ನವದೆಹಲಿ: ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಕುಟುಂಬಸ್ಥರು ಉಜ್ಜಯಿನಿ ಸುತ್ತ ಮುತ್ತ 168 ಎಕರೆ ಭೂಮಿಯನ್ನು ಖರೀದಿಸಿದ್ದಾರೆ ಎಂಬ ಮಾಧ್ಯಮಗಳ ವರದಿ ಬೆನ್ನಲೇ ಇಲ್ಲಿನ ರಾಜಕಾರಣದಲ್ಲಿ ಭಾರಿ ಬಿರುಗಾಳಿ ಎದ್ದಿದೆ.
ಸರ್ಕಾರದ ಅಭಿವೃದ್ಧಿ ಯೋಜನೆಗಳು ಜಾರಿಯಾಗುತ್ತಿರುವ ಉಜ್ಜಯಿನಿ ಸುತ್ತ ಮುತ್ತ ಪ್ರದೇಶಗಳಲ್ಲಿ ಮೋಹನ್ ಯಾದವ್ ಅವರ ಕುಟುಂಬಸ್ಥರು ಹಾಗೂ ಅವರಿಗೆ ಸೇರಿದ ಸಂಸ್ಥೆಗಳು ₹ 45 ಕೋಟಿ ವೆಚ್ಚದಲ್ಲಿ 168 ಎಕರೆ ಭೂಮಿ ಖರೀದಿಸಿದ್ದಾರೆ ಎಂದು ಆರೋಪಿಸಿ ಇಂಡಿಯನ್ ಎಕ್ಸ್ಪ್ರೆಸ್ ಪತ್ರಿಕೆ ವರದಿ ಮಾಡಿದೆ.
ಈ ವರದಿಯನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಮಂಗಳವಾರ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.
ಬಿಜೆಪಿಯ 'ಡಬಲ್ ಎಂಜಿನ್' ಸರ್ಕಾರದ ಆಡಳಿತದಲ್ಲಿ 'ಲೂಟಿಯ ಎಂಜಿನ್' ಕೂಡ ವೇಗವಾಗಿ ಚಲಿಸುತ್ತಿದೆ ಎಂದು ಕಾಂಗ್ರೆಸ್ ಟೀಕಿಸಿದೆ.
ಮುಖ್ಯಮಂತ್ರಿ ಮೋಹನ್ ಯಾದವ್ ಅವರ ಕುಟುಂಬ ಸದಸ್ಯರು ಮತ್ತು ಅವರಿಗೆ ಸೇರಿದ ರಿಯಲ್ ಎಸ್ಟೇಟ್ ಸಂಸ್ಥೆಗಳು 2023ರಿಂದ ಮೂರು ವರ್ಷಗಳ ಅವಧಿಯಲ್ಲಿ ಉಜ್ಜಯಿನಿಯಲ್ಲಿ 168 ಎಕರೆ ಭೂಮಿ ಖರೀದಿಸಿವೆ. ಈ ಜಮೀನುಗಳು ಸರ್ಕಾರ ಘೋಷಿಸಿರುವ ರಸ್ತೆ ಯೋಜನೆಗಳು, ಅಭಿವೃದ್ಧಿ ಕಾಮಗಾರಿಗಳು ನಡೆಯುವ ವಲಯಗಳಲ್ಲೇ ಇವೆ ಎಂದು ವರದಿಯಲ್ಲಿ ಹೇಳಲಾಗಿದೆ.
ವೇಗದಲ್ಲಿದೆ ಲೂಟಿಯ ಎಂಜಿನ್...
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹಿಂದಿಯಲ್ಲಿ ಪೋಸ್ಟ್ವೊಂದನ್ನು ಹಂಚಿಕೊಂಡಿದ್ದಾರೆ.
ಮಧ್ಯಪ್ರದೇಶ ಬಿಜೆಪಿಯ 'ಡಬಲ್ ಎಂಜಿನ್' ಸರ್ಕಾರದ ಅವಧಿಯಲ್ಲಿ 'ಲೂಟಿಯ ಎಂಜಿನ್' ಪೂರ್ಣ ಪ್ರಮಾಣದಲ್ಲಿ ಕೆಲಸ ಮಾಡುತ್ತಿದ್ದು ಇದು ಅತಿ ವೇಗವಾಗಿ ಚಲಿಸುತ್ತಿದೆ' ಎಂದು ವ್ಯಂಗ್ಯವಾಡಿದ್ದಾರೆ. ಲೂಟಿಯ ನೇತೃತ್ವವನ್ನು ಮುಖ್ಯಮಂತ್ರಿ ಮೋಹನ್ ಯಾದವ್ ಅವರೇ ವಹಿಸಿಕೊಂಡಿದ್ದಾರೆ ಎಂದು ಜೈರಾಮ್ ರಮೇಶ್ ಗಂಭೀರವಾಗಿ ಆರೋಪ ಮಾಡಿದ್ದಾರೆ.
ಮಧ್ಯಪ್ರದೇಶದಿಂದ ದೆಹಲಿಗೆ ವಲಸೆ ಹೋಗಿರುವ ಹಾಲಿ ಕೇಂದ್ರ ಸಚಿವರೊಬ್ಬರು, ಮೋಹನ್ ಯಾದವ್ ವಿರುದ್ಧ ಸುದ್ದಿಗಳು ಮಾಧ್ಯಮಗಳಲ್ಲಿ ಪ್ರಕಟವಾಗುವಂತೆ ಯೋಜನೆ ರೂಪಿಸಿದ್ದಾರೆ ಎಂಬ ಮಾತುಗಳೂ ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ ಎಂದು ಜೈರಾಮ್ ರಮೇಶ್ ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ.
ಕೇಂದ್ರ ಕೃಷಿ ಸಚಿವ ಹಾಗೂ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಹೆಸರನ್ನು ಪ್ರಸ್ತಾಪಿಸದೆ ಜೈರಾಮ್ ರಮೇಶ್ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

