ಚೆನ್ನೈ: 'ಟಿವಿಕೆ ಮುಖ್ಯಸ್ಥ ವಿಜಯ್ ಅವರಿಗೆ ಸರ್ಕಾರ ರಚಿಸಲು ಸಾಧ್ಯವಾಗದಿದ್ದರೆ ನಮ್ಮ ಮಿತ್ರಪಕ್ಷಗಳೊಂದಿಗೆ ಚರ್ಚಿಸಿ ಸರ್ಕಾರ ರಚಿಸುವ ಬಗ್ಗೆ ಚಿಂತನೆ ನಡೆಸುತ್ತೇವೆ' ಎಂದು ಡಿಎಂಕೆ ವಕ್ತಾರ ಟಿಕೆಎಸ್ ಇಳಂಗೋವನ್ ತಿಳಿಸಿದ್ದಾರೆ.
ಡಿಎಂಕೆ ಮತ್ತು ಎಐಎಡಿಎಂಕೆ ನಡುವೆ ಮೈತ್ರಿ ಏರ್ಪಡುವ ಸಾಧ್ಯತೆ ಇದೆಯೇ?
ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, 'ನನಗೆ ಗೊತ್ತಿಲ್ಲ. ಸದ್ಯಕ್ಕೆ ಅಂತಹ ಯಾವುದೇ ಆಲೋಚನೆ ಇಲ್ಲ' ಎಂದು ತಿಳಿಸಿದ್ದಾರೆ.
'ಬಹುಮತ ಸಾಬೀತುಪಡಿಸಲು ವಿಜಯ್ ಅವರಿಗೆ ರಾಜ್ಯಪಾಲರು ಮೇ 10ರವರೆಗೆ ಸಮಯ ನೀಡಿದ್ದಾರೆ. ನಾವು ಅಲ್ಲಿಯವರೆಗೆ ಕಾಯಬೇಕು. ಒಂದು ವೇಳೆ ಅವರಿಗೆ (ವಿಜಯ್) ಸರ್ಕಾರ ರಚಿಸಲು ಸಾಧ್ಯವಾಗದಿದ್ದರೆ, ನಾವು ಆ ಬಗ್ಗೆ ಮರುಚಿಂತನೆ ನಡೆಸಿ ನಮ್ಮ ಮಿತ್ರಪಕ್ಷಗಳೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ' ಎಂದಿದ್ದಾರೆ.
ಮುಂದುವರಿದು, 'ಟಿವಿಕೆ ಬಳಿ ಸದ್ಯ 112 ಶಾಸಕರಿದ್ದಾರೆ. ಸರ್ಕಾರ ರಚಿಸಲು ಅವರು ಸತತ ಪ್ರಯತ್ನ ಮಾಡುತ್ತಿದ್ದಾರೆ. ಏನಾಗುತ್ತದೆ ಎಂದು ನೋಡೋಣ. ಅದರ ನಂತರವಷ್ಟೇ ನಾವು ಪರ್ಯಾಯ ವ್ಯವಸ್ಥೆಯ ಬಗ್ಗೆ ಯೋಚಿಸಬಹುದು' ಎಂದು ಹೇಳಿದ್ದಾರೆ.
ಇತ್ತೀಚೆಗೆ ಮುಕ್ತಾಯಗೊಂಡ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಟಿವಿಕೆ 108 ಸ್ಥಾನಗಳನ್ನು ಪಡೆದುಕೊಂಡಿದೆ. ವಿಜಯ್ ಅವರು ನಿಂತ ಎರಡೂ ಕ್ಷೇತ್ರಗಳಲ್ಲಿ ಗೆದ್ದಿದ್ದು, ಒಂದು ಕ್ಷೇತ್ರವನ್ನು ಬಿಟ್ಟುಕೊಡಬೇಕಾಗಿದೆ. ಕಾಂಗ್ರೆಸ್ 5 ಸೀಟು ಗೆದ್ದುಕೊಂಡಿದ್ದು, ಟಿವಿಕೆಗೆ ಬೆಂಬಲ ಕೊಡುವುದಾಗಿ ಘೋಷಿಸಿದೆ.
ವಿಸಿಕೆ ಮತ್ತು ಎಡಪಕ್ಷಗಳ ಬೆಂಬಲವನ್ನು ವಿಜಯ್ ಕೋರಿದ್ದು, ಇನ್ನಷ್ಟೇ ನಿರ್ಧಾರ ಹೊರಬರಬೇಕಾಗಿದೆ.

