ತಮಗೆ ಮಧ್ಯಂತರ ಪರಿಹಾರ ನಿರಾಕರಿಸಿದ್ದ ಜನವರಿಯ ಆದೇಶವನ್ನು ಸುಪ್ರೀಂ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದ್ದ ಸುಮಾರು ಒಂದು ತಿಂಗಳ ಬಳಿಕ ಈ ಅರ್ಜಿಗಳು ಸಲ್ಲಿಕೆಯಾಗಿವೆ.
ಶರ್ಜೀಲ್ ಇಮಾಮ್ ಸಲ್ಲಿಸಿರುವ ಜಾಮೀನು ಅರ್ಜಿಯಲ್ಲಿ, ಸುಪ್ರೀಂ ಕೋರ್ಟ್ ಜಾಮೀನು ನಿರಾಕರಿಸಿ ಆರು ತಿಂಗಳು ಕಳೆದಿದ್ದರೂ ಪ್ರಕರಣದ ವಿಚಾರಣೆಯಲ್ಲಿ ಯಾವುದೇ ಅರ್ಥಪೂರ್ಣ ಪ್ರಗತಿ ಕಂಡುಬಂದಿಲ್ಲ ಎಂದು ಉಲ್ಲೇಖಿಸಲಾಗಿದೆ. ಪ್ರಕರಣದಲ್ಲಿನ ಆರೋಪಗಳ ಕುರಿತ ವಾದ ಪ್ರಕ್ರಿಯೆ ಇನ್ನೂ ಪೂರ್ಣಗೊಂಡಿಲ್ಲ. ತಾವು ಸುಮಾರು ಆರು ವರ್ಷಗಳಿಂದ ಜೈಲಿನಲ್ಲಿದ್ದು, ವಿಚಾರಣೆ ಗಮನಾರ್ಹವಾಗಿ ವಿಳಂಬವಾಗುತ್ತಿದೆ ಎಂದು ಇಮಾಮ್ ಹೇಳಿದ್ದಾರೆ.
ಅರ್ಜಿಗಳಿಗೆ ಪ್ರತಿಕ್ರಿಯೆ ಸಲ್ಲಿಸುವಂತೆ ನ್ಯಾಯಾಲಯವು ದಿಲ್ಲಿ ಪೊಲೀಸರಿಗೆ ನಿರ್ದೇಶನ ನೀಡಿದ್ದು, ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 4ಕ್ಕೆ ನಿಗದಿಪಡಿಸಿದೆ ಎಂದು ವರದಿಗಳು ತಿಳಿಸಿವೆ.
2020ರ ಫೆಬ್ರವರಿಯಲ್ಲಿ ಈಶಾನ್ಯ ದಿಲ್ಲಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಬೆಂಬಲಿಗರು ಮತ್ತು ಅದನ್ನು ವಿರೋಧಿಸುತ್ತಿದ್ದವರ ನಡುವೆ ಭುಗಿಲೆದ್ದ ಕೋಮು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಉಮರ್ ಖಾಲಿದ್, ಶರ್ಜೀಲ್ ಇಮಾಮ್ ಹಾಗೂ ಇತರ ಹಲವು ಕಾರ್ಯಕರ್ತರನ್ನು ಜನವರಿ 2020ರಿಂದ ಸೆಪ್ಟೆಂಬರ್ 2020ರ ಅವಧಿಯಲ್ಲಿ ಬಂಧಿಸಲಾಗಿತ್ತು.
ಈ ಹಿಂಸಾಚಾರದಲ್ಲಿ 53 ಮಂದಿ ಮೃತಪಟ್ಟಿದ್ದು, ನೂರಾರು ಮಂದಿ ಗಾಯಗೊಂಡಿದ್ದರು. ಮೃತಪಟ್ಟವರಲ್ಲಿ ಹೆಚ್ಚಿನವರು ಮುಸ್ಲಿಮರಾಗಿದ್ದರು.
ಪ್ರಕರಣದ ಆರೋಪಿಗಳ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA), ಸಾರ್ವಜನಿಕ ಆಸ್ತಿಗೆ ಹಾನಿ ತಡೆಗಟ್ಟುವಿಕೆ ಕಾಯ್ದೆ, ಶಸ್ತ್ರಾಸ್ತ್ರ ಕಾಯ್ದೆ ಹಾಗೂ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ನಡೆದ ಪ್ರತಿಭಟನೆಗಳನ್ನು ಸಂಘಟಿಸಿದ್ದವರೇ ಹಿಂಸಾಚಾರವನ್ನು ಪೂರ್ವಯೋಜಿತವಾಗಿ ರೂಪಿಸಿದ್ದು, ಕೇಂದ್ರ ಸರ್ಕಾರವನ್ನು ದೂಷಿಸಲು ಇದು ರೂಪಿಸಲಾದ ವ್ಯಾಪಕ ಪಿತೂರಿಯ ಭಾಗವಾಗಿತ್ತು ಎಂದು ದಿಲ್ಲಿ ಪೊಲೀಸರು ಆರೋಪಿಸಿದ್ದಾರೆ.
ಮೇ 18ರಂದು ಸುಪ್ರೀಂ ಕೋರ್ಟ್ ಪೀಠವೊಂದು, UAPA ಅಡಿಯಲ್ಲಿ ದಾಖಲಾಗಿದ್ದ ಮತ್ತೊಂದು ಪ್ರಕರಣದ ಜಾಮೀನು ಅರ್ಜಿಯ ವಿಚಾರಣೆ ನಡೆಸುವ ವೇಳೆ, ಈ ಪ್ರಕರಣದಲ್ಲಿ ಜನವರಿಯಲ್ಲಿ ನೀಡಲಾಗಿದ್ದ ಆದೇಶದ ಕುರಿತು ಆಕ್ಷೇಪಿಸಿ ಅಭಿಪ್ರಾಯ ವ್ಯಕ್ತಪಡಿಸಿತ್ತು. ಭಯೋತ್ಪಾದನಾ ವಿರೋಧಿ ಕಾನೂನುಗಳ ಅಡಿಯಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿಯೂ 'ಜಾಮೀನು ನೀಡುವುದು ಸಾಮಾನ್ಯ ನಿಯಮ; ಜೈಲಿನಲ್ಲಿ ಇರಿಸುವುದು ಅಪವಾದ' ಎಂಬ ತತ್ವವನ್ನು ಮರೆಯಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.
ಆ ಬಳಿಕ ಮೇ 22ರಂದು ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಪಿ.ಬಿ. ವರಾಳೆ ಅವರಿದ್ದ ಸುಪ್ರೀಂ ಕೋರ್ಟ್ ಪೀಠವು, UAPA ಪ್ರಕರಣಗಳಲ್ಲಿ ದೀರ್ಘಕಾಲ ಬಂಧನದಲ್ಲಿರುವ ಆರೋಪಿಗಳಿಗೆ ಜಾಮೀನು ನೀಡುವ ಮಾನದಂಡಗಳ ಕುರಿತ ಕಾನೂನು ಪ್ರಶ್ನೆಯನ್ನೂ ಸುಪ್ರೀಂ ಕೋರ್ಟ್ ಪರಿಶೀಲನೆಗೆ ತೆಗೆದುಕೊಂಡಿತ್ತು. ವಿಸ್ತೃತ ಪೀಠಕ್ಕೆ ಒಪ್ಪಿಸಿತ್ತು.

