ನವದೆಹಲಿ: ಸಾಮಾಜಿಕ ಮಾಧ್ಯಮದಲ್ಲಿ ಸಂಚಲನ ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಶಿಕ್ಷಣ ಕ್ಷೇತ್ರದಲ್ಲಿನ ಕೇಂದ್ರ ಸರ್ಕಾರದ ವೈಫಲ್ಯಗಳನ್ನು ವಿರೋಧಿಸಿ ಹಮ್ಮಿಕೊಂಡಿರುವ ಪ್ರತಿಭಟನೆಯ ಹೊತ್ತಿನಲ್ಲೇ ತನ್ನ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸುವ ಗುರಿಯೊಂದಿಗೆ ಮೂವರು ವಕ್ತಾರರನ್ನು ನೇಮಿಸಿದೆ.
ಈ ಬಗ್ಗೆ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಸಿಜೆಪಿ, 'ತನಿಖಾ ಪತ್ರಕರ್ತ ಸೌರವ್ ದಾಸ್ ಸಂಘಟನೆಯ ಮುಖ್ಯ ವಕ್ತಾರರಾಗಿ ಕಾರ್ಯನಿರ್ವಹಿಸಲಿದ್ದಾರೆ. ರಾಜಕೀಯ ಸಂಶೋಧಕ ಹಾಗೂ ಚಿತ್ರ ನಿರ್ಮಾಪಕ ವಿಜೇತ ದಹಿಯಾ, ಮಾಜಿ ಮ್ಯಾನೇಜ್ಮೆಂಟ್ ಸಲಹೆಗಾರ ಅಶುತೋಷ್ ರಂಕಾ ಅವರು ಸಾರ್ವಜನಿಕರು ಮತ್ತು ಮಾಧ್ಯಮಗಳ ಮುಂದೆ ಸಂಘಟನೆಯನ್ನು ಪ್ರತಿನಿಧಿಸಲಿದ್ದಾರೆ' ಎಂದು ಹೇಳಿದೆ.
'ಭಾರತದ ರಾಜಕೀಯ ದಿಕ್ಕನ್ನು ಬದಲಾಯಿಸಲು ಸಿಜೆಪಿ ಸಿದ್ಧವಾಗಿದೆ' ಎಂದೂ ಹೇಳಿದೆ. ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಸಿಬಿಎಸ್ಇ ಪರೀಕ್ಷಾ ವ್ಯವಸ್ಥೆಯಲ್ಲಿನ ಲೋಪಗಳನ್ನು ಖಂಡಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆ ಪ್ರಾರಂಭಿಸುವುದಾಗಿ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಘೋಷಿಸಿದ್ದಾರೆ.

