ನವದೆಹಲಿ: ಅಮರನಾಥ ಯಾತ್ರೆಯ ಭದ್ರತೆ ಕುರಿತು ಗೃಹ ಸಚಿವ ಅಮಿತ್ ಶಾ ಅವರು ಉನ್ನತ ಮಟ್ಟದ ಸಭೆ ನಡೆಸಿದರು.
ಇದರಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಸೇನಾ ಮುಖ್ಯಸ್ಥರಂತಹ ಅಧಿಕಾರಿಗಳು ಭಾಗವಹಿಸಿದ್ದರು. ಈ ಯಾತ್ರೆಯ ಮಾರ್ಗದಲ್ಲಿ ಬಹು-ಪದರದ ಭದ್ರತಾ ಗ್ರಿಡ್ ಸ್ಥಾಪನೆ, ಡ್ರೋನ್ಗಳು ಮತ್ತು ಸಿಸಿಟಿವಿಗಳಂತಹ ಆಧುನಿಕ ತಂತ್ರಜ್ಞಾನಗಳ ವ್ಯಾಪಕ ಬಳಕೆ ಮತ್ತು ಎಲ್ಲಾ ಭದ್ರತಾ ಸಂಸ್ಥೆಗಳ ನಡುವೆ ಸಮನ್ವಯವನ್ನು ಸುಧಾರಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.ಯಾತ್ರಿಕರಿಗೆ ಅತ್ಯಂತ ಭದ್ರತೆ ಮತ್ತು ಸುಗಮ ಪ್ರಯಾಣವನ್ನು ಖಚಿತಪಡಿಸಿಕೊಳ್ಳಲು ಸೂಚನೆಗಳನ್ನು ನೀಡಲಾಯಿತು.
ಜಮ್ಮು ಮತ್ತು ಕಾಶ್ಮೀರದಲ್ಲಿ ಈ ತಿಂಗಳಿನಿಂದ ಆರಂಭವಾಗಲಿರುವ ವಾರ್ಷಿಕ ಅಮರನಾಥ ಯಾತ್ರೆಗೆ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಯಾತ್ರಾರ್ಥಿಗಳ ಸುರಕ್ಷತೆಯನ್ನು ಖಾತ್ರಿಪಡಿಸಿಕೊಳ್ಳಲು ಗೃಹ ಸಚಿವಾಲಯವು ಭದ್ರತಾ ತಂತ್ರಗಳನ್ನು ರೂಪಿಸಿದೆ. ಅಮರನಾಥ ಯಾತ್ರೆಯ ಮಾರ್ಗದಲ್ಲಿ ಕಣ್ಗಾವಲು ಹೆಚ್ಚಿಸಲು ಮತ್ತು ಯಾವುದೇ ತುರ್ತು ಪರಿಸ್ಥಿತಿಯನ್ನು ಎದುರಿಸಲು ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಳ್ಳಲು ಅಮಿತ್ ಶಾ ಸೂಚಿಸಿದ್ದಾರೆ. ಅವಗಳೆಂದರೆ,
RFID ಟ್ಯಾಗ್ಗಳ ಕಡ್ಡಾಯ ಬಳಕೆ:
ಪ್ರತಿಯೊಬ್ಬ ಯಾತ್ರಾರ್ಥಿ ಮತ್ತು ಅವರ ವಾಹನಗಳ ಚಲನವಲನವನ್ನು ನಿಖರವಾಗಿ ಪತ್ತೆಹಚ್ಚಲು 'ರೇಡಿಯೋ ಫ್ರೀಕ್ವೆನ್ಸಿ ಐಡೆಂಟಿಫಿಕೇಶನ್' (RFID) ಟ್ಯಾಗ್ಗಳನ್ನು ಬಳಸಲಾಗುತ್ತದೆ. ಇದರಿಂದ ಯಾರಾದರೂ ದಾರಿ ತಪ್ಪಿದರೆ ಅಥವಾ ಸಂಕಷ್ಟಕ್ಕೆ ಸಿಲುಕಿದರೆ ತಕ್ಷಣ ಪತ್ತೆಹಚ್ಚಬಹುದು.
