ಪುಣೆ: ದೇಶದಲ್ಲಿ ನಿರಂತರವಾಗಿ ನಡೆಯುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಗಳ ಅಕ್ರಮಗಳನ್ನು ಖಂಡಿಸಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ ಗುರುವಾರದಿಂದ (ಜೂನ್ 11) ದೇಶವ್ಯಾಪಿ ಪ್ರತಿಭಟನೆಗೆ ಕರೆ ನೀಡಿದೆ.
ಇದೇ ಸಂದರ್ಭದಲ್ಲಿ ಸಂಘಟನೆಯು ತನ್ನ ವಿಶೇಷ ಶಿಕ್ಷಣ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದೆ.
ಪುಣೆಯಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ, 'ಸಾವಿತ್ರಿಬಾಯಿ ಫುಲೆ ಪುಣೆ ವಿಶ್ವವಿದ್ಯಾಲಯದ ಆವರಣದಲ್ಲಿ ಗುರುವಾರ ಸಂಜೆ ಹಮ್ಮಿಕೊಳ್ಳಲಾಗಿರುವ ಈ ಶಾಂತಿಯುತ ಪ್ರತಿಭಟನೆಯಲ್ಲಿ ಪ್ರಖ್ಯಾತ ಪರಿಸರ ಹೋರಾಟಗಾರ ಸೋನಂ ವಾಂಗ್ಚುಕ್ ಅವರೂ ಭಾಗವಹಿಸಲಿದ್ದಾರೆ' ಎಂದು ತಿಳಿಸಿದ್ದಾರೆ.
'ನಾವು ಇಂದಿನಿಂದ ಎಸ್ಪಿಪಿಯು ಆವರಣದಿಂದಲೇ ನಮ್ಮ ದೇಶವ್ಯಾಪಿ ಹೋರಾಟವನ್ನು ಆರಂಭಿಸುತ್ತಿದ್ದೇವೆ. ಈ ಪ್ರತಿಭಟನೆಯು ಸಂಪೂರ್ಣವಾಗಿ ಸಂವಿಧಾನದ ಚೌಕಟ್ಟಿನೊಳಗೆ ಅತ್ಯಂತ ಶಾಂತಿಯುತವಾಗಿ ನಡೆಯಲಿದೆ. ಇದರೊಂದಿಗೆ ನಮ್ಮ ಶಿಕ್ಷಣ ಪ್ರಣಾಳಿಕೆಯನ್ನೂ ದೇಶದ ಮುಂದಿಡಲಿದ್ದೇವೆ' ಎಂದು ದಿಪ್ಕೆ ಹೇಳಿದ್ದಾರೆ.
ಕಾಕ್ರೋಚ್ ಜನತಾ ಪಾರ್ಟಿ ಬಿಡುಗಡೆ ಮಾಡಲಿರುವ ಪ್ರಣಾಳಿಕೆಯಲ್ಲಿ ಪ್ರಮುಖವಾಗಿ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗಟ್ಟುವುದು, ಪರೀಕ್ಷಾ ಫಲಿತಾಂಶಗಳನ್ನು ನಿಗದಿತ ಸಮಯಕ್ಕೆ ಪ್ರಕಟಿಸುವುದು, ನೇಮಕಾತಿ ಮತ್ತು ಪ್ರವೇಶ ಪರೀಕ್ಷೆಗಳಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವುದು, ಪರೀಕ್ಷಾ ಮಂಡಳಿಗಳ ಹೊಣೆಗಾರಿಕೆಯನ್ನು ಹೆಚ್ಚಿಸುವುದು ಮತ್ತು ಪರೀಕ್ಷಾ ವಿಳಂಬದಿಂದ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ವಿಷಯಗಳ ಮೇಲೆ ಗಮನ ಹರಿಸಲಾಗಿದೆ.

