ನವದೆಹಲಿ: 'ನೀಟ್-ಯುಜಿ' ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ(ಎನ್ಟಿಎ) ಇನ್ನೂ ಪಾಠ ಕಲಿಯದಿರುವುದು ದುರದೃಷ್ಟಕರ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.
ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ಟಿಎ) ಅನ್ನು ಬಲಿಷ್ಠ ಮತ್ತು ಸ್ವಾಯತ್ತ ವ್ಯವಸ್ಥೆಯೊಂದಿಗೆ ಪುನರ್ರಚಿಸಲು ಅಥವಾ ಬದಲಾಯಿಸಲು ನಿರ್ದೇಶಿಸುವಂತೆ ಅಖಿಲ ಭಾರತ ವೈದ್ಯಕೀಯ ಸಂಘಗಳ ಒಕ್ಕೂಟ (ಎಫ್ಎಐಎಂಎ) ಸುಪ್ರೀಂ ಕೋರ್ಟ್ ಅನ್ನು ಕೋರಿತ್ತು.
ಈ ಸಂಬಂಧ ವಿಚಾರಣೆ ಕೈಗೆತ್ತಿಕೊಂಡಿರುವ ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಅಲೋಕ್ ಆರಾಧೆ ನೇತೃತ್ವದ ಪೀಠವು, ಸಂಬಂಧಪಟ್ಟವರಿಗೆ ನೋಟಿಸ್ ಜಾರಿ ಮಾಡಿದ್ದು, ಕೇಂದ್ರ, ಎನ್ಟಿಎ ಮತ್ತು ಸಿಬಿಐನಿಂದ ಪ್ರತಿಕ್ರಿಯೆ ಕೇಳಿದೆ.
ಅಲ್ಲದೆ 2024ರಲ್ಲಿ ನ್ಯಾಯಾಲಯದ ನಿರ್ದೇಶನದ ಕುರಿತು ತೆಗೆದುಕೊಂಡ ಕ್ರಮಗಳ ಕುರಿತು ಗುರುವಾರದೊಳಗೆ ಅಫಿಡವಿಟ್ ಸಲ್ಲಿಸುವಂತೆ ಎನ್ಟಿಎಗೆ ಆದೇಶಿಸಿದೆ.
ಮೇ 3ರಂದು ನಡೆದಿದ್ದ ನೀಟ್-ಯುಜಿ ಪರೀಕ್ಷೆ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ರದ್ದುಗೊಳಿಸಲಾಗಿತ್ತು. ಇದರಿಂದಾಗಿ 22 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ತೊಂದರೆಗೊಳಗಾಗಿದ್ದಾರೆ. ಪ್ರಕರಣ ಸಂಬಂಧ ಸಿಬಿಐ ತನಿಖೆ ನಡೆಯುತ್ತಿದೆ. ಜೂನ್ 21ರಂದು ಮರು ಪರೀಕ್ಷೆ ನಿಗದಿಯಾಗಿದೆ.

