ಜನರ ವಿರುದ್ಧದ ದೌರ್ಜನ್ಯವನ್ನು ಮಂಗಳವಾರ ಟೀಕಿಸಿರುವ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಅಲ್ಲಿ ನಡೆಯುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆಗಾಗಿ ಪಾಕಿಸ್ತಾನ ಸರ್ಕಾರವನ್ನು ಹೊಣೆಗಾರನಾಗಿ ಮಾಡುವಂತೆ ಅಂತರರಾಷ್ಟ್ರೀಯ ಸಮುದಾಯಕ್ಕೆ ಕರೆ ನೀಡಿದೆ.
ಪಾಕ್ ಆಕ್ರಮಿತ ಕಾಶ್ಮೀರದ ಹಲವು ಭಾಗಗಳಲ್ಲಿ ಪ್ರತಿಭಟನಾಕಾರರ ವಿರುದ್ಧ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಭಾರತ ಈ ಪ್ರತಿಕ್ರಿಯೆ ನೀಡಿದೆ.
ಪಾಕಿಸ್ತಾನವು ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಮತ್ತು ಮಾನವ ಹಕ್ಕುಗಳ ಉಲ್ಲಂಘನೆಯಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಹತಾಶ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಆರೋಪಿಸಿದ್ದಾರೆ.
ಮಾಧ್ಯಮ ಗೋಷ್ಠಿಯೊಂದರಲ್ಲಿ ಮಾತನಾಡಿದ ಜೈಸ್ವಾಲ್, ಆರ್ಥಿಕ ಸಂಕಷ್ಟ ಮತ್ತು ಮೂಲಭೂತ ಹಕ್ಕುಗಳ ಕೊರತೆಯ ವಿರುದ್ಧ ಪ್ರತಿಭಟಿಸುತ್ತಿದ್ದ ನಾಗರಿಕರ ಮೇಲೆ ಪಾಕಿಸ್ತಾನಿ ಭದ್ರತಾ ಪಡೆಗಳು ನಡೆಸಿರುವ ಕಠಿಣ ದಮನ ಕಾರ್ಯಾಚರಣೆಯ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದರು.
'ಈ ಸಂದರ್ಭದಲ್ಲಿ, ಪಾಕಿಸ್ತಾನದಿಂದ ನಕಲಿ ಸುದ್ದಿ ಮತ್ತು ವೀಡಿಯೊಗಳು ನಿರಂತರವಾಗಿ ಹೊರಬರುತ್ತಿರುವುದನ್ನು ನಾವು ನೋಡುತ್ತಿದ್ದೇವೆ. ಇದು ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಮತ್ತು ತಾನು ನಡೆಸಿರುವ ಮಾನವ ಹಕ್ಕುಗಳ ಉಲ್ಲಂಘನೆಯಿಂದ ಗಮನವನ್ನು ಬೇರೆಡೆಗೆ ತಿರುಗಿಸಲು ಪಾಕಿಸ್ತಾನ ಮಾಡುತ್ತಿರುವ ಹತಾಶ ಪ್ರಯತ್ನವಾಗಿದೆ' ಎಂದು ಜೈಸ್ವಾಲ್ ಹೇಳಿದರು.
ಆಡಳಿತ, ಆರ್ಥಿಕ ಸಂಕಷ್ಟ ಮತ್ತು ಶಾಸನಸಭೆಯ ಮೀಸಲು ಸ್ಥಾನಗಳ ಹಂಚಿಕೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಅಲ್ಲಿನ ನಿವಾಸಿಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.
ಗಗನಕ್ಕೇರುತ್ತಿರುವ ಅಗತ್ಯ ವಸ್ತುಗಳ ಬೆಲೆ, ದುಬಾರಿ ವಿದ್ಯುತ್ ಬಿಲ್ ಮತ್ತು ಅಗತ್ಯ ವಸ್ತುಗಳ ಕೊರತೆಯ ವಿರುದ್ಧವೂ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಅಶಾಂತಿಯನ್ನು ಹತ್ತಿಕ್ಕಲು ಪಾಕಿಸ್ತಾನಿ ಆಡಳಿತವು ಅರೆಸೇನಾ ಪಡೆಗಳನ್ನು ನಿಯೋಜಿಸಿದೆ. ಇದು ಹಿಂಸಾತ್ಮಕ ಸಂಘರ್ಷ ಮತ್ತು ಸಾವುನೋವುಗಳಿಗೆ ಕಾರಣವಾಗಿದೆ.

