ನವದೆಹಲಿ: ಕರ್ನಾಟಕದಲ್ಲಿ ಮಾವು ಬೆಲೆ ಕುಸಿತದಿಂದ ಕಂಗಾಲಾಗಿದ್ದ ರೈತರಿಗೆ ಕೇಂದ್ರ ಸರ್ಕಾರ ಕೈ ಹಿಡಿದಿದೆ.
ಮಾರುಕಟ್ಟೆ ಹಸ್ತಕ್ಷೇಪ ಯೋಜನೆ (Market Intervention Scheme-MIS) ಅಡಿಯಲ್ಲಿ 1,30,000 ಮೆಟ್ರಿಕ್ ಟನ್ ಪ್ರಮಾಣದ ತೋತಾಪುರಿ ಮಾವಿಗೆ ಪ್ರತಿ ಕ್ವಿಂಟಲ್ಗೆ ₹1,750 ಆರ್ಥಿಕ ನೆರವು ನೀಡುವ ಆದೇಶ ಹೊರಡಿಸಲಾಗಿದೆ.
ಈ ಕುರಿತು ಕೇಂದ್ರ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಅಧಿಕೃತ ಆದೇಶ ಹೊರಡಿಸಿರುವುದನ್ನು ಖಚಿತಪಡಿಸಿದ್ದಾರೆ.
ನನ್ನ ವಿನಂತಿಯನ್ನು ಮನ್ನಿಸಿ ರಾಜ್ಯದ ಮಾವು ಬೆಳೆಗಾರರ ನೆರವಿಗೆ ಧಾವಿಸಿ ಆರ್ಥಿಕ ನೆರವು ಘೋಷಿಸಿದ ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ (ಅವರಿಗೆ ಅನಂತ ಧನ್ಯವಾದ ಸಲ್ಲಿಸುತ್ತೇನೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
'ಹವಾಮಾನ ವೈಪರೀತ್ಯ, ನಿರಂತರ ಬೆಲೆ ಕುಸಿತದಿಂದ ಮಾವು ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರು. ಈ ಸಂಬಂಧ ಕೇಂದ್ರ ಕೃಷಿ ಸಚಿವರಿಗೆ ಜೂನ್ 17, 2026ರಂದು ಪತ್ರ ಬರೆದು ಮನವಿ ಸಲ್ಲಿಸಿದ್ದೆ. ತದನಂತರ ಬುಧವಾರ ಸಂಜೆ ನವದೆಹಲಿಯಲ್ಲಿರುವ ಕೃಷಿ ಸಚಿವರ ನಿವಾಸಕ್ಕೆ ತೆರಳಿ ಮಾವು ಬೆಳೆಗಾರರ ಸಂಕಷ್ಟದ ಬಗ್ಗೆ, ರಾಜ್ಯದಲ್ಲಿನ ರೈತರ ಸ್ಥಿತಿಗತಿಗಳ ಬಗ್ಗೆ ಮಾವರಿಕೆ ಮಾಡಿಕೊಟ್ಟು ಕೂಡಲೇ ನೆರವಿಗೆ ಬರಬೇಕು ಎಂದು ಕೋರಿದ್ದೆ. ನನ್ನ ಮನವಿಗೆ ಸ್ಪಂದಿಸಿ ತಕ್ಷಣವೇ ಆರ್ಥಿಕ ನೆರವು ಘೋಷಣೆ ಮಾಡುವುದಾಗಿ ಸಚಿವರು ಭರವಸೆ ನೀಡಿದ್ದರು. ಮಾರುಕಟ್ಟೆ ಹಸ್ತಕ್ಷೇಪ ಯೋಜನೆ ಅಡಿಯಲ್ಲಿ 1,30,000 ಮೆಟ್ರಿಕ್ ಟನ್ ಪ್ರಮಾಣದ ತೋತಾಪುರಿ ಮಾವಿಗೆ ಪ್ರತಿ ಕ್ವಿಂಟಲ್ಗೆ ₹1,750 ಆರ್ಥಿಕ ನೆರವು ನೀಡುವ ಆದೇಶ ಹೊರಡಿಸಿದ್ದಾರೆ ಎಂದು ತಿಳಿಸಿದ್ದಾರೆ,
ಮಾವು ಬೆಳೆಗಾರರಿಗೆ ಈ ನೆರವು ಅತಿದೊಡ್ಡ ಉಪಶಮನವಾಗಿದೆ ಪ್ರಧಾನ ಮಂತ್ರಿ ನರೇಂದ್ರಮೋದಿ ಅವರ ದೂರದೃಷ್ಟಿ ನಾಯಕತ್ವದಲ್ಲಿ ಅನ್ನದಾತರನ್ನು ಬೆಲೆ ಕುಸಿತ ಹಾಗೂ ಹವಾಮಾನ ವೈಪರೀತ್ಯದಂತಹ ಸಂಕಷ್ಟಗಳಿಂದ ಪಾರು ಮಾಡಲು ಕೇಂದ್ರವು ಅವಿರತವಾಗಿ ಶ್ರಮಿಸುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ತಿಳಿಸಿದ್ದಾರೆ.
