ತಿರುವನಂತಪುರಂ/ನವದೆಹಲಿ: 2026ರ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಆಯ್ಕೆ ಕುರಿತ ಚಟುವಟಿಕೆಗಳು ತೀವ್ರಗೊಂಡಿವೆ.
ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ವಿ.ಡಿ. ಸತೀಶನ್ ಮತ್ತು ರಮೇಶ್ ಚೆನ್ನಿತ್ತಲ ಶುಕ್ರವಾರ ಹೊಸದಿಲ್ಲಿಗೆ ಆಗಮಿಸಿದ್ದು, ಎಐಸಿಸಿ ಹೈಕಮಾಂಡ್ ಜತೆ ಮಹತ್ವದ ಸಮಾಲೋಚನೆಗಳು ಇಂದು ನಡೆಯಲಿವೆ.102 ಸ್ಥಾನಗಳನ್ನು ಗೆದ್ದಿರುವ ಯುಡಿಎಫ್ನಲ್ಲಿ ಮುಖ್ಯಮಂತ್ರಿ ಹುದ್ದೆಗೆ ವಿರೋಧ ಪಕ್ಷದ ಮಾಜಿ ನಾಯಕ ವಿ.ಡಿ. ಸತೀಶನ್ ಪ್ರಮುಖ ಆಕಾಂಕ್ಷಿಯಾಗಿ ಹೊರಹೊಮ್ಮಿದ್ದಾರೆ. ಎಲ್ಡಿಎಫ್ ಸರ್ಕಾರದ ಅವಧಿಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದ ಅವರು, ಪಕ್ಷದ ಸಂಘಟನೆ ಮತ್ತು ಮೈತ್ರಿ ಬಲವರ್ಧನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಹಿರಿಯ ಕಾಂಗ್ರೆಸ್ ನಾಯಕ ರಮೇಶ್ ಚೆನ್ನಿತ್ತಲ ಕೂಡ ಹೊಸದಿಲ್ಲಿಗೆ ತೆರಳಿದ್ದು, ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ಮುಂದುವರಿದಂತೆ ಕೇರಳದ ಹಲವು ಕಾಂಗ್ರೆಸ್ ನಾಯಕರು ಎಐಸಿಸಿ ಸದಸ್ಯರನ್ನು ಭೇಟಿಯಾಗಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಕಾಂಗ್ರೆಸ್ ನಾಯಕ ಕೆ.ಪಿ. ನೌಶಾದ್ ಮಾತನಾಡಿ, "ಇಲ್ಲಿಯವರೆಗೆ ಸಾಕಷ್ಟು ರಾಜಕೀಯ ಬೆಳವಣಿಗೆಗಳು ನಡೆದಿವೆ. ಕೇರಳದಲ್ಲಿಯೂ ಕೆಲವು ಆಂತರಿಕ ಪ್ರಕ್ರಿಯೆಗಳು ನಡೆಯುತ್ತಿವೆ. ದಿಲ್ಲಿಯಲ್ಲಿ ಮಹತ್ವದ ಹೆಜ್ಜೆಗಳು ಇಡಲಾಗಲಿದ್ದು, ಶೀಘ್ರದಲ್ಲೇ ಅಂತಿಮ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ. ವಿರೋಧ ಪಕ್ಷದ ನಾಯಕ ಹಾಗೂ ಯುಡಿಎಫ್ ಅಧ್ಯಕ್ಷರಾಗಿ ವಿ.ಡಿ. ಸತೀಶನ್ ನೀಡಿರುವ ಕೊಡುಗೆ ಮಹತ್ವದ್ದಾಗಿದೆ. ಇದರಿಂದ ಅವರು ಸಹಜವಾಗಿಯೇ ಪ್ರಮುಖ ಅಭ್ಯರ್ಥಿಯಾಗಿ ಕಾಣಿಸಿಕೊಂಡಿದ್ದಾರೆ" ಎಂದರು.
ಕೇರಳ ಕಾಂಗ್ರೆಸ್ ಅಧ್ಯಕ್ಷ ಸನ್ನಿ ಜೋಸೆಫ್ ಪ್ರತಿಕ್ರಿಯಿಸಿ, "ಪಕ್ಷದೊಳಗಿನ ಪ್ರಜಾಪ್ರಭುತ್ವ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಹೈಕಮಾಂಡ್ ಅಧಿಕೃತ ಘೋಷಣೆ ಮಾಡಲಿದೆ" ಎಂದು ಹೇಳಿದರು.
ಯುಡಿಎಫ್ ಗೆಲುವಿನ ಬಳಿಕ ಮುಖ್ಯಮಂತ್ರಿ ಹುದ್ದೆಗಾಗಿ ಪಕ್ಷದೊಳಗಿನ ಚಟುವಟಿಕೆಗಳು ಮತ್ತಷ್ಟು ಚುರುಕುಗೊಂಡಿವೆ. ಗುರುವಾರ ವಿ.ಡಿ. ಸತೀಶನ್ ಅವರಿಗೆ ಬೆಂಬಲ ಸೂಚಿಸಿ ಕಾಂಗ್ರೆಸ್ ಕಾರ್ಯಕರ್ತರು ಪಲಾಯಂ ಹುತಾತ್ಮರ ಸ್ಮಾರಕದಿಂದ ಮೆರವಣಿಗೆ ನಡೆಸಿದರು.
ಇದೇ ವೇಳೆ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರ ಪೋಸ್ಟರ್ಗಳು ತಿರುವನಂತಪುರದ ಪ್ರಮುಖ ರಸ್ತೆಗಳಲ್ಲಿ ಕಾಣಿಸಿಕೊಂಡಿದ್ದು, ಮುಖ್ಯಮಂತ್ರಿ ಹುದ್ದೆಯ ಸ್ಪರ್ಧೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ ನೀಡಿದೆ.

