ಲಖನೌ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 12 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಆಯೋಜಿಸುವ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಸಕ್ರಿಯ ಪಾಲ್ಗೊಳ್ಳುವಿಕೆಯನ್ನು ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸೂಚಿಸಿದ್ದಾರೆ.
ಈ ಸಂಬಂಧ ಉತ್ತರಪ್ರದೇಶ ಸರ್ಕಾರ ಹೇಳಿಕೆ ಬಿಡುಗಡೆ ಮಾಡಿದ್ದು, ಕಾರ್ಯಕ್ರಮಗಳು ಪರಿಸರ ದಿನದಂದು (ಜೂನ್ 5) ಆರಂಭವಾಗಿ ವಿಶ್ವ ಯೋಗ ದಿನದ (ಜೂನ್ 12) ವರೆಗೆ ನಡೆಯಲಿರುವ ಕಾರ್ಯಕ್ರಮಗಳ ಪೂರ್ವ ಸಿದ್ಧತೆಯನ್ನು ಯೋಗಿ ಅವರು ವಿಡಿಯೊ ಕಾನ್ಫರೆನ್ಸ್ ಮೂಲಕ ಪರಿಶೀಲಿಸಿದ್ದಾರೆ.
ಕಾರ್ಯಕ್ರಮಗಳು ಔಪಚಾರಿಕವಾಗಿರದೆ, ಜನಜಾಗೃತಿ ಅಭಿಯಾನವಾಗಬೇಕು ಎಂಬ ಸೂಚನೆಯನ್ನು ನೀಡಲಾಗಿದೆ.
ಜೂನ್ 5ರಂದು ಕನಿಷ್ಠ 5 ಕೋಟಿ ಸಸಿಗಳನ್ನು ನೆಡಬೇಕು. ಅವುಗಳಿಗೆ ರಕ್ಷಣೆಯನ್ನೂ ಖಾತ್ರಿಪಡಿಸಬೇಕು ಎಂದು ಯೋಗಿ ಆದಿತ್ಯನಾಥ ಅವರು ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ. ಹಾಗೆಯೇ, ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳು, ಸ್ಥಳೀಯ ಸಂಸ್ಥೆಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧಿಸುವಂತೆಯೂ ತಿಳಿಸಲಾಗಿದೆ.
ಕಾರ್ಯಕ್ರಮದ ಅವಧಿಯಲ್ಲಿ ಆರೋಗ್ಯ ಶಿಬಿರಗಳು, ಕಲ್ಯಾಣ ಕಾರ್ಯಕ್ರಮಗಳು, ಸ್ವಚ್ಛತಾ ಅಭಿಯಾನಗಳನ್ನು ನಡೆಸುವಂತೆಯೂ ಅಧಿಕಾರಿಗಳಿಗೆ ಹೇಳಲಾಗಿದೆ.

