ಪೆರ್ಲ: ಅತಿಯಾದ ಮೊಬೈಲ್ ಬಳಕೆಯಿಂದ ದೂರಾಗಿ, ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡುವ ಮೂಲಕ ತಮ್ಮ ಭವಿಷ್ಯ ಉಜ್ವಲಗೊಳಿಸುವತ್ತ ವಿದ್ಯಾರ್ಥಿಗಳು ಶ್ರಮವಹಿಸಬೇಕು ಎಂಬುದಾಗಿ ಎಣ್ಮಕಜೆ ಗ್ರಾಪಂ ಸದಸ್ಯೆ, ಸಮಾಜಸೇವಕಿ ಆಯಿಷಾ ಎ.ಎ ತಿಳಿಸಿದ್ದಾರೆ.
ಅವರು ಪೆರ್ಲ ಶ್ರೀ ಸತ್ಯನಾರಾಯಣ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ಶಾಲಾ ಪ್ರವೇಶೋತ್ಸವ, ಎಸ್ಸೆಸೆಲ್ಸಿಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನಡೆದ ಅಭಿನಂದನಾ ಸಮಾರಂಭದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಶಾಲೆಗೆ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳನ್ನು ಸಿಂಗಾರಿಮೇಳದೊಂದಿಗೆ ಬರಮಾಡಿಕೊಳ್ಳಲಾಯಿತು. ಎಣ್ಮಕಜೆ ಗ್ರಾಪಂ ಸದಸ್ಯ ಕೃಷ್ಣಪ್ಪ ಬಜಕೂಡ್ಲು, ಶಾಲಾ ಆಡಳಿತ ಸಮಿತಿ ಉಪಾಧ್ಯಕ್ಷ ಸದಾಶಿವ ಭಟ್ ಹರಿನಿಲಯ, ಶಾಲಾ ಮುಖ್ಯ ಶಿಕ್ಷಕ ಎನ್. ಕೇಶವಪ್ರಕಾಶ್, ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪುರುಷೋತ್ತಮ ಬಿ.ಎಂ, ಪದಾಧಿಕಾರಿಗಳಾದ ಉಮೇಶ್ ಕೆ. ಪೆರ್ಲ, ನಾರಾಯಣ ನಾಯಕ್, ಶ್ರೀಸತ್ಯನಾರಾಯಣ ಕಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಸಂಧ್ಯಾ ಟೀಚರ್, ಪಿಟಿಎ ಅಧ್ಯಕ್ಷ ರಾಜೇಶ್ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.
ಈ ಸಂದರ್ಭ ನಡೆದ ಸಮಾರಂಭದಲ್ಲಿ ಬದಿಯಡ್ಕ ಪೊಲೀಸ್ ಠಾಣೆ ಸಿಬ್ಬಂದಿ ಸೈಬರ್ ಅಪರಾಧ ಹಾಗೂ ಮಾದಕದ್ರವ್ಯ ಬಳಕೆ ವಿರುದ್ಧ ಜಾಗೃತಿ ಸಂದೇಶ ನೀಡಿದರು. ಎಸ್ಸೆಸೆಲ್ಸಿಯಲ್ಲಿ ಎಲ್ಲಾ ವಿಷಯಗಳಲ್ಲಿ ಎಪ್ಲಸ್ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಆಯಿಷಾ ಎ.ಎ ಅಭಿನಂದಿಸಿದರು.



