ಮುಂಬೈ: ನಗರದಲ್ಲಿ ಮಂಗಳವಾರ ರಾತ್ರಿ ಭಾರಿ ಮಳೆಯಾಗಿದೆ. ಇದರಿಂದ ಉಪನಗರದ ರೈಲು ಹಳಿಗಳ ಮೇಲೆ ನೀರು ನಿಂತಿದ್ದರಿಂದ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಇದರಿಂದಾಗಿ ಪ್ರಯಾಣಿಕರು ಪರದಾಡುವಂತಾಯಿತು ಎಂದು ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ.
ನಗರದ ಹಲವಡೆ ನಿನ್ನೆ (ಜೂನ್ 23) ಒಂದೇ ದಿನ 200 ಮಿ.ಮೀ. ಗಿಂತಲೂ ಹೆಚ್ಚು ಮಳೆಯಾಗಿದೆ. ಇನ್ನೆರಡು ದಿನ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ತಿಳಿಸಿದೆ.
'ನಗರದ ಒಳ ಚರಂಡಿಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸುವಂತೆ ಹಾಗೂ ಒಣ ತ್ಯಾಜ್ಯವನ್ನು ತೆಗೆದುಹಾಕುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮಳೆಗಾಲದಲ್ಲಿ ನೀರು ನಿಲ್ಲುವುದು ಮತ್ತು ಸಂಚಾರಕ್ಕೆ ಅಡ್ಡಿಯಾಗುವುದನ್ನು ತಡೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ. ಈ ವಿಷಯವನ್ನು ರಾಜಕೀಯ ದೃಷ್ಟಿಕೋನದಿಂದ ನೋಡಬಾರದು. ಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಗಮನ ಹರಿಸಬೇಕು ಎಂದು ಶಿವಸೇನಾ ವಿಧಾನ ಪರಿಷತ್ ಸದಸ್ಯೆ ಮನೀಷಾ ತಿಳಿಸಿದ್ದಾರೆ.
ಮುಂಬೈನ ಪಶ್ಚಿಮ ಉಪನಗರಗಳಲ್ಲಿ 208 ಮಿ.ಮೀ ಹಾಗೂ ಪೂರ್ವ ಉಪನಗರಗಳಲ್ಲಿ 167 ಮಿ.ಮೀ ಮಳೆಯಾಗಿದೆ. ಇಂದು ಬೆಳಗ್ಗೆ ಸುರಿದ ಮಳೆಯಿಂದ ತಗ್ಗು ಪ್ರದೇಶಗಳು ಸಂಪೂರ್ಣ ಜಲವೃತಗೊಂಡಿದ್ದವು. ಇದರಿಂದ ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದು, ಮುಖ್ಯ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು' ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನೆರಡು ದಿನ ನಗರದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ 'ಆರೆಂಜ್ ಅಲರ್ಟ್' ಘೋಷಿಸಲಾಗಿದೆ.

