ನವದೆಹಲಿ: ವೆನೆಜುವೆಲಾದಲ್ಲಿ ಪ್ರಬಲ ಭೂಕಂಪ ಸಂಭವಿಸಿದ ಹಿನ್ನೆಲೆಯಲ್ಲಿ ಭಾರತವು ಅಗತ್ಯವಿರುವ ಎಲ್ಲಾ ರೀತಿಯ ನೆರವು ಒದಗಿಸಲು ಸಿದ್ಧವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ತಿಳಿಸಿದ್ದಾರೆ.
'ವೆನೆಜುವೆಲಾದಲ್ಲಿ ಭೀಕರ ಭೂಕಂಪಗಳಿಂದ ಉಂಟಾದ ವಿನಾಶದಿಂದ ತೀವ್ರ ಆಘಾತವಾಗಿದೆ.
ಭಾರತೀಯರ ಪರವಾಗಿ ನಾನು ವೆನೆಜುವೆಲಾ ಸರ್ಕಾರ ಮತ್ತು ಅಲ್ಲಿನ ಜನತೆಗೆ ವಿಶೇಷವಾಗಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಸಂತಾಪವನ್ನು ವ್ಯಕ್ತಪಡಿಸುತ್ತೇನೆ' ಎಂದು 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.
'ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ. ಈ ಕಷ್ಟದ ಸಮಯದಲ್ಲಿ ಸಂತ್ರಸ್ತರಾದ ಎಲ್ಲರೊಂದಿಗೆ ನಾವು ಬೆಂಬಲವಾಗಿ ನಿಲ್ಲುತ್ತೇವೆ. ಭಾರತವು ಸಾಧ್ಯವಿರುವ ಎಲ್ಲಾ ರೀತಿಯ ನೆರವು ಒದಗಿಸಲು ಸಿದ್ಧವಿದೆ' ಎಂದೂ ಅವರು ತಿಳಿಸಿದ್ದಾರೆ.
ಬುಧವಾರ ಸಂಜೆ ವೆನೆಜುವೆಲಾ ಕರಾವಳಿಯಲ್ಲಿ ಪ್ರಬಲ ಭೂಕಂಪ ಸಂಭವಿಸಿದ ಪರಿಣಾಮ ವೆನೆಜುವೆಲಾ ರಾಜಧಾನಿ ಕರಾಕಸ್ನಲ್ಲಿ ಬೃಹತ್ ಕಟ್ಟಡಗಳು ಧರೆಗುರುಳಿಸಿದ್ದು, ಜನರು ಭಯಭೀತರಾಗಿ ಹೊರಗೆ ಓಡಿ ಬಂದಿದ್ದಾರೆ. ದೇಶದ ಪ್ರಮುಖ ವಿಮಾನ ನಿಲ್ದಾಣವನ್ನು ಮುಚ್ಚಬೇಕಾಗಿ ಬಂದ ಹಿನ್ನೆಲೆಯಲ್ಲಿ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ ಎಂದು ವರದಿಯಾಗಿದೆ.

