ತಿರುವನಂತಪುರಂ: ಇತ್ತೀಚೆಗೆ ನಡೆದ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿರುವ ಬೆನ್ನಲ್ಲೇ, ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ನೂತನ ಅಧ್ಯಕ್ಷರ ನೇಮಕ ಕುರಿತ ಚರ್ಚೆ ಪಕ್ಷದೊಳಗೆ ಆರಂಭವಾಗಿದೆ.
ಕೆಪಿಸಿಸಿ ಹಾಲಿ ಅಧ್ಯಕ್ಷ ಸನ್ನಿ ಜೋಸೆಫ್ ಅವರು ಮುಂಬರುವ ಯುಡಿಎಫ್ ಸರ್ಕಾರದ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ಅವರ ಉತ್ತರಾಧಿಕಾರಿಯನ್ನು ಆಯ್ಕೆ ಮಾಡುವ ಪ್ರಕ್ರಿಯೆ ಚುರುಕುಗೊಂಡಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ನಾಯಕರು ಹಾಗೂ ಸಂಸದರನ್ನು ಪಕ್ಷ ಪರಿಗಣಿಸುತ್ತಿದೆ ಎಂದು ವರದಿಯಾಗಿದೆ. ಈ ಹುದ್ದೆಗೆ ಮಾವೆಲಿಕರ ಸಂಸದ ಕೋಡಿಕುನ್ನಿಲ್ ಸುರೇಶ್, ಚಾಲಕುಡಿ ಸಂಸದ ಬೆನ್ನಿ ಬೆಹನನ್, ವಡಕರ ಸಂಸದ ಶಫಿ ಪರಾಂಬಿಲ್ ಹಾಗೂ ಪಟ್ಟಣಂತಿಟ್ಟ ಸಂಸದ ಆಯಂಟೊ ಆಯಂಟೊನಿ ಹೆಸರುಗಳು ಕೇಳಿಬರುತ್ತಿವೆ.
ಸನ್ನಿ ಜೋಸೆಫ್ ಅವರು ಪೆರವೂರ್ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದು, 2025ರ ಮೇ 8ರಂದು ಕಾಂಗ್ರೆಸ್ ನಾಯಕ ಕೆ. ಸುಧಾಕರನ್ ಬದಲಿಗೆ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕಗೊಂಡಿದ್ದರು.
ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸನ್ನಿ ಜೋಸೆಫ್ ಅವರು ಎಲ್ಡಿಎಫ್ ಅಭ್ಯರ್ಥಿ ಕೆ.ಕೆ. ಶೈಲಜಾ ಅವರನ್ನು ಪರಾಭವಗೊಳಿಸಿದ್ದರು. 140 ಸದಸ್ಯ ಬಲದ ಕೇರಳ ವಿಧಾನಸಭೆಯಲ್ಲಿ ಯುಡಿಎಫ್ ಮೈತ್ರಿಕೂಟ 102 ಸ್ಥಾನಗಳಲ್ಲಿ ಜಯಗಳಿಸಿರುವ ಹಿನ್ನೆಲೆಯಲ್ಲಿ, ಮುಂದಿನ ಸರ್ಕಾರದಲ್ಲಿ ಅವರು ಸಚಿವರಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಇದೇ ವೇಳೆ, ಚುನಾವಣಾ ಫಲಿತಾಂಶ ಪ್ರಕಟವಾಗಿ ಒಂದು ವಾರ ಕಳೆದರೂ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರನ್ನು ಅಂತಿಮಗೊಳಿಸಲು ಕಾಂಗ್ರೆಸ್ ನಾಯಕತ್ವಕ್ಕೆ ಸಾಧ್ಯವಾಗಿಲ್ಲ. ಮುಖ್ಯಮಂತ್ರಿ ಹುದ್ದೆಗೆ ಹಿರಿಯ ನಾಯಕರಾದ ವಿ.ಡಿ. ಸತೀಶನ್, ರಮೇಶ್ ಚೆನ್ನಿತ್ತಲ ಹಾಗೂ ಕೆ.ಸಿ. ವೇಣುಗೋಪಾಲ್ ನಡುವೆ ಪೈಪೋಟಿ ಏರ್ಪಟ್ಟಿದ್ದು, ಕೆ.ಸಿ. ವೇಣುಗೋಪಾಲ್ ಹೆಸರು ಮುಂಚೂಣಿಯಲ್ಲಿದೆ ಎಂದು ತಿಳಿದು ಬಂದಿದೆ.

