ನವದೆಹಲಿ: ಕೇಂದ್ರ ಸಚಿವ, ಕೇರಳಂನ ಬಿಜೆಪಿ ಮುಖಂಡ ಜಾರ್ಜ್ ಕುರಿಯನ್ (65) ಅವರು ರಾಜ್ಯಸಭಾ ಸದಸ್ಯತ್ವದ ಅವಧಿ ಪೂರ್ಣಗೊಂಡ ಬೆನ್ನಲ್ಲೇ, ಮಂಗಳವಾರ ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕುರಿಯನ್ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.
ಮಧ್ಯಪ್ರದೇಶದಿಂದ 2024ರಲ್ಲಿ ರಾಜ್ಯಸಭೆಗೆ ಆಯ್ಕೆಯಾಗಿದ್ದ ಕುರಿಯನ್, ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ಅಲ್ಪಸಂಖ್ಯಾತ ವ್ಯವಹಾರ, ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಖಾತೆಯ ರಾಜ್ಯ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಕ್ರಿಶ್ಚಿಯನ್ ಸಮುದಾಯದಿಂದ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿದ್ದ ಏಕೈಕ ಸದಸ್ಯರಾಗಿದ್ದರು.
ಕುರಿಯನ್ ಅವರ ರಾಜ್ಯಸಭಾ ಸದಸ್ಯತ್ವದ ಅವಧಿ ಜೂನ್ 21ರಂದು ಪೂರ್ಣಗೊಂಡಿತ್ತು. ಬಿಜೆಪಿಯ ಕೇಂದ್ರ ನಾಯಕತ್ವವು ಇತ್ತೀಚಿನ ರಾಜ್ಯಸಭಾ ಚುನಾವಣೆಯಲ್ಲಿ ಅವರನ್ನು ಪುನರಾಯ್ಕೆ ಮಾಡದ ಕಾರಣ ಅವರು ರಾಜೀನಾಮೆ ಸಲ್ಲಿಸಿದ್ದಾರೆ.
ಕುರಿಯನ್ ಅವರು ಕೇರಳಂನಲ್ಲಿ ಪಕ್ಷ ಸಂಘಟನೆಗೆ ಮರಳುವ ಸಾಧ್ಯತೆ ಇದ್ದು, ಈ ಬಗ್ಗೆ ತಮ್ಮ ಆಸಕ್ತಿಯನ್ನು ಪಕ್ಷದ ನಾಯಕತ್ವಕ್ಕೆ ತಿಳಿಸಿದ್ದಾರೆ ಎಂದು ಮೂಲಗಳು ಹೇಳಿವೆ.
ಕೇಂದ್ರ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಅವರಿಂದ ತೆರವಾಗಿದ್ದ ಸ್ಥಾನಕ್ಕೆ ಕುರಿಯನ್ ಅವರು ಆಯ್ಕೆಯಾಗಿದ್ದರು. ಮಧ್ಯಪ್ರದೇಶದ ಗುನಾ ಲೋಕಸಭಾ ಕ್ಷೇತ್ರದಿಂದ 2024ರಲ್ಲಿ ಆಯ್ಕೆಯಾಗಿದ್ದ ಸಿಂಧಿಯಾ, ಸದ್ಯ ಕೇಂದ್ರ ದೂರಸಂಪರ್ಕ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಅಲ್ಪಸಂಖ್ಯಾತ ವ್ಯವಹಾರ ಖಾತೆಯ ಮಾಜಿ ಸಚಿವರಾಗಿದ್ದ ಮುಖ್ತಾರ್ ಅಬ್ಬಾಸ್ ನಖ್ವಿ ಅವರು 2022ರಲ್ಲಿ ರಾಜ್ಯಸಭಾ ಅವಧಿ ಪೂರ್ಣಗೊಳ್ಳಲು ಇನ್ನೂ ಒಂದು ದಿನ ಬಾಕಿ ಇರುವಾಗಲೇ ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದರು.
'ಕೇಂದ್ರ ಸಚಿವನಾಗುತ್ತೇನೆ ಎಂಬ ನಿರೀಕ್ಷೆ ಯಾವತ್ತೂ ಇರಲಿಲ್ಲ. ಕನಸಿನಲ್ಲೂ ಈ ಬಗ್ಗೆ ಯೋಚಿಸಿರಲಿಲ್ಲ. ನರೇಂದ್ರ ಮೋದಿ ಅವರು ಪ್ರಧಾನಿಯಾದ ಕಾರಣದಿಂದ ಮಾತ್ರ ನನಗೆ ಕೇಂದ್ರ ಸಚಿವ ಸಂಪುಟದಲ್ಲಿ ಅವಕಾಶ ಲಭಿಸಿತು. ಧನ್ಯವಾದ' ಎಂದು ಕುರಿಯನ್ ತಮ್ಮ ಫೇಸ್ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

