ಸೇಲಂ: ಎಐಎಡಿಎಂಕೆಯಲ್ಲಿ ಆಂತರಿಕ ಕಲಹ ಮತ್ತಷ್ಟು ತೀವ್ರಗೊಂಡಿರುವ ಬೆನ್ನಿಗೇ ಪಕ್ಷಕ್ಕೆ ಮತ್ತೊಂದು ಪ್ರಮುಖ ಹಿನ್ನಡೆಯಾಗಿದ್ದು, ಹಿರಿಯ ನಾಯಕ ಎಸ್.ಸೆಮ್ಮಲೈ ಅವರು ಸೋಮವಾರ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಸೆಮ್ಮಲೈ ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ಪಕ್ಷದೊಳಗೆ ಬೆಳೆಯುತ್ತಿರುವ ಬಣ ರಾಜಕಾರಣದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ನಿಧನರಾದ ಬಳಿಕ ತನಗೆ ಅವಕಾಶಗಳ ಕೊರತೆಯೂ ಇದೆ ಎಂದೂ ಅವರು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾದ ಬೆನ್ನಿಗೇ ಪಕ್ಷದೊಳಗೆ ನಡೆಯುತ್ತಿರುವ ಬೆಳವಣಿಗೆಗಳು ಪಕ್ಷದ ಕಾರ್ಯಕರ್ತರಲ್ಲಿ ತೀವ್ರ ಆಕ್ರೋಶವನ್ನುಂಟು ಮಾಡಿದೆ ಎಂದು ಅವರು ಹೇಳಿದ್ದಾರೆ.
"ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯ ಬಳಿಕ ಎಐಎಡಿಎಂಕೆಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಪಕ್ಷದ ಕಾರ್ಯಕರ್ತರಲ್ಲಿ ತೀವ್ರ ಆಕ್ರೋಶವನ್ನುಂಟು ಮಾಡಿದೆ. ನಾನು ಈ ಪಕ್ಷಕ್ಕಾಗಿ ತಮ್ಮನ್ನೇ ಮುಡುಪಾಗಿಟ್ಟುಕೊಂಡಿರುವ ಲಕ್ಷಾಂತರ ಕಾರ್ಯಕರ್ತರ ಭಾವನೆಗಳನ್ನು ಹಂಚಿಕೊಳ್ಳುತ್ತಿದ್ದೇನೆ" ಎಂದೂ ಅವರು ತಮ್ಮ ಪತ್ರದಲ್ಲಿ ಬೊಟ್ಟು ಮಾಡಿದ್ದಾರೆ.
ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಅಹಂಕಾರಿ ನಾಯಕರಿಂದ ಪಕ್ಷ ನಿರಂತರವಾಗಿ ದುರ್ಬಲಗೊಳ್ಳುತ್ತಲೇ ಸಾಗಿದೆ" ಎಂದು ದೂಷಿಸಿದರು.
ಇದೇ ವೇಳೆ ಅವರು ಇನ್ನಾವುದೇ ಇತರೆ ಪಕ್ಷ ಸೇರ್ಪಡೆಯಾಗುವ ಸಾಧ್ಯತೆಯನ್ನು ಅವರು ತಳ್ಳಿ ಹಾಕಿದರು.

