ನವದೆಹಲಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಸಂದರ್ಭದಲ್ಲಿ ಶಂಕಿತ ವಿದೇಶಿಗರ ಬಗ್ಗೆ ಮಾಹಿತಿ ನೀಡುವಂತೆ ರಾಜ್ಯ ಚುನಾವಣಾ ಅಧಿಕಾರಿಗಳಿಗೆ ಚುನಾವಣಾ ಆಯೋಗ ಸೂಚಿಸಿದೆ.
ಮತದಾರರು ನಮೂನೆ ಅರ್ಜಿಗಳನ್ನು ವಾಪಸ್ ನೀಡದಿದ್ದಲ್ಲಿ, ಅವರು ಸ್ಥಳಾಂತರಗೊಂಡಿದ್ದಾರೆಯೇ, ಮೃತಪಟ್ಟಿದ್ದಾರೆಯೇ ಅಥವಾ ಇತರ ಕಾರಣಗಳಿವೆಯೇ ಎಂಬ ಬಗ್ಗೆ ಬೂತ್ ಮಟ್ಟದ ಅಧಿಕಾರಿಗಳು ಪತ್ತೆ ಮಾಡಬೇಕು ಎಂದು ಆಯೋಗವು ಒತ್ತಿ ಹೇಳಿದೆ.
ಮೇ 14ರಂದು ರಾಜ್ಯ ಚುನಾವಣಾ ಅಧಿಕಾರಿಗಳಿಗೆ ಎಸ್ಐಆರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹಲವು ನಿರ್ದೇಶನಗಳನ್ನು ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಚುನಾವಣಾ ನೋಂದಣಾಧಿಕಾರಿಗಳು ಶಂಕಿತ ವಿದೇಶಿ ಪ್ರಜೆಗಳ ಬಗ್ಗೆ ಸಕ್ಷಮ ಪ್ರಾಧಿಕಾರಕ್ಕೆ ಮಾಹಿತಿ ನೀಡಬೇಕು ಎಂದೂ ತಿಳಿಸಲಾಗಿದೆ ಎಂದು ಹೇಳಿದ್ದಾರೆ.
ಆಯೋಗವು ಕಳೆದ ವರ್ಷ ಬಿಹಾರದಲ್ಲಿ ಎಸ್ಐಆರ್ ಪ್ರಕ್ರಿಯೆಗೆ ಸಿದ್ಧತೆ ನಡೆಸಿತ್ತು. ರಾಜ್ಯದಲ್ಲಿ ಬಾಂಗ್ಲಾದೇಶ, ನೇಪಾಳ ಮತ್ತು ಮ್ಯಾನ್ಮಾರ್ ದೇಶಗಳ ಪ್ರಜೆಗಳು ಇರುವುದು ಪತ್ತೆಯಾಗಿದೆ ಎಂದು ಅಧಿಕಾರಿಗಳು ಆರೋಪಿಸಿದ್ದರು. ಆದರೆ, ಆಯೋಗವು ಈ ಆರೋಪಕ್ಕೆ ಸಂಬಂಧಿಸಿದಂತೆ ಯಾವುದೇ ಸಾಕ್ಷ್ಯವನ್ನು ಬಿಡುಗಡೆ ಮಾಡಿರಲಿಲ್ಲ.
ಈ ಬೆನ್ನಲ್ಲೇ ವಿರೋಧ ಪಕ್ಷಗಳು, 'ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳಿಗೆ ಮತ ಹಾಕದ ಮತದಾರರನ್ನು ಗುರಿಯಾಗಿಸಲು ಚುನಾವಣಾ ಆಯೋಗವು ಹೂಡಿರುವ ತಂತ್ರ ಇದಾಗಿದೆ' ಎಂದು ಆರೋಪಿಸಿದ್ದವು.
ಈ ಮಧ್ಯೆ ಮೇ 14ರಿಂದ ಚುನಾವಣಾ ಆಯೋಗವು ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮೂರನೇ ಹಂತದ ಎಸ್ಐಆರ್ ಪ್ರಕ್ರಿಯೆಯನ್ನು ಆರಂಭಿಸಿದೆ.

