ನವದೆಹಲಿ: ಅಸ್ಸಾಂ, ಕೇರಳ, ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿರುವ ಬಹುಪಾಲು ಕಾಂಗ್ರೆಸ್ ಅಭ್ಯರ್ಥಿಗಳು ಮುಸ್ಲಿಮರಾಗಿದ್ದಾರೆ.
ಅಸ್ಸಾಂನಲ್ಲಿ ಕಾಂಗ್ರೆಸ್ ಗೆದ್ದಿರುವ 19 ಶಾಸಕರ ಪೈಕಿ 18 ಮಂದಿ ಮುಸ್ಲಿಮರು.
ರಾಜ್ಯದಲ್ಲಿ ಕಾಂಗ್ರೆಸ್ 20 ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಆ ಪೈಕಿ 18 ಮಂದಿ ಗೆದ್ದಿದ್ದಾರೆ. ಆದರೆ, ಪಕ್ಷವು ಕಣಕ್ಕಿಳಿಸಿದ್ದ 79 ಮುಸ್ಲಿಮೇತರ ಅಭ್ಯರ್ಥಿಗಳಲ್ಲಿ ಒಬ್ಬರು ಮಾತ್ರ ಗೆಲುವಿನ ನಗೆ ಬೀರಿದ್ದಾರೆ.
ಕಾಂಗ್ರೆಸ್ ಮಿತ್ರಪಕ್ಷವಾದ ರೈಜೋರ್ ದಳವು ಎರಡು ಸ್ಥಾನಗಳನ್ನು ಗೆದ್ದಿದ್ದು, ಅದರಲ್ಲಿ ಒಬ್ಬರು ಮುಸ್ಲಿಂ ಅಭ್ಯರ್ಥಿಯಾದರೆ, ಮತ್ತೊಬ್ಬರು ಅಖಿಲ್ ಗೊಗೊಯ್. ಮಾವೋವಾದಿಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಅಖಿಲ್ ಗೊಗೊಯ್ ವಿರುದ್ಧ ಎನ್ಐಎ ತನಿಖೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.
ಕೇರಳದಲ್ಲಿ 140 ಸದಸ್ಯರ ವಿಧಾನಸಭೆಗೆ 35 ಮುಸ್ಲಿಂ ಶಾಸಕರು ಆಯ್ಕೆಯಾಗಿದ್ದಾರೆ. ಈ ಪೈಕಿ 30 ಶಾಸಕರು ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟಕ್ಕೆ ಸೇರಿದವರಾಗಿದ್ದಾರೆ.ಇವರಲ್ಲಿ ಎಂಟು ಕಾಂಗ್ರೆಸ್ ಶಾಸಕರು ಮುಸ್ಲಿಮರಾಗಿದ್ದು, ಉಳಿದ 22 ಮಂದಿ ಮಿತ್ರಪಕ್ಷವಾದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ನವರಾಗಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಎರಡು ಸ್ಥಾನಗಳನ್ನು ಗೆದ್ದಿದ್ದು, ಇಬ್ಬರೂ ಮುಸ್ಲಿಂ ಪ್ರಾಬಲ್ಯದ ಕ್ಷೇತ್ರಗಳಿಂದ ಬಂದ ಮುಸ್ಲಿಂ ಅಭ್ಯರ್ಥಿಗಳಾಗಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಮುಸ್ಲಿಮರಿಗೆ ಟಿಕೆಟ್ ನೀಡುವ ವಿಚಾರದಲ್ಲಿ ಕಾಂಗ್ರೆಸ್ ಪಕ್ಷವು ಟಿಎಂಸಿಯನ್ನು ಹಿಂದಿಕ್ಕಿತ್ತು. ಕಾಂಗ್ರೆಸ್ 63 ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದ್ದರೆ, ಟಿಎಂಸಿ 47 ಮುಸ್ಲಿಂ ಅಭ್ಯರ್ಥಿಗಳಿಗೆ ಮಣೆ ಹಾಕಿತ್ತು.
ತಮಿಳುನಾಡಿನಲ್ಲಿ ಕಾಂಗ್ರೆಸ್ ಇಬ್ಬರು ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿತ್ತು. ಆ ಪೈಕಿ ಒಬ್ಬರು ಗೆದ್ದಿದ್ದಾರೆ.
ಕೇರಳ ಮತ್ತು ಅಸ್ಸಾಂ ಎರಡರಲ್ಲೂ ಕಾಂಗ್ರೆಸ್ ಮೈತ್ರಿಕೂಟದಿಂದ ಕಣಕ್ಕಿಳಿದಿದ್ದ ಶೇಕಡ 80ರಷ್ಟು ಮುಸ್ಲಿಂ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪಶ್ಚಿಮ ಬಂಗಾಳದಲ್ಲಿ 206 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಇತಿಹಾಸ ಸೃಷ್ಟಿಸಿದ್ದು, ಟಿಎಂಸಿಯ 15 ವರ್ಷಗಳ ಆಡಳಿತವನ್ನು ಅಂತ್ಯಗೊಳಿಸಿ ಮೂರನೇ ಎರಡರಷ್ಟು ಬಹುಮತವನ್ನು ಪಡೆದಿದೆ.
ಅಸ್ಸಾಂನಲ್ಲಿ ಆಡಳಿತಾರೂಢ ಎನ್ಡಿಎ ಒಕ್ಕೂಟವು 126 ಸದಸ್ಯರ ವಿಧಾನಸಭೆಯಲ್ಲಿ ದಾಖಲೆಯ 102 ಸ್ಥಾನಗಳನ್ನು ಪಡೆಯುವ ಮೂಲಕ ಸತತ ಮೂರನೇ ಅವಧಿಗೆ ಸರ್ಕಾರ ರಚಿಸಲು ಸಜ್ಜಾಗಿದೆ.
ತಮಿಳುನಾಡಿನಲ್ಲಿ ನಟ, ರಾಜಕಾರಣಿ ವಿಜಯ್ ನೇತೃತ್ವದ ಟಿವಿಕೆ ಪಕ್ಷವು ಚುನಾವಣಾ ಇತಿಹಾಸದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು, ಅಧಿಕಾರದಲ್ಲಿದ್ದ ಡಿಎಂಕೆಗೆ ಆಘಾತಕಾರಿ ಸೋಲುಣಿಸಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
ಕೇರಳದಲ್ಲಿ ಮತದಾರರು ಎಡಪಂಥೀಯ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಿದ್ದು, 10 ವರ್ಷಗಳ ನಂತರ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಮರಳುವ ಮೂಲಕ ರಾಜಕೀಯ ಬದಲಾವಣೆಗೆ ಸಾಕ್ಷಿಯಾಗಿದೆ.

