ನವದೆಹಲಿ: ದೇಶ ಎದುರಿಸುತ್ತಿರುವ ರಾಜಕೀಯ, ಆರ್ಥಿಕ, ಸಾಮಾಜಿಕ ಹಾಗೂ ವಿದೇಶಾಂಗ ನೀತಿ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ವಿರೋಧ ಪಕ್ಷಗಳು ಮತ್ತಷ್ಟು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದರು.
ಸೋಮವಾರ ನಡೆದ INDIA ಮೈತ್ರಿಕೂಟದ ನಾಯಕರ ಸಭೆಯಲ್ಲಿ ಮಾತನಾಡಿದ ಅವರು, ಸುಮಾರು ಮೂರು ವರ್ಷಗಳ ಹಿಂದೆ ರಚನೆಯಾದ IಓಆIಂ ಮೈತ್ರಿಕೂಟವು ಸಂಸತ್ತಿನಲ್ಲಿ ತನ್ನ ಶಕ್ತಿಯನ್ನು ಪ್ರದರ್ಶಿಸಿದ್ದು, ಮುಂದಿನ ದಿನಗಳಲ್ಲಿ ಈ ಒಗ್ಗಟ್ಟನ್ನು ಇನ್ನಷ್ಟು ಬಲಪಡಿಸುವ ಅಗತ್ಯವಿದೆ ಎಂದು ಹೇಳಿದರು.
ಎಪ್ರಿಲ್ 17ರಂದು ಲೋಕಸಭೆಯಲ್ಲಿ ವಿರೋಧ ಪಕ್ಷಗಳು ಒಗ್ಗೂಡಿ ಸರ್ಕಾರದ ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಸೋಲಿಸಿದ ಉದಾಹರಣೆಯನ್ನು ಉಲ್ಲೇಖಿಸಿದ ಖರ್ಗೆ, "ಆ ಮನೋಭಾವವನ್ನು ಮತ್ತಷ್ಟು ಬಲಪಡಿಸಿ ಮುಂದುವರಿಯಬೇಕು. ದೇಶ ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಬಲಿಷ್ಠ ಮತ್ತು ಏಕೀಕೃತ ವಿರೋಧ ಪಕ್ಷ ಅಗತ್ಯವಾಗಿದೆ" ಎಂದು ಹೇಳಿದರು.
23 ವಿರೋಧ ಪಕ್ಷಗಳ ನಾಯಕರು ಭಾಗವಹಿಸುತ್ತಿರುವ ಈ ಸಭೆ, INDIA ಮೈತ್ರಿಕೂಟದ ಆಂತರಿಕ ಏಕತೆಯ ಕುರಿತು ಪ್ರಶ್ನೆಗಳು ಉದ್ಭವಿಸಿರುವ ನಡುವೆಯೇ ನಡೆಯುತ್ತಿದೆ. ಪ್ರಮುಖ ಮಿತ್ರಪಕ್ಷಗಳಾದ ಆಒಏ ಮತ್ತು ಆಮ್ ಆದ್ಮಿ ಪಕ್ಷ (AAP) ಸಭೆಯಿಂದ ದೂರ ಉಳಿದಿದ್ದು, ಕಾಂಗ್ರೆಸ್ ಪಕ್ಷದ ಪಾತ್ರದ ಕುರಿತು ಕೆಲವು ಮಿತ್ರಪಕ್ಷಗಳು ಅಸಮಾಧಾನ ವ್ಯಕ್ತಪಡಿಸಿರುವುದು ಗಮನ ಸೆಳೆದಿದೆ.
ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ಲಕ್ಷಾಂತರ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಅಪಾಯ ಎದುರಿಸುತ್ತಿದ್ದಾರೆ ಎಂದು ಆರೋಪಿಸಿದ ಖರ್ಗೆ, ಸಂವಿಧಾನದ ಮೇಲಿನ ದಾಳಿಗಳು ಮುಂದುವರಿದಿವೆ ಎಂದು ಹೇಳಿದರು. ರಾಜಕೀಯ ವಿರೋಧಿಗಳನ್ನು ಬೆದರಿಸಲು ಹಾಗೂ ಕಿರುಕುಳ ನೀಡಲು ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ಬಳಸುತ್ತಿದೆ. ಬಿಜೆಪಿ ಆಡಳಿತದಲ್ಲಿಲ್ಲದ ರಾಜ್ಯಗಳ ವಿರುದ್ಧ ತಾರತಮ್ಯ ತೋರಲಾಗುತ್ತಿದೆ ಎಂದು ಅವರು ಆರೋಪಿಸಿದರು.
