಾಲಿನಿಂದ ತೃತೀಯ ಭಾಷೆ ಕಡ್ಡಾಯಗೊಳಿಸಿರುವ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಕೇಂದ್ರ ಸರ್ಕಾರ, ಸಿಬಿಎಸ್ಇ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನಾ ಮತ್ತು ತರಬೇತಿ ಪರಿಷತ್ಗೆ (ಎನ್ಸಿಇಆರ್ಟಿ) ಸೂಚಿಸಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಾಲ್ಯ ಬಾಗ್ಚಿ, ವಿಪುಲ್ ಎಂ. ಪಂಚೋಲಿ ಅವರ ಪೀಠ ಈ ಕುರಿತು ವಿಚಾರಣೆ ನಡೆಸಿತು.
ಹೊಸ ನಿಯಮ ಜಾರಿಗೆ ಹಮ್ಮಿಕೊಂಡಿರುವ ಲಾಜಿಸ್ಟಿಕ್ ಯೋಜನೆ ಕುರಿತ ವರದಿ ಸಲ್ಲಿಸುವಂತೆ ಪೀಠವು, ಕೇಂದ್ರದ ಪರ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯಾ ಭಾಟಿ ಅವರಿಗೆ ಹೇಳಿತು.
ಅರ್ಜಿದಾರರ ಪರ ವಾದಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, 'ಈ ವಿಷಯವ ಕೆಲ ಮಹತ್ವದ ಸಾಂವಿಧಾನಿಕ ಪ್ರಶ್ನೆಗಳನ್ನು ಒಳಗೊಂಡಿದೆ. ಆದಾಗ್ಯೂ, ತೃತೀಯ ಭಾಷೆಗೆ ಸಂಬಂಧಿಸಿದ ಪಠ್ಯ ಪುಸ್ತಕಗಳು ಇಲ್ಲಿಯವರೆಗೆ ಲಭ್ಯವಾಗಿಲ್ಲ' ಎಂದು ಹೇಳಿದರು.
'ಈ ವಿಷಯವು ಫೆಡರಲ್ ಸಮಸ್ಯೆಗಳಿಗೆ ಕಾರಣವಾಗಲಿದೆ' ಎಂದು ವಾದಿಸಿದ ಅವರು, ಭಾಷೆಯ ಕಲಿಕೆ ಎಂಬುದು ಆಯ್ಕೆಯ ವಿಷಯವಾಗಬೇಕೇ ಹೊರತು ಕಡ್ಡಾಯವಾಗಬಾರದು ಎಂದರು.
ತ್ರಿಭಾಷಾ ಸೂತ್ರವನ್ನು ಸಿಬಿಎಸ್ಇ ಜುಲೈ 1ರಿಂದಲೇ ಜಾರಿಗೊಳಿಸಲು ನಿರ್ಧರಿಸಿದ್ದು, ಅದಕ್ಕೆ ತಡೆ ನೀಡುವಂತೆ ಅರ್ಜಿದಾರರ ಪರ ವಕೀಲರು ಕೋರಿದರು. ಆದರೆ, ಮಧ್ಯಂತರ ಆದೇಶ ಹೊರಡಿಸಲು ನಿರಾಕರಿಸಿದ ಪೀಠ, ವಿಚಾರಣೆಯನ್ನು ಜುಲೈ ಎರಡನೇ ವಾರಕ್ಕೆ ಮುಂದೂಡಿತು.

