ತಿರುವನಂತಪುರಂ: 'ಕೇರಳಂನ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ನಿವಾಸಕ್ಕೆ ಇ.ಡಿ ಅಧಿಕಾರಿಗಳು ತನಿಖೆಗೆ ಬಂದ ಸಂದರ್ಭದಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸಿ, ದಾಂದಲೆ ನಡೆಸಿದ ಆರೋಪದಲ್ಲಿ ಇದುವರೆಗೆ 8 ಮಂದಿಯನ್ನು ಬಂಧಿಸಲಾಗಿದೆ' ಎಂದು ಕೇರಳಂ ಡಿಜಿಪಿ ರಾವಡ ಎ.ಚಂದ್ರಶೇಖರ್ ಗುರುವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಕೇರಳಂನ ಗೃಹ ಸಚಿವ ರಮೇಶ್ ಚೆನ್ನಿತ್ತಲ ಅವರ ನಿವಾಸದಲ್ಲಿ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಜಿಪಿ, 'ಬುಧವಾರದ ದಾಂದಲೆ ಪ್ರಕರಣದ ತನಿಖೆ ಸರಿಯಾಗಿ ದಿಕ್ಕಿನಲ್ಲಿ ನಡೆಯುತ್ತಿದೆ. ಗಲಭೆಗೆ ಕಾರಣವಾದ ಇನ್ನಷ್ಟು ಜನರನ್ನು ಶೀಘ್ರದಲ್ಲೇ ಬಂಧಿಸಲಾಗುವುದು. ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರು ಸೂಚಿಸಿದ್ದಾರೆ' ಎಂದರು.
'ಪಿಣರಾಯಿ ನಿವಾಸದ ಮೇಲೆ ದಾಳಿ ನಡೆಸುತ್ತಿರುವ ಬಗ್ಗೆ ಇ.ಡಿ ಅಧಿಕಾರಿಗಳು ನಮಗೆ ಮುಂಚಿತವಾಗಿ ಮಾಹಿತಿ ನೀಡಿರಲಿಲ್ಲ. ಆದರೆ, ಅಲ್ಲಿ ಕಲ್ಲುತೂರಾಟ ವರದಿಯಾದ ಕೂಡಲೇ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಯಿತು. ಭದ್ರತಾ ಸಿಬ್ಬಂದಿ ಮೇಲಿನ ಹಲ್ಲೆ ಸೇರಿ ಗಲಭೆಗೆ ಕಾರಣವಾದ ಒಟ್ಟು 300ರ ಜನರ ವಿರುದ್ಧ ಇಲ್ಲಿನ ಮ್ಯೂಸಿಯಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ' ಎಂದು ಡಿಜಿಪಿ ಹೇಳಿದರು.
ಕಾನೂನುಬಾಹಿರವಾಗಿ ಸಭೆ ನಡೆಸುವುದು, ಗಲಭೆ, ಸರ್ಕಾರಿ ನೌಕರರ ಮೇಲಿನ ಹಲ್ಲೆ, ಕೊಲೆಗೆ ಯತ್ನ ಸೇರಿದಂತೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾದ ಬಿಎನ್ಎಸ್ನ ವಿವಿಧ ಸೆಕ್ಷನ್ಗಳಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

