ನವದೆಹಲಿ: ನಿರುದ್ಯೋಗ, ಬೆಲೆ ಏರಿಕೆ ಮತ್ತು ಪರೀಕ್ಷಾ ಅಕ್ರಮಗಳ ವಿಷಯಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ದೇಶವ್ಯಾಪಿ ಆಂದೋಲನವೊಂದನ್ನು ಕಾಂಗ್ರೆಸ್ ಏರ್ಪಡಿಸಲಿದೆೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಗುರುವಾರ ತಿಳಿಸಿದ್ದಾರೆ.
''ಪ್ರಸ್ತುತ ರಾಜಕೀಯ ಪರಿಸ್ಥಿತಿಯ ಕುರಿತು ಚರ್ಚಿಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದೆ. ಭಾರತದಾದ್ಯಂತದ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು, ಉಸ್ತುವಾರಿಗಳು ಮತ್ತು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಕೂಡ ಈ ಸಭೆಯಲ್ಲಿ ಭಾಗವಹಿಸಿದ್ದರು. ನಿರುದ್ಯೋಗ, ವ್ಯಾಪಕವಾಗಿ ನಡೆಯುತ್ತಿರುವ ಪ್ರಶ್ನೆಪತ್ರಿಕೆ ಸೋರಿಕೆ, ಗಗನಕ್ಕೇರುತ್ತಿರುವ ಅಗತ್ಯ ವಸ್ತುಗಳ ಬೆಲೆ ಮತ್ತು ಮೋದಿ ಸರಕಾರದ ವಿನಾಶಕಾರಿ ನೀತಿಗಳಿಂದ ಉಂಟಾಗಿರುವ ಆರ್ಥಿಕ ಸಂಕಷ್ಟಗಳ ಬಗ್ಗೆ ಸಭೆಯಲ್ಲಿ ಪ್ರಮುಖವಾಗಿ ಚರ್ಚಿಸಲಾಯಿತು'' ಎಂದು ಸಭೆಯ ನಂತರ ಎಕ್ಸ್ನಲ್ಲಿ ಹಾಕಿದ ಸಂದೇಶವೊಂದರಲ್ಲಿ ವೇಣುಗೋಪಾಲ್ ತಿಳಿಸಿದರು.
''ಇಂದು ನಮ್ಮ ಪ್ರಜಾಪ್ರಭುತ್ವದ ಸ್ಥಿತಿಗತಿ, ಸಂವಿಧಾನಕ್ಕೆ ಎದುರಾಗಿರುವ ಬೆದರಿಕೆಗಳು ಮತ್ತು ಸಾಮಾಜಿಕ ನ್ಯಾಯಕ್ಕಾಗಿ ನಮ್ಮ ಹೋರಾಟವನ್ನು ಮುಂದುವರಿಸುವ ಅಗತ್ಯದ ಬಗ್ಗೆಯೂ ನಾವು ಚರ್ಚಿಸಿದೆವು'' ಎಂದು ಅವರು ಹೇಳಿದರು.
ಈ ಆಂದೋಲನವು ಜೂನ್ ಕೊನೆಯಲ್ಲಿ ಪ್ರಾರಂಭವಾಗುವ ಸಾಧ್ಯತೆಯಿದ್ದು, 2-3 ತಿಂಗಳುಗಳ ಕಾಲ ಮುಂದುವರಿಯಲಿದೆ ಎಂದು ಅವರು ಹೇಳಿದರು.
ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಮತ್ತು ರಾಜ್ಯ ಉಸ್ತುವಾರಿಗಳ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೇಣುಗೋಪಾಲ್, ''ಕಾಂಗ್ರೆಸ್ನ ರಾಜ್ಯಸಭಾ ಅಭ್ಯರ್ಥಿ ಮೀನಾಕ್ಷಿ ನಟರಾಜನ್ರ ನಾಮಪತ್ರ ತಿರಸ್ಕೃತವಾಗಿರುವ ಬಗ್ಗೆ ಇಂದಿನ ಸಭೆಯಲ್ಲಿ ವಿವರವಾಗಿ ಚರ್ಚಿಸಲಾಯಿತು'' ಎಂದರು. ''ನಾವು ಈ ವಿಷಯದಲ್ಲಿ ರಾಜಕೀಯವಾಗಿ ಮತ್ತು ಕಾನೂನಾತ್ಮಕವಾಗಿ ಹೋರಾಡಲಿದ್ದೇವೆ'' ಎಂದು ಹೇಳಿದರು.
''ಅವರು (ಬಿಜೆಪಿ) ಬಹುಮತವನ್ನು ಪಡೆಯುವ ರೀತಿ ಇದು. ಅವರು ಬೇರೆ ಪಕ್ಷಗಳ ಎಲ್ಲಾ ಸಂಸದರನ್ನು ಕರೆತಂದು, ರಾಜೀನಾಮೆ ಕೊಡಿಸಿ, ಬಿಜೆಪಿ ಸಂಸದರನ್ನಾಗಿ ಮಾಡುತ್ತಿದ್ದಾರೆ'' ಎಂದರು.