ಗೋರಖ್ಪುರ: ಉತ್ತರ ಪ್ರದೇಶದ ಗೋರಖ್ಪುರದ ಚೌರಿ ಚೌರಾ ಪ್ರದೇಶದ ಭೋಪಾ ಕ್ರಾಸಿಂಗ್ ಬಳಿ ಶುಕ್ರವಾರ ಬೆಳಿಗ್ಗೆ ರಸ್ತೆ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಟ್ರಕ್ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದು, ಅವರ ಏಳು ವರ್ಷದ ಮಗ ತೀವ್ರವಾಗಿ ಗಾಯಗೊಂಡಿದ್ದಾನೆ.
ಮೃತರನ್ನು ದೇವರಿಯಾ ಜಿಲ್ಲೆಯ ಗ್ರಾಮವೊಂದರ ನಿವಾಸಿಗಳಾದ ಸಂತರಾಜ್ ಭಾರತಿ (35) ಮತ್ತು ಪ್ರೇಮಶೀಲಾ (32) ಎಂದು ಗುರುತಿಸಲಾಗಿದೆ. ಟ್ರಕ್ ಡಿಕ್ಕಿ ಹೊಡೆದ ರಭಸಕ್ಕೆ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಟ್ರಕ್ ಅವರನ್ನು ಸುಮಾರು 100 ಮೀಟರ್ ದೂರ ಎಳೆದೊಯ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದೇವಸ್ಥಾನಕ್ಕೆ ಹೋಗುತ್ತಿದ್ದಾಗ ದುರಂತ:
ಶುಕ್ರವಾರ ಬೆಳಿಗ್ಗೆ 11ರ ಸುಮಾರಿಗೆ ದೇವಸ್ಥಾನಕ್ಕೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಇವರ ಮಗ ಸಂಗಮ್ ಬೈಕ್ನಿಂದ ದೂರ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾನೆ. ಸದ್ಯ ಆತನನ್ನು ಗೋರಖ್ಪುರದ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಟ್ರಕ್ ಬಿಟ್ಟು ಓಡಿಹೋದ ಚಾಲಕ:
ಅಪಘಾತದ ಬಳಿಕ ಚಾಲಕ ಟ್ರಕ್ ನಿಲ್ಲಿಸಿಲ್ಲ . ಸ್ಥಳೀಯರು ವಾಹನವನ್ನು ತಡೆಯಲು ಯತ್ನಿಸಿದರಾದರೂ, ಚಾಲಕ ಸುಮಾರು ಒಂದು ಕಿಲೋಮೀಟರ್ ದೂರ ಸಾಗಿ ಬಳಿಕ ಅಲ್ಲಿ ಟ್ರಕ್ ಬಿಟ್ಟು ಪರಾರಿಯಾಗಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ಪೊಲೀಸರಿಗೆ ತಿಳಿಸಿದ್ದಾರೆ
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಸದ್ಯ ಟ್ರಕ್ ಅನ್ನು ವಶಪಡಿಸಿಕೊಳ್ಳಲಾಗಿದ್ದು, ತಲೆಮರೆಸಿಕೊಂಡಿರುವ ಚಾಲಕನ ಪತ್ತೆಗಾಗಿ ಶೋಧ ಆರಂಭಿಸಲಾಗಿದೆ ಎಂದು ಎಸ್ಪಿ (ಉತ್ತರ) ಜ್ಞಾನೇಂದ್ರ ನಾಥ್ ಪ್ರಸಾದ್ ತಿಳಿಸಿದ್ದಾರೆ.