ಪ್ರಲ್ಹಾದ ಜೋಶಿ ಸ್ವಾಗತ
ಕರ್ನಾಟಕದಲ್ಲಿ ಹವಾಮಾನ ವೈಪರೀತ್ಯ ಹಾಗೂ ಮಾರುಕಟ್ಟೆಯಲ್ಲಿ ಬೆಲೆ ಕುಸಿತದಿಂದ ತೋತಾಪುರಿ ಮಾವು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳಿಗೆ ಸ್ಪಂದಿಸುವಂತೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದು ಬೆಲೆ ಕೊರತೆ ಪಾವತಿ ಯೋಜನೆ (PಆPS) ಅಡಿಯಲ್ಲಿ ಬೆಂಬಲ ನೀಡುವಂತೆ ನಾನು ಮನವಿ ಮಾಡಿದ್ದೆ. ನನ್ನ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಮಾರುಕಟ್ಟೆ ಹಸ್ತಕ್ಷೇಪ ಯೋಜನೆ (ಒಚಿಡಿಞeಣ Iಟಿಣeಡಿveಟಿಣioಟಿ Sಛಿheme - ಒIS) ಅಡಿಯಲ್ಲಿ 1,30,000 ಮೆಟ್ರಿಕ್ ಟನ್ ತೋತಾಪುರಿ ಮಾವಿಗೆ ಪ್ರತಿ ಕ್ವಿಂಟಾಲ್ಗೆ ₹1,750 ರೈತರಿಗೆ ಸಹಾಯಧನವನ್ನು ನೀಡಲು ಅನುಮೋದನೆ ನೀಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ಧಾರೆ.
ರಾಜ್ಯದ ಮಾವು ಬೆಳೆಗಾರರ ಹಿತಾಸಕ್ತಿಯನ್ನು ಕಾಪಾಡಲು ಅಗತ್ಯ ಕ್ರಮ ಕೈಗೊಂಡಿರುವ ಕೇಂದ್ರ ಕೃಷಿ ಸಚಿವರಿಗೆ ಹೃತ್ಪೂರ್ವಕ ಧನ್ಯವಾದಗಳು. ಈ ನಿರ್ಧಾರವು ಸಾವಿರಾರು ರೈತ ಕುಟುಂಬಗಳಿಗೆ ನೆರವಾಗಲಿದ್ದು, ಅವರ ಆರ್ಥಿಕ ಸ್ಥಿರತೆ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸಲಿದೆ ಎಂದು ಹೇಳಿದ್ದಾರೆ.
ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ
ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ ಎನ್ನುವುದು ಕೇಂದ್ರ ಸರ್ಕಾರದ ಪ್ರಮುಖ ಕೃಷಿ ಬೆಂಬಲ ಕಾರ್ಯಕ್ರಮ. ಬೇಗನೆ ಹಾಳಾಗುವ ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳಿಗೆ ಇದನ್ನು ಅನ್ವಯಿಸಲಾಗುತ್ತದೆ. ಕೆಲವೊಮ್ಮೆ ಮಾರುಕಟ್ಟೆಯಲ್ಲಿ ದಿಢೀರ್ ಬೆಲೆ ಕುಸಿತವಾದಾಗ ರೈತರಿಗೆ ನಷ್ಟವಾಗದಂತೆ ತಡೆಯಲು ಈ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಪ್ರತಿ ವರ್ಷ ಮಾರುಕಟ್ಟೆ ದರ ಆಧರಿಸಿ ದರ ನಿಗದಿ ಮಾಡಲಾಗುತ್ತದೆ.
ಕನಿಷ್ಠ ಬೆಂಬಲ ಬೆಲೆ(ಎಂಎಸ್ಪಿ) ವ್ಯಾಪ್ತಿಗೆ ಬಾರದ ಬೆಳೆಗಳಿಗೆ ಅನ್ವಯಿಸುವ ತಾತ್ಕಾಲಿಕ ಯೋಜನೆಯಿದು.
ರಾಜ್ಯ ಸರ್ಕಾರಗಳ ವಿಶೇಷ ಮನವಿಯ ಮೇರೆಗೆ, ರೈತರಿಗೆ ಆರ್ಥಿಕ ನಷ್ಟವಾಗುವುದನ್ನು ತಪ್ಪಿಸಲು ಈ ಯೋಜನೆಯನ್ನು ಅನುಷ್ಠಾನ ಮಾಡಿಕೊಂಡು ಬರಲಾಗುತ್ತಿದೆ.ಮಾರುಕಟ್ಟೆಯಲ್ಲಿ ಬೆಲೆಗಳು ಕುಸಿದಾಗ, ನಿಗದಿತ ದರದಲ್ಲಿ ಸರ್ಕಾರವೇ ನೇರವಾಗಿ ರೈತರಿಂದ ಉತ್ಪನ್ನಗಳನ್ನು ಖರೀದಿಸುತ್ತದೆ ಇಲ್ಲವೇ ಖರೀದಿಯಾದ ಉತ್ಪನ್ನಕ್ಕೆ ದರವನ್ನು ವರ್ಗಾಯಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಮೂರು ತಿಂಗಳ ಹಿಂದೆಯೇ ಮಾವಿನ ಹಣ್ಣಿನ ಹಂಗಾಮು ಆರಂಭಗೊಂಡಿದ್ದು, ಈ ಬಾರಿ ಹವಾಮಾನ ವೈಪರಿತ್ಯ ಸಹಿತ ನಾನಾ ಕಾರಣಗಳಿಂದ ಇಳುವರಿಯೂ ಕಡಿಮೆಯಾಗಿದೆ.
ಈಗಾಗಲೇ ಇತರೆ ಮಾವಿನ ಹಣ್ಣುಗಳು ಮಾರುಕಟ್ಟೆ ಪ್ರವೇಶಿಸಿ ಈ ವರ್ಷದ ಹಂಗಾಮು ಮುಕ್ತಾಯಕ್ಕೆ ಬಂದಿದೆ. ಆದರೆ, ತೋತಾಪುರಿ ಹಣ್ಣು ಈಗ ಮಾರುಕಟ್ಟೆ ಪ್ರವೇಶಿಸುತ್ತಿದ್ದು, ದರ ಕುಸಿತ ಆತಂಕ ಎದುರಾಗಿದೆ.
ಕರ್ನಾಟಕದಲ್ಲಿ ಈ ಬಾರಿ 7 ರಿಂದ 8 ಲಕ್ಷ ಟನ್ ಮಾವು ಇಳುವರಿ ಬಂದಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಇದು ಶೇ 40ರಷ್ಟು ಕಡಿಮೆ. ಸದ್ಯ ತೋತಾಪುರಿ ಮಾವು 4 ರಿಂದ 5 ಲಕ್ಷ ಟನ್ ಉತ್ಪಾದನೆಯಾಗುವ ನಿರೀಕ್ಷೆಯಿದೆ.

