ನವದೆಹಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದೆ. ರಾಜ್ಯ ಸರ್ಕಾರದ ಮನವಿಯ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದ್ದು, ಕೇಂದ್ರ ತನಿಖಾ ಸಂಸ್ಥೆಯು ಹೊಸದಾಗಿ ಎಫ್ಐಆರ್ ದಾಖಲಿಸಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
ನಿಯಮದಂತೆ, ರಾಜ್ಯ ಪೊಲೀಸರು ದಾಖಲಿಸಿದ್ದ ಎಫ್ಐಆರ್ ಅನ್ನೇ ಆಧಾರವಾಗಿಟ್ಟುಕೊಂಡು ಸಿಬಿಐ ಮರು ಪ್ರಕರಣದ ಬಗ್ಗೆ ತನಿಖೆ ಆರಂಭಿಸಿದೆ. ತನಿಖೆಯ ಅಂತ್ಯದಲ್ಲಿ ಸಂಸ್ಥೆಯು ನ್ಯಾಯಾಲಯಕ್ಕೆ ಆರೋಪಪಟ್ಟಿ ಅಥವಾ ಪ್ರಕರಣದ ಅಂತಿಮ ವರದಿ ಸಲ್ಲಿಕೆ ಮಾಡಲಿದೆ.
ಈಗಾಗಲೇ ಹತ್ಯೆಗೆ ಸಂಬಂಧಿಸಿದಂತೆ ರಾಜ್ಯ ಪೊಲೀಸರು ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕಾರಿನಲ್ಲಿ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿಗಳು ಟೋಲ್ ಪ್ಲಾಜಾವೊಂದರಲ್ಲಿ ಯುಪಿಐ ಮೂಲಕ ಹಣ ಪಾವತಿಸಿದ್ದರು. ಈ ಡಿಜಿಟಲ್ ಪಾವತಿಯು ತನಿಖಾಧಿಕಾರಿಗಳಿಗೆ ಮೊಬೈಲ್ ಸಂಖ್ಯೆ ಮತ್ತು ಶಂಕಿತರ ಗುರುತನ್ನು ಪತ್ತೆಹಚ್ಚಲು ನೆರವಾಯಿತು. ಸದ್ಯ ಕೊಲೆಯಲ್ಲಿ ಕನಿಷ್ಠ ಎಂಟು ಜನರು ಭಾಗಿಯಾಗಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಬಂಧಿತರ ಮೇಲೆ ಭಾರತೀಯ ನ್ಯಾಯ ಸಂಹಿತೆಯ (BNS) ಅಡಿ ಹತ್ಯೆ, ಅಕ್ರಮ ಶಸ್ತ್ರಾಸ್ತ್ರಗಳ ಬಳಕೆ, ಕ್ರಿಮಿನಲ್ ಪಿತೂರಿ ಹಾಗೂ ಸಾಕ್ಷ್ಯ ನಾಶದ ಆರೋಪಗಳನ್ನು ಹೊರಿಸಲಾಗಿದೆ. ಈ ಕೊಲೆಯಲ್ಲಿ ಒಟ್ಟು ಎಂಟು ಮಂದಿ ಭಾಗಿಯಾಗಿರುವ ಶಂಕೆ ಇದ್ದು, ಹತ್ಯೆಗೂ ಮುನ್ನ ಆರೋಪಿಗಳು ರಥ್ ಅವರ ಚಲನವಲನದ ಬಗ್ಗೆ ಮಾಹಿತಿ ಕಲೆಹಾಕಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಮೇ 6ರಂದು ಉತ್ತರ 24 ಪರಗಣ ಜಿಲ್ಲೆಯ ಮಧ್ಯಮ್ಗ್ರಾಮ್ ಪ್ರದೇಶದ ಜೆಸ್ಸೋರ್ ರಸ್ತೆಯಲ್ಲಿ ಚಂದ್ರನಾಥ್ ರಥ್ ಹತ್ಯೆ ನಡೆದಿತ್ತು. ಆರೋಪಿಗಳ ಪತ್ತೆಗಾಗಿ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲಾಗಿತ್ತು. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ಎರಡು ದಿನಗಳ ನಂತರ ನಡೆದ ಈ ಘಟನೆಯನ್ನು ಬಿಜೆಪಿ ನಾಯಕರು ಯೋಜಿತ ಕೃತ್ಯ ಎಂದಿದ್ದರು.

