ನವದೆಹಲಿ (PTI): ತಮಿಳುನಾಡು ಮತ್ತು ಕೇರಳದಲ್ಲಿ ವ್ಯಾಪಿಸಿರುವ ಅಗಸ್ತ್ಯಮಲೈ ಜೀವವೈವಿಧ್ಯ ಸಂರಕ್ಷಿತ ಪ್ರದೇಶದಲ್ಲಿನ ಒತ್ತುವರಿ ತೆರವಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.
ಒತ್ತುವರಿಯನ್ನು ಕಾಲಮಿತಿಯಲ್ಲಿ ತೆರವುಗೊಳಿಸುವ ಯೋಜನೆಯನ್ನು ಸಿದ್ಧಪಡಿಸಲು ಮತ್ತು ಆದ್ಯತೆಯ ಮೇರೆಗೆ ಅನುಷ್ಠಾನಗೊಳಿಸಲು ಸುಪ್ರೀಂ ಕೋರ್ಟ್ ಆದೇಶಿಸಿದೆ.
ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರನ್ನು ಒಳಗೊಂಡ ನ್ಯಾಯಪೀಠವು, ಒತ್ತುವರಿದಾರರು ಎಂದು ಗುರುತಿಸಲಾದ 118 ಹಾಲಿ ಮತ್ತು ನಿವೃತ್ತ ಸರ್ಕಾರಿ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಮತ್ತು ಕಾನೂನು ಕ್ರಮ ಜರುಗಿಸುವಂತೆ ಸೂಚಿಸಿದೆ.
ಥೇಣಿ ಜಿಲ್ಲಾಧಿಕಾರಿಯವರು ಸಲ್ಲಿಸಿರುವ ವರದಿಯಲ್ಲಿ, ಜಿಲ್ಲೆಯಾದ್ಯಂತ ಇರುವ ಸಂರಕ್ಷಿತ ಅರಣ್ಯ ಪ್ರದೇಶದ 5.072 ಹೆಕ್ಟೇರ್ ಜಮೀನನ್ನು 4,601 ಮಂದಿ ಒತ್ತುವರಿ ಮಾಡಿಕೊಂಡಿದ್ದಾರೆ. ಅರಣ್ಯ ಜಮೀನಿನ ಒಳಗೆ ಅನುಮತಿ ಪಡೆಯದೆಯೇ 116 ಸರ್ಕಾರಿ ಮತ್ತು ಸಾರ್ವಜನಿಕ ಕಟ್ಟಡಗಳನ್ನು ನಿರ್ಮಿಸಲಾಗಿದೆ ಎಂಬ ಮಾಹಿತಿ ಇದೆ ಎಂದು ನ್ಯಾಯಪೀಠ ತಿಳಿಸಿದೆ.
ಬಳಿಕ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 1ಕ್ಕೆ ಮುಂದೂಡಿದೆ.

