ನವದೆಹಲಿ: ನೀಟ್-ಯುಜಿ ಮರುಪರೀಕ್ಷೆ ವೇಳೆ ಪ್ರಶ್ನೆಪತ್ರಿಕೆ ಸೋರಿಕೆಯಾಗುವುದನ್ನು ತಡೆಯಲು ಕೇಂದ್ರ ಸರ್ಕಾರ ದೇಶದಾದ್ಯಂತ ಟೆಲಿಗ್ರಾಂ ಆಯಪ್ ಅನ್ನು ತಾತ್ಕಾಲಿಕವಾಗಿ ನಿಷೇಧಿಸಿದೆ. ಕೇಂದ್ರ ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ 'ಟೆಲಿಗ್ರಾಂ' ಆಯಪ್ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದೆ.
ನ್ಯಾಯಾಲಯವು ಬುಧವಾರವೇ ಇದರ ತುರ್ತು ವಿಚಾರಣೆ ನಡೆಸಲು ಸಮ್ಮತಿಸಿದೆ ಎಂದು ವರದಿಯಾಗಿದೆ.
ನ್ಯಾಯಮೂರ್ತಿ ತೇಜಸ್ ಕರಿಯಾ ಅವರ ಏಕ ಸದಸ್ಯ ಪೀಠದ ಮುಂದೆ ಅರ್ಜಿ ವಿಚಾರಣೆಗೆ ಬರಲಿದ್ದು ಇಂದು ಮಧ್ಯಾಹ್ನವೇ ಅರ್ಜಿ ವಿಚಾರಣೆ ನಡೆಸಲಾಗುವುದು ಎಂದು ನ್ಯಾಯಪೀಠ ಹೇಳಿದೆ ಎಂದು ವರದಿಯಾಗಿದೆ.
ಜೂನ್ 21ರ ಭಾನುವಾರ ನೀಟ್ ಮರುಪರೀಕ್ಷೆ ನಿಗದಿಯಾಗಿದೆ. ಈ ಹಿನ್ನೆಲೆಯಲ್ಲಿ ಪರೀಕ್ಷಾ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಜಾಲ ಹಾಗೂ ಸುಳ್ಳು ಸುದ್ದಿ ಹರಡುವುದಕ್ಕೆ ಬ್ರೇಕ್ ಹಾಕಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಶಿಫಾರಸು ಮಾಡಿತ್ತು. ಅದರಂತೆ, ಕೇಂದ್ರ ಸರ್ಕಾರ ಜೂನ್ 22ರವರೆಗೆ ದೇಶದಲ್ಲಿ ಟೆಲಿಗ್ರಾಂ ಬಳಕೆಯನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿ ಮಂಗಳವಾರ ಆದೇಶ ಹೊರಡಿಸಿತ್ತು.
ಜೂನ್ 21ರಂದು ಮರುಪರೀಕ್ಷೆ ಯಾವುದೇ ಅಕ್ರಮಗಳಿಲ್ಲದೆ, ಅತ್ಯಂತ ಪಾರದರ್ಶಕವಾಗಿ ನಡೆಯಬೇಕು ಎನ್ನುವ ಉದ್ದೇಶದಿಂದ ಜೂನ್ 22ರವರೆಗೆ ಟೆಲಿಗ್ರಾಂ ಮೇಲೆ ನಿರ್ಬಂಧ ಹೇರಲಾಗಿದೆ. ಈ ಬಾರಿ ಯಾವುದೇ ತಪ್ಪುಗಳಾಗಲು ನಾವು ಬಿಡುವುದಿಲ್ಲ. ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಅಗತ್ಯವಿರುವ ಎಲ್ಲಾ ಕಠಿಣ ಕ್ರಮಗಳನ್ನು ಕೈಗೊಳ್ಳಲಿದ್ದೇವೆ ಎಂದು ಎನ್ಟಿಎ ಮಹಾನಿರ್ದೇಶಕ ಅಭಿಷೇಕ್ ಸಿಂಗ್ ಹೇಳಿದ್ದಾರೆ.
ಕೇಂದ್ರ ಸರ್ಕಾರದ ಈ ದಿಢೀರ್ ಕ್ರಮಕ್ಕೆ ಟೆಲಿಗ್ರಾಂ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಾವೆಲ್ ಡುರೊವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಭಾರತದಲ್ಲಿ ಟೆಲಿಗ್ರಾಂ ಆಯಪ್ ಅನ್ನು ನಿಷೇಧಿಸಿರುವುದು, ಅದು ತಾತ್ಕಾಲಿಕವೇ ಆಗಿದ್ದರೂ ಸಹ ತಪ್ಪು ನಿರ್ಧಾರವಾಗಿದೆ ಎಂದು ಅವರು ಟೀಕಿಸಿದ್ದಾರೆ.