ದೇಶದ ಆರ್ಥಿಕ ಪರಿಸ್ಥಿತಿ ಕುರಿತು ಕಳವಳ ವ್ಯಕ್ತಪಡಿಸಿದ ಖರ್ಗೆ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮುಂದುವರಿದಿದ್ದು, ಆರ್ಥಿಕ ವಾತಾವರಣ ಅತ್ಯಂತ ನಕಾರಾತ್ಮಕವಾಗಿದೆ ಎಂದು ಹೇಳಿದರು. ಯುವಜನರಿಗೆ ಅಗತ್ಯವಿರುವ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಸಲು ಹೂಡಿಕೆಗಳು ಸಾಕಾಗುತ್ತಿಲ್ಲ ಎಂದರು.
ಹಲವು ಕ್ಷೇತ್ರಗಳಲ್ಲಿ ಖಾಸಗಿ ಏಕಸ್ವಾಮ್ಯ ಹೆಚ್ಚುತ್ತಿರುವ ಬಗ್ಗೆ ಎಚ್ಚರಿಕೆ ನೀಡಿದ ಅವರು, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ (ಒSಒಇ) ವಲಯ ಗಂಭೀರ ಸಂಕಷ್ಟವನ್ನು ಎದುರಿಸುತ್ತಿದೆ ಎಂದು ಹೇಳಿದರು.
NEET ಹಾಗೂ CBSC ಸೇರಿದಂತೆ ಸಾರ್ವಜನಿಕ ಪರೀಕ್ಷೆಗಳ ನಿರ್ವಹಣೆಯನ್ನು ಟೀಕಿಸಿದ ಖರ್ಗೆ, ಪುನರಾವರ್ತಿತ ವೈಫಲ್ಯಗಳು ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಮತ್ತು ಆಕಾಂಕ್ಷೆಗಳಿಗೆ ಧಕ್ಕೆ ತಂದಿವೆ ಎಂದು ಆರೋಪಿಸಿದರು.
ಸಮಾಜದ ದುರ್ಬಲ ವರ್ಗಗಳ ವಿರುದ್ಧದ ದೌರ್ಜನ್ಯಗಳು, ವಿಶೇಷವಾಗಿ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಮುಂದುವರಿದಿವೆ ಎಂದು ಆರೋಪಿಸಿದ ಅವರು, ಭಾರತದ ಸಾಂಪ್ರದಾಯಿಕ ವಿದೇಶಾಂಗ ನೀತಿಯ ಮೌಲ್ಯಗಳು ಮತ್ತು ತತ್ವಗಳಿಂದ ಕೇಂದ್ರ ಸರ್ಕಾರ ದೂರ ಸರಿದಿದೆ ಎಂದು ಟೀಕಿಸಿದರು.
ಸಭೆಯಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ವಿಪಕ್ಷ ನಾಯಕ ರಾಹುಲ್ ಗಾಂಧಿ, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್, ಆರ್ಜೆಡಿ ನಾಯಕ ತೇಜಸ್ವಿ ಯಾದವ್, ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಸಿಪಿಐ-ಎಂಎಲ್ ಪ್ರಧಾನ ಕಾರ್ಯದರ್ಶಿ ದೀಪಂಕರ್ ಭಟ್ಟಾಚಾರ್ಯ, ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ, ಎನ್ಸಿಪಿ ನಾಯಕಿ ಸುಪ್ರಿಯಾ ಸುಳೆ, ವಿಸಿಕೆ ನಾಯಕ ಥೋಲ್ ತಿರುಮಾವಳವನ್ ಹಾಗೂ ಸಿಪಿಎಂ ಸಂಸದ ಜಾನ್ ಬ್ರಿಟ್ಟಾಸ್ ಸೇರಿದಂತೆ ಹಲವು ನಾಯಕರು ಭಾಗವಹಿಸಿದರು.
ತಮಿಳುನಾಡಿನ ಟಿವಿಕೆ ಪಕ್ಷಕ್ಕೆ ಸಂಸತ್ತಿನಲ್ಲಿ ಯಾವುದೇ ಸದಸ್ಯರಿಲ್ಲದ ಕಾರಣ ಸಭೆಗೆ ಆಹ್ವಾನ ನೀಡಲಾಗಿಲ್ಲ ಎಂದು ಮೂಲಗಳು ತಿಳಿಸಿವೆ.
ಸಭೆಯಲ್ಲಿ ಎಲ್ಲ ಮಿತ್ರಪಕ್ಷಗಳ ಅಭಿಪ್ರಾಯಗಳನ್ನು ಆಲಿಸಿದ ಬಳಿಕ IಓಆIಂ ಮೈತ್ರಿಕೂಟದ ಮುಂದಿನ ಕಾರ್ಯತಂತ್ರದ ಕುರಿತು ಚರ್ಚೆ ನಡೆಯಲಿದ್ದು, ಸಭೆಯ ನಂತರ ಮೈತ್ರಿಕೂಟದ ನಾಯಕರು ಜಂಟಿ ಸುದ್ದಿಗೋಷ್ಠಿಯಲ್ಲಿ ತಮ್ಮ ನಿರ್ಧಾರಗಳನ್ನು ಪ್ರಕಟಿಸುವ ನಿರೀಕ್ಷೆಯಿದೆ.

