ನವದೆಹಲಿ (PTI): ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ ನಿರತರಾಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಅಕ್ರಮವಾಗಿ ಕೂಡಿ ಹಾಕಿದ್ದ ಮತ್ತು ರಸ್ತೆ ತಡೆ ನಡೆಸಿರುವ ಆರೋಪಗಳಿಗೆ ಸಂಬಂಧಿಸಿದ ನಾಲ್ಕು ಪ್ರತ್ಯೇಕ ಪ್ರಕರಣಗಳ ಕುರಿತು ಸಲ್ಲಿಸಿರುವ ದೋಷಾರೋಪ ಪಟ್ಟಿಗಳಲ್ಲಿ ರಾಷ್ಟ್ರೀಯ ತನಿಖಾ ದಳ(ಎನ್ಐಎ) 31 ಜನರ ಹೆಸರನ್ನು ಉಲ್ಲೇಖಿಸಿದೆ.
ವಿಧಾನಸಭೆ ಚುನಾವಣೆಗೂ ಮುನ್ನ ನಡೆದಿದ್ದ ಈ ಘಟನೆಯ ಕುರಿತು ಹಲವು ಸಾಕ್ಷಿಗಳ ವಿಚಾರಣೆ ಹಾಗೂ ಡಿಜಿಟಲ್/ತಾಂತ್ರಿಕ, ಲಿಖಿತ ಮತ್ತು ಮೌಖಿಕ ಸಾಕ್ಷ್ಯಗಳ ಆಧಾರದಲ್ಲಿ ಕೋಲ್ಕತ್ತದಲ್ಲಿನ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ.
'ದೋಷಾರೋಪ ಪಟ್ಟಿಯಲ್ಲಿ ಹೆಸರು ಉಲ್ಲೇಖವಾಗಿರುವ ಪ್ರತಿಯೊಬ್ಬರು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಅವರಿಂದ ಚುನಾವಣಾ ಕಾರ್ಯ ಮತ್ತು ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಯಾಗಿದೆ' ಎಂದು ಎನ್ಐಎ ತಿಳಿಸಿದೆ.
'ಸಾಂವಿಧಾನಿಕ ಪ್ರಕ್ರಿಯೆಗೆ ಅಡ್ಡಿ ಉಂಟು ಮಾಡುವ ಪಿತೂರಿ ಮತ್ತು ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ ಇತರ ಆರೋಪಿಗಳ ಪತ್ತೆಗೂ ತನಿಖೆ ಮುಂದುವರಿದಿದೆ' ಎಂದು ಎನ್ಐಎ ಹೇಳಿದೆ.
ಪ್ರಕರಣಗಳ ತನಿಖೆಯನ್ನು ಎನ್ಐಎಗೆ ವಹಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತ್ತು.

