ಕೊಲ್ಕತ್ತಾ: 2011ರಿಂದ ಪಶ್ಚಿಮ ಬಂಗಾಳದಲ್ಲಿ ನೀಡಲಾದ ಎಲ್ಲಾ ಜಾತಿ ಪ್ರಮಾಣಪತ್ರಗಳ ಮರು ಪರಿಶೀಲನೆ ನಡೆಸಲು ರಾಜ್ಯ ಸರಕಾರ ಆದೇಶಿಸಿದೆ.
ಹಿಂದಿನ ಆಡಳಿತದ ಅವಧಿಯಲ್ಲಿ ಜಾತಿ ಪ್ರಮಾಣಪತ್ರಗಳ ವಿತರಣೆಯಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.
ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಎಲ್ಲಾ ಜಿಲ್ಲಾ ಮ್ಯಾಜಿಸ್ಟ್ರೇಟ್ಗಳಿಗೆ ಪತ್ರ ಬರೆದು, ಮರು ಪರಿಶೀಲನೆ ಪ್ರಕ್ರಿಯೆಯನ್ನು ಆರಂಭಿಸುವಂತೆ ಸೂಚಿಸಿದೆ.
ಹಿಂದಿನ ಸರಕಾರದ ಅವಧಿಯಲ್ಲಿ ಪರಿಶಿಷ್ಟ ಜಾತಿ (ಎಸ್ಸಿ), ಪರಿಶಿಷ್ಟ ಪಂಗಡ (ಎಸ್ಟಿ) ಮತ್ತು ಇತರ ಹಿಂದುಳಿದ ವರ್ಗಗಳ (ಒಬಿಸಿ) ಹೆಸರಿನಲ್ಲಿ ನಕಲಿ ಹಾಗೂ ಅನಿಯಮಿತ ಜಾತಿ ಪ್ರಮಾಣಪತ್ರಗಳನ್ನು ನೀಡಲಾಗಿದೆ ಎಂಬ ಆರೋಪಗಳು ಕೇಳಿಬಂದಿದ್ದವು.
'ತೃಣಮೂಲ ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಕಲಿ ಮತ್ತು ಅನಿಯಮಿತ ಎಸ್ಸಿ, ಎಸ್ಟಿ ಹಾಗೂ ಒಬಿಸಿ ಪ್ರಮಾಣಪತ್ರಗಳನ್ನು ವಿತರಿಸಲಾಗಿದೆ. ಇವುಗಳ ಆಧಾರದಲ್ಲಿ ಅನೇಕರು ವಿವಿಧ ಸರಕಾರಿ ಸೌಲಭ್ಯಗಳು ಮತ್ತು ಮೀಸಲಾತಿ ಪ್ರಯೋಜನಗಳನ್ನು ಪಡೆದಿದ್ದಾರೆ' ಎಂದು ರಾಜ್ಯದ ಬುಡಕಟ್ಟು ಅಭಿವೃದ್ಧಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕ್ಷುದಿರಾಮ್ ತುಡು ಹೇಳಿದ್ದಾರೆ.
ಅಕ್ರಮ ಪ್ರಮಾಣಪತ್ರಗಳನ್ನು ನೀಡಲು ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಎಚ್ಚರಿಸಿದ್ದಾರೆ.

