ಸ್ಥಳೀಯ ಮ್ಯಾಜಿಸ್ಟ್ರೇಟ್ಗಳೊಂದಿಗೆ ಪೊಲೀಸ್ ತಂಡಗಳು ಆರೋಪಿಗಳಾದ ಲವಕುಶ ಮಿಶ್ರಾ, ಅವಿನಾಶ್ ಶುಕ್ಲಾ ಹಾಗೂ ರಾಮಶಂಕರ ಯಾದವ್ ಸೇರಿದಂತೆ 8 ಮಂದಿಯ ನಿವಾಸಗಳ ಮೇಲೆ ಶೋಧ ಕಾರ್ಯಾಚರಣೆ ನಡೆಸಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಎಲ್ಲಾ ಆರೋಪಿಗಳಿಗೆ ಅಯೋಧ್ಯೆಯ ನ್ಯಾಯಾಲಯವು ಜೂನ್ 29ರವರೆಗೆ ನ್ಯಾಯಾಂಗ ಕಸ್ಟಡಿಯನ್ನು ವಿಧಿಸಿದ ಎರಡು ದಿನಗಳ ನಂತರ ಈ ಶೋಧ ಕಾರ್ಯಾಚರಣೆ ನಡೆದಿದೆ. ಸೋಮವಾರ ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದು, ಅವರನ್ನು ರಿಮಾಂಡ್ ಕಸ್ಟಡಿಗೆ ಒಪ್ಪಿಸುವಂತೆ ಕೋರಲಿದ್ದಾರೆ.
ಆರೋಪಿಗಳಾದ ಅವಿನಾಶ್ ಶುಕ್ಲಾ, ಅನುಕಲ್ಪ್ ಮಿಶ್ರಾ, ಲವಕುಶ ಮಿಶ್ರಾ, ಮನೀಶ್ ಕುಮಾರ್ ಯಾದವ್, ಕರುಣೇಶ್ ಪಾಂಡೆ, ರಾಮಶಂಕರ ಮಿಶ್ರಾ, ಸುಭಾಷ್ ಶ್ರೀವಾಸ್ತವ ಹಾಗೂ ರಾಮಶಂಕರ್ ಅಲಿಯಾಸ್ ಟಿನ್ನೂ ಯಾದವ್ ಅವರು ಅಯೋಧ್ಯೆಯ ಶ್ರೀರಾಮ ಮಂದಿರವು ದೇಣಿಗೆಯಾಗಿ ಸ್ವೀಕರಿಸಿದ ನಗದು ಹಾಗೂ ಅಮೂಲ್ಯ ವಸ್ತುಗಳ ಎಣಿಕೆಯ ಕಾರ್ಯಗಳೊಂದಿಗೆ ಸಂಬಂಧ ಹೊಂದಿದ್ದರು ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಬಂಧಿತ ಆರೋಪಿಗಳಿಂದ ಈವರೆಗೆ ತನಿಖಾಧಿಕಾರಿಗಳು 79.85 ಲಕ್ಷ ರೂ. ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ವಿರುದ್ಧ ಉದ್ಯೋಗಿಯಿಂದ ಕಳವು, ಕ್ರಿಮಿನಲ್ ನಂಬಿಕೆ ದ್ರೋಹ, ಕಳವುಗೈದ ಸೊತ್ತಿನ ಸ್ವೀಕಾರ ಹಾಗೂ ಕ್ರಿಮಿನಲ್ ಸಂಚಿಗೆ ಸಂಬಂಧಿಸಿದ ಭಾರತೀಯ ನ್ಯಾಯ ಸಂಹಿತೆಯ ನಿಬಂಧನೆಗಳು ಹಾಗೂ ಭ್ರಷ್ಟಾಚಾರ ಕಾಯ್ದೆಯ ವಿವಿಧ ಸೆಕ್ಷನ್ಗಳಡಿ ಪ್ರಕರಣ ದಾಖಲಿಸಲಾಗಿದೆ.
ರಾಮ ಮಂದಿರದಲ್ಲಿ ದೇಣಿಗೆಗಳಲ್ಲಿ ಅವ್ಯವಹಾರಗಳು ನಡೆದಿವೆ ಎಂಬ ಆರೋಪಗಳು ಈ ತಿಂಗಳ ಆರಂಭದಲ್ಲಿ ಮೂಡಿಬಂದ ಬಳಿಕ, ವಿಶೇಷ ತನಿಖಾ ತಂಡದ ತ್ರಿಸದಸ್ಯ ಸಮಿತಿಯು ಸಲ್ಲಿಸಿದ ಪ್ರಾಥಮಿಕ ವರದಿಯ ಶಿಫಾರಸಿನ ಆಧಾರದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.
ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಶನಿವಾರ ಹೇಳಿಕೆಯೊಂದನ್ನು ನೀಡಿ, ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಹಾಗೂ ಟ್ರಸ್ಟಿ ಅನಿಲ್ ಮಿಶ್ರಾ ಅವರ ರಾಜೀನಾಮೆಗಳನ್ನು ಸ್ವೀಕರಿಸಿರುವುದಾಗಿ ತಿಳಿಸಿದೆ.

