ನವದೆಹಲಿ: ಕಾಂಗ್ರೆಸ್ ಜೊತೆಗಿನ ಮೈತ್ರಿ ಅಂತ್ಯಗೊಂಡಿರುವ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ತನ್ನ ಸಂಸದರ ಆಸನ ವ್ಯವಸ್ಥೆಯನ್ನು ಬದಲಾಯಿಸುವಂತೆ ಡಿಎಂಕೆ ಶುಕ್ರವಾರ ಸ್ಪೀಕರ್ ಅವರಿಗೆ ಅಧಿಕೃತವಾಗಿ ಪತ್ರ ಬರೆದಿದೆ.
ಡಿಎಂಕೆ ನಾಯಕಿ ಮತ್ತು ಸಂಸದೆ ಕನಿಮೊಳಿ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದಾರೆ.
ಬದಲಾಗಿರುವ ರಾಜಕೀಯ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಸದಸ್ಯರ ಪಕ್ಕದಲ್ಲಿ ಕುಳಿತುಕೊಳ್ಳುವುದು ಸೂಕ್ತವಲ್ಲ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಕಾಂಗ್ರೆಸ್ ಮತ್ತು ಡಿಎಂಕೆ ನಡುವಿನ ಮೈತ್ರಿ ಮುರಿದುಬಿದ್ದಿರುವುದರಿಂದ ಲೋಕಸಭೆಯಲ್ಲಿ ಡಿಎಂಕೆ ಸಂಸದರಿಗೆ ಪ್ರತ್ಯೇಕ ಆಸನ ವ್ಯವಸ್ಥೆಯನ್ನು ಕಲ್ಪಿಸಿಕೊಡಬೇಕು. ಇದರಿಂದ ಸದನದಲ್ಲಿ ನಮ್ಮ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಲು ಅನುಕೂಲವಾಗುತ್ತದೆ ಎಂದು ಕನಿಮೊಳಿ ವಿನಂತಿಸಿದ್ದಾರೆ.
ಚುನಾವಣೆಯಲ್ಲಿ ಕೇವಲ ಐದು ಸ್ಥಾನಗಳನ್ನು ಗೆದ್ದಿದ್ದ ಕಾಂಗ್ರೆಸ್, ಸರ್ಕಾರ ರಚನೆಯ ವಿಷಯದಲ್ಲಿ ಡಿಎಂಕೆ ವಿರೋಧಿಯಾದ ಟಿವಿಕೆ ಪಕ್ಷಕ್ಕೆ ಬೆಂಬಲ ಸೂಚಿಸಿದೆ. ಕಾಂಗ್ರೆಸ್ನ ಈ ನಡೆಯಿಂದ ಮೈತ್ರಿ ಮುರಿದು ಬಿದ್ದಿದೆ.
ಚುನಾವಣೆ ಪೂರ್ವದಲ್ಲಿ ಮೈತ್ರಿ ಮಾಡಿಕೊಂಡ ಕಾಂಗ್ರೆಸ್ ನಂಬಿಕೆ ದ್ರೋಹ ಮಾಡಿದೆ ಎಂದು ಡಿಎಂಕೆ ನಾಯಕರು ಟೀಕಿಸಿದ್ದಾರೆ. 2014ರ ಚುನಾವಣೆಯಲ್ಲಿ ಡಿಎಂಕೆ ಕೂಡ ಏಕಾಂಗಿಯಾಗಿ ಸ್ಪರ್ಧಿಸಿತ್ತು, ನಮ್ಮ ನಡೆ ಸರಿಯಾಗಿದೆ ಎಂದು ಕಾಂಗ್ರೆಸ್ ತನ್ನ ನಿಲುವನ್ನು ಸಮರ್ಥಿಸಿಕೊಂಡಿದೆ.

