ಕೋಲ್ಕತ್ತ: ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಸೋಮವಾರ (ಮೇ.11) ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಬಾಂಗ್ಲಾದೇಶದ ಗಡಿಯಲ್ಲಿ ಬೇಲಿ ನಿರ್ಮಾಣ ಮಾಡಲು ಗಡಿ ಭದ್ರತಾ ಪಡೆಗೆ ಭೂಮಿ ಹಸ್ತಾಂತರಿಸಲು ಸಂಪುಟ ಒಪ್ಪಿಗೆ ನೀಡಿದೆ.
ಸಭೆಯ ಬಳಿಕ ಮಾತನಾಡಿದ ಮುಖ್ಯಮಂತ್ರಿ ಸುವೇಂದು ಅಧಿಕಾರಿ, 'ಬಾಂಗ್ಲಾ ಗಡಿಯಲ್ಲಿ ಬೇಲಿ ನಿರ್ಮಾಣಕ್ಕಾಗಿ ಬಿಎಸ್ಎಫ್ಗೆ ಭೂಮಿ ಹಸ್ತಾಂತರಿಸುವ ಪ್ರಕ್ರಿಯೆಗೆ ಇಂದಿನಿಂದಲೇ ಚಾಲನೆ ನೀಡಲಾಗುವುದು. ಮುಂದಿನ 45 ದಿನಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದೆ' ಎಂದು ತಿಳಿಸಿದರು.
ರಾಜ್ಯದಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ 'ಆಯುಷ್ಮಾನ್ ಭಾರತ್' ಆರೋಗ್ಯ ಯೋಜನೆ ಸೇರಿದಂತೆ ಕೇಂದ್ರದ ವಿವಿಧ ಯೋಜನೆಗಳನ್ನು ತಕ್ಷಣದಿಂದಲೇ ಜಾರಿಗೆ ತರಲು ಸಂಪುಟ ನಿರ್ಧರಿಸಿದೆ. ಈ ಮೂಲಕ ಈ ಹಿಂದೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ ಇದ್ದ ಯೋಜನೆಗಳ ಜಾರಿಯ ಬಿಕ್ಕಟ್ಟಿಗೆ ತೆರೆಬಿದ್ದಿದೆ.
ಚುನಾವಣಾ ಪ್ರಚಾರದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ್ದ ಭರವಸೆಯಂತೆ, ಶಾಲಾ ಶಿಕ್ಷಕರ ಹುದ್ದೆಯ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಐದು ವರ್ಷಗಳ ರಿಯಾಯಿತಿ ನೀಡಲು ಸಂಪುಟ ಅನುಮೋದನೆ ನೀಡಿದೆ. ಸಂವಿಧಾನ ಉಲ್ಲಂಘಿಸಿ ಹಿಂದಿನ ಸರ್ಕಾರ ಜಾರಿಗೆ ತರದಿದ್ದ ಭಾರತೀಯ ನ್ಯಾಯ ಸಂಹಿತೆಯನ್ನು (BNS) ರಾಜ್ಯದಲ್ಲಿ ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದೆ.
ಗೃಹ ಸಚಿವಾಲಯದ ಜೂನ್ 2025ರ ಜನಗಣತಿ ಸುತ್ತೋಲೆಯನ್ನು ಹಿಂದಿನ ಸರ್ಕಾರ ನಿರ್ಲಕ್ಷಿಸಿತ್ತು. ಈಗ ಅದನ್ನು ತಕ್ಷಣವೇ ಜಾರಿಗೆ ತರಲು ಸಂಪುಟ ಹಸಿರು ನಿಶಾನೆ ತೋರಿಸಿದೆ. ರಾಷ್ಟ್ರೀಯ ಮತ್ತು ರಾಜ್ಯ ಕೇಡರ್ ಅಧಿಕಾರಿಗಳಿಗೆ ಕೇಂದ್ರ ಸರ್ಕಾರದ ವತಿಯಿಂದ ತರಬೇತಿ ನೀಡುವ ಪ್ರಕ್ರಿಯೆಯನ್ನು ಆರಂಭಿಸಲು ಮುಖ್ಯ ಕಾರ್ಯದರ್ಶಿಯವರಿಗೆ ಪೂರ್ಣ ಅಧಿಕಾರ ನೀಡಲಾಗಿದೆ. ಬಾಂಗ್ಲಾ ಗಡಿಯಲ್ಲಿ ನುಸುಳುವಿಕೆಯನ್ನು ತಡೆಯಲು ಬೇಲಿ ನಿರ್ಮಾಣ ದಶಕಗಳ ಬೇಡಿಕೆಯಾಗಿತ್ತು. ಈಗಿನ ಸರ್ಕಾರದ ಈ ನಿರ್ಧಾರವು ಗಡಿ ಭದ್ರತೆಯ ದೃಷ್ಟಿಯಿಂದ ಅತ್ಯಂತ ಮಹತ್ವದ್ದೆಂದು ಪರಿಗಣಿಸಲಾಗಿದೆ.

