ನವದೆಹಲಿ: ಒಮಾನ್ ಕರಾವಳಿಯಲ್ಲಿ ಭಾರತದ ಧ್ವಜ ಹೊಂದಿದ್ದ ವಾಣಿಜ್ಯ ಹಡಗಿನ ಮೇಲೆ ದಾಳಿ ನಡೆದಿದೆ. ಆದರೆ, ಹಡಗಿನಲ್ಲಿದ್ದ ಎಲ್ಲಾ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಂಇಎ) ತಿಳಿಸಿದೆ.
ಈ ದಾಳಿಯನ್ನು ಯಾರು ನಡೆಸಿದ್ದಾರೆ ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಆದರೆ, ಇದು ಸ್ವೀಕಾರಾರ್ಹವಲ್ಲ ಎಂದು ವಿದೇಶಾಂಗ ಸಚಿವಾಲಯ ಖಂಡಿಸಿದೆ.
'ಒಮಾನ್ ಕರಾವಳಿಯಲ್ಲಿ ಭಾರತದ ಧ್ವಜ ಹೊಂದಿದ್ದ ಹಡಗಿನ ಮೇಲೆ ನಡೆದ ದಾಳಿಯು ಸ್ವೀಕಾರಾರ್ಹವಲ್ಲ. ವಾಣಿಜ್ಯ ಹಡಗುಗಳು ಮತ್ತು ಸಿಬ್ಬಂದಿಯನ್ನು ಗುರಿಯಾಗಿಸಿಕೊಳ್ಳುತ್ತಿರುವುದನ್ನು ನಾವು ಬಲವಾಗಿ ಖಂಡಿಸುತ್ತೇವೆ. ಹಾಗೆಯೇ ಹಡಗಿನಲ್ಲಿದ್ದ ಎಲ್ಲಾ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಅವರನ್ನು ರಕ್ಷಿಸಿದ ಒಮಾನ್ ಅಧಿಕಾರಿಗಳಿಗೆ ನಾವು ಧನ್ಯವಾದ ಸಲ್ಲಿಸುತ್ತೇವೆ' ಎಂದು ಎಂಇಎ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದೆ.
'ವಾಣಿಜ್ಯ ಹಡಗುಗಳನ್ನು ಗುರಿಯಾಗಿಸುವುದು, ಸಿಬ್ಬಂದಿಯ ಪ್ರಾಣಕ್ಕೆ ಅಪಾಯ ತರುವುದು ಅಥವಾ ನೌಕಾಯಾನಕ್ಕೆ ಅಡ್ಡಿಪಡಿಸುವುದನ್ನು ತಪ್ಪಿಸಬೇಕು ಎಂದು ಭಾರತ ಪುನರುಚ್ಚರಿಸುತ್ತದೆ' ಎಂದು ಸಚಿವಾಲಯ ತಿಳಿಸಿದೆ.

