ಉತ್ತರ ಪ್ರದೇಶದ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ಇನ್ನುಮುಂದೆ ಸಮವಸ್ತ್ರ ಧರಿಸುವುದು ಕಡ್ಡಾಯ ಎಂದು ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ನಿರ್ದೇಶನ ನೀಡಿದ್ದಾರೆ.
ಇದುವರೆಗೆ, ಶಾಲೆಗಳಲ್ಲಿ ಮಾತ್ರ ಈ ನಿಯಮ ಜಾರಿಯಲ್ಲಿತ್ತು.
ವಿಶ್ವವಿದ್ಯಾಲಯ ಮತ್ತು ಕಾಲೇಜು ವಿದ್ಯಾರ್ಥಿಗಳು ಸಮವಸ್ತ್ರ ಧರಿಸಬೇಕು ಎಂಬ ನಿಯಮ ಇರಲಿಲ್ಲ. ಆದರೆ, ಈಗ ರಾಜ್ಯಾದ್ಯಂತ ಎಲ್ಲಾ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಿಗೆ ಅನ್ವಯವಾಗುವಂತೆ, ಸಮವಸ್ತ್ರ ವ್ಯವಸ್ಥೆಯನ್ನು ಜಾರಿಗೆ ತರಲು ಉತ್ತರ ಪ್ರದೇಶ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ನಿರ್ದೇಶನ ನೀಡಿದ್ದಾರೆ.
ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ, ಕುಲಪತಿಗಳು ಸಮವಸ್ತ್ರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಆದೇಶ ಹೊರಡಿಸಿದರು. ಶಾಲೆಗಳಂತೆಯೇ ಸಮವಸ್ತ್ರ ವ್ಯವಸ್ಥೆಯನ್ನು ಪರಿಚಯಿಸುವುದರಿಂದ ವಿದ್ಯಾರ್ಥಿಗಳಲ್ಲಿ ತಾರತಮ್ಯ ಅಥವಾ ಸಾಮಾಜಿಕ ಭಿನ್ನತೆಗಳು ಕಡಿಮೆಯಾಗುತ್ತವೆ ಎಂದು ಅವರು ಹೇಳಿದರು.
ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಉದ್ಯೋಗ ಆಧಾರಿತ ಶಿಕ್ಷಣ ಪರಿಚಯಿಸುವ ಅಗತ್ಯವನ್ನು ರಾಜ್ಯಪಾಲರು ಒತ್ತಿ ಹೇಳಿದರು. ಮಾತ್ರವಲ್ಲ, ವಿಶ್ವವಿದ್ಯಾಲಯಗಳು ಹೊಸ ವೃತ್ತಿಪರ ಕೋರ್ಸ್ಗಳನ್ನು ಪ್ರಾರಂಭಿಸಲು ನಿರ್ದೇಶನ ನೀಡಿದರು. ಈ ಉಪಕ್ರಮವು ಮಹಿಳೆಯರಲ್ಲಿ ಸ್ವಾವಲಂಬಿಗಳಾಗಲು ಸಹಾಯ ಮಾಡುತ್ತದೆ ಎಂದಿದ್ದಾರೆ.
ಮಹಿಳಾ ವಿದ್ಯಾರ್ಥಿಗಳನ್ನು ಉದ್ಯೋಗ ಆಧಾರಿತ ಮತ್ತು ಸ್ವಾವಲಂಬಿಗಳನ್ನಾಗಿ ಮಾಡುವ ಉದ್ದೇಶದಿಂದ, ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ವೃತ್ತಿಪರ ಕೋರ್ಸ್ಗಳನ್ನು ಪ್ರಾರಂಭಿಸಲು ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಸೂಚನೆ ನೀಡಿದರು. ವಿದ್ಯಾರ್ಥಿಗಳು ಸ್ವಯಂ ಉದ್ಯೋಗ ಮತ್ತು ಉದ್ಯೋಗಗಳನ್ನು ಪಡೆಯಲು ಸಹಕಾರಿಯಾಗುವ ಬ್ಯೂಟಿಷಿಯನ್ ತರಬೇತಿ, ಮೆಹೆಂದಿ, ಬಿಂದಿ ತಯಾರಿಕೆ, ಲೆಕ್ಕಪತ್ರ ನಿರ್ವಹಣೆ ಮತ್ತು ರಾಗಿ ಆಧಾರಿತ ಆಹಾರ ತಯಾರಿಕೆಯಂತಹ ಕೋರ್ಸ್ಗಳನ್ನು ಪರಿಚಯಿಸಲು ಅವರು ಸಂಸ್ಥೆಗಳಿಗೆ ನಿರ್ದಿಷ್ಟವಾಗಿ ನಿರ್ದೇಶನ ನೀಡಿದರು.

