ತಿರುವನಂತಪುರ: ಕೇರಳದಲ್ಲಿ ಹೊಸದಾಗಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರವು, ರಾಜ್ಯದಲ್ಲಿ ದೊಡ್ಡ ಪಿಡುಗಾಗಿ ಪರಿಣಮಿಸಿರುವ ಮಾದಕ ದ್ರವ್ಯ ದಂಧೆಯ ವಿರುದ್ಧ ಹೋರಾಡಲು ಬಹುಮುಖಿ ಕಾರ್ಯತಂತ್ರವನ್ನು ರೂಪಿಸುತ್ತಿದೆ.
ಅಂತರರಾಜ್ಯ ಪೂರೈಕೆ ಜಾಲದಿಂದ ಹಿಡಿದು ತಳಮಟ್ಟದವರೆಗಿನ ದಂಧೆಯನ್ನು ಮಟ್ಟಹಾಕಲು 'ಆಪರೇಷನ್ ತೂಫಾನ್ : ದಿ ನಾರ್ಕೋ ಹಂಟ್' ಎನ್ನುವ ಉಪಕ್ರಮ ಆರಂಭಿಸಿದೆ.
ಕೇರಳ ಪೊಲೀಸರ ನೇತೃತ್ವದಲ್ಲಿ ನಡೆಯಲಿರುವ ಈ ಅಭಿಯಾನವನ್ನು ದಕ್ಷಿಣ ಭಾರತದ ರಾಜ್ಯಗಳ ಪೊಲೀಸ್ ಮತ್ತು ಕಾನೂನು ಜಾರಿ ಸಂಸ್ಥೆಗಳು ಹಾಗೂ ಕೇಂದ್ರ ಸರ್ಕಾರದ ಏಜೆನ್ಸಿಗಳ ಸಮನ್ವಯದೊಂದಿಗೆ ನಡೆಸಲಾಗುವುದು. ಇದನ್ನು ದಕ್ಷಿಣ ಭಾರತದಲ್ಲೇ ಅತಿ ದೊಡ್ಡ ಮಾದಕ ದ್ರವ್ಯ ವಿರೋಧಿ ಕಾರ್ಯಾಚರಣೆಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ.
ಗೃಹ ಸಚಿವ ರಮೇಶ್ ಚೆನ್ನಿತ್ತಲ ಅವರು ಈ ಅಭಿಯಾನವನ್ನು ಘೋಷಿಸಿದ್ದು, ಮುಖ್ಯಮಂತ್ರಿ ವಿ. ಡಿ. ಸತೀಶನ್ ಅವರು ಮಂಗಳವಾರ ಇದಕ್ಕೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ.
ಸಂದೇಹಾಸ್ಪದ ಹಣಕಾಸು ವಹಿವಾಟುಗಳನ್ನು ಪತ್ತೆಹಚ್ಚುವುದು, ಮಾದಕ ದ್ರವ್ಯಗಳ ಸರಬರಾಜಿನಲ್ಲಿ ಹೆಚ್ಚಾಗಿ ತೊಡಗಿಸಿಕೊಂಡಿರುವ ಸಾಮಾಜಿಕ ಮಾಧ್ಯಮ ಗುಂಪುಗಳ ಮೇಲೆ ನಿಗಾ ಇಡುವ ಮೂಲಕ ಪೂರೈಕೆ ಜಾಲಕ್ಕೆ ಕಡಿವಾಣ ಹಾಕಲು ಪೊಲೀಸರು ಯೋಜಿಸಿದ್ದಾರೆ.
ಈ ಉದ್ದೇಶಕ್ಕಾಗಿ ಡಿಜಿಟಲ್ ಇಂಟೆಲಿಜೆನ್ಸ್ ನೆಟ್ವರ್ಕ್ ಅನ್ನು ಸ್ಥಾಪಿಸಲಾಗುತ್ತಿದೆ. ಜನರ ಪಾಲ್ಗೊಳ್ಳುವಿಕೆಯ ಉಪಕ್ರಮಗಳ ಸಹಾಯದಿಂದ ತಳಮಟ್ಟದ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಲಾಗುತ್ತದೆ.
ಅಭಿಯಾನಗಳ ಜೊತೆಗೆ, ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಜಾಗೃತಿ ಕಾರ್ಯಕ್ರಮಗಳನ್ನು ಸಹ ನಡೆಸಲಾಗುತ್ತದೆ.
ಕೇರಳದಲ್ಲಿ ಮಾದಕ ದ್ರವ್ಯ ಪ್ರಕರಣಗಳ ಸಂಖ್ಯೆ ಆತಂಕಕಾರಿಯಾಗಿ ಹೆಚ್ಚುತ್ತಿದೆ. 2024ರಲ್ಲಿ ಈ ಸಂಬಂಧ ಕೇರಳಂ ಪೊಲೀಸರು 27,530 ಪ್ರಕರಣಗಳನ್ನು ದಾಖಲಿಸಿದ್ದರೆ, 2025ರಲ್ಲಿ ಎನ್ಡಿಪಿಎಸ್ (NDPS) ಕಾಯ್ದೆಯಡಿ ದಾಖಲಾದ ಪ್ರಕರಣಗಳ ಸಂಖ್ಯೆ 36,314 ಕ್ಕೆ ಏರಿಕೆಯಾಗಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್ಸಿಆರ್ಬಿ) ಪ್ರಕಾರ, 2023 ರಲ್ಲಿ ದೇಶದಲ್ಲೇ ಅತಿ ಹೆಚ್ಚು ಅಂದರೆ 30,697 ಎನ್ಡಿಪಿಎಸ್ ಪ್ರಕರಣಗಳು ಕೇರಳದಲ್ಲಿ ದಾಖಲಾಗಿವೆ.