ಡ್ರೋನ್ ಮತ್ತು ಸಿಸಿಟಿವಿ ಕಣ್ಗಾವಲು:
ಯಾತ್ರಾ ಮಾರ್ಗಗಳು, ತಂಗುದಾಣಗಳು ಮತ್ತು ಸೂಕ್ಷ್ಮ ಪ್ರದೇಶಗಳ ಮೇಲೆ ದಿನದ 24 ಗಂಟೆಯೂ ನಿಗಾ ಇಡಲು ಅತ್ಯಾಧುನಿಕ ಡ್ರೋನ್ಗಳು ಹಾಗೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು.
ಆ್ಯಂಟಿ-ಡ್ರೋನ್ ವ್ಯವಸ್ಥೆ:
ಗಡಿ ನಿಯಂತ್ರಣ ರೇಖೆಯ (LoC) ಸಮೀಪದಿಂದ ಎದುರಾಗಬಹುದಾದ ಡ್ರೋನ್ ದಾಳಿಗಳ ಭೀತಿಯನ್ನು ಎದುರಿಸಲು ಪ್ರಮುಖ ಸ್ಥಳಗಳಲ್ಲಿ ಆ್ಯಂಟಿ-ಡ್ರೋನ್ ತಂತ್ರಜ್ಞಾನವನ್ನು ನಿಯೋಜಿಸಲಾಗುವುದು.
ಇದರ ಜೊತೆಗೆ ಯಾತ್ರಾ ಮಾರ್ಗದಲ್ಲಿ ಆಮ್ಲಜನಕದ ಕೊರತೆಯಾಗದಂತೆ ಅಗತ್ಯ ಸಿಲಿಂಡರ್ಗಳು ಹಾಗೂ ವೈದ್ಯಕೀಯ ಶಿಬಿರಗಳನ್ನು ಸ್ಥಾಪಿಸಲಾಗುವುದು. ಹವಾಮಾನ ವೈಪರೀತ್ಯ ಅಥವಾ ಭೂಕುಸಿತ ಸಂಭವಿಸಿದರೆ ತಕ್ಷಣವೇ ರಕ್ಷಣಾ ಕಾರ್ಯಾಚರಣೆ ನಡೆಸಲು ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆ (NDRF) ಮತ್ತು ರಾಜ್ಯ ವಿಪತ್ತು ಸ್ಪಂದನಾ ಪಡೆ (SDRF) ಯನ್ನು ಸನ್ನದ್ಧ ಸ್ಥಿತಿಯಲ್ಲಿಡುವುದು. ಯಾತ್ರಾರ್ಥಿಗಳಿಗೆ ನಿರಂತರ ವಿದ್ಯುತ್, ಕುಡಿಯುವ ನೀರು ಮತ್ತು ಸುಸಜ್ಜಿತ ರಸ್ತೆ ಸಂಪರ್ಕವನ್ನು ಕಲ್ಪಿಸುವುದು ಸೇರಿದಂತೆ ಹಲವು ವಿಷಯಗಳ ಬಗ್ಗೆ ಇಂದಿನ ಸಭೆಯಲ್ಲಿ ಸೂಚನೆ ನೀಡಲಾಯಿತು.
2 ಗಂಟೆಗಳಿಗೂ ಹೆಚ್ಚು ಕಾಲ ನಡೆದ ಸಭೆಯಲ್ಲಿ, ಗೃಹ ಸಚಿವ ಅಮಿತ್ ಶಾ ಎಲ್ಲಾ ಭದ್ರತಾ ಸಂಸ್ಥೆಗಳಿಗೆ ಭದ್ರತಾ ಗ್ರಿಡ್ ಅನ್ನು ಬಲಪಡಿಸಲು ಮತ್ತು ಉತ್ತಮ ಸಮನ್ವಯದ ಮೂಲಕ ಬಾಬಾ ಬರ್ಫಾನಿ ಭೇಟಿಗೆ ಪ್ರಯಾಣಿಸುವ ಯಾತ್ರಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ನಿರ್ದೇಶನ ನೀಡಿದರು. ಈ ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಅಮರನಾಥ ಯಾತ್ರೆಯಲ್ಲಿ ಯಾತ್ರಾರ್ಥಿಗಳಿಗೆ ಅತ್ಯುನ್ನತ ಭದ್ರತೆ ಮತ್ತು ಸುಗಮ ಪ್ರಯಾಣವನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಸಂಪೂರ್ಣವಾಗಿ ಬದ್ಧವಾಗಿದೆ ಎಂದು ಹೇಳಿದರು.

