ಮುಂಬೈ: ರಾಜ್ಯದಾದ್ಯಂತದ ಗ್ರಾಮಾಂತರ ಪ್ರದೇಶದಲ್ಲಿ ಕುಡಿಯುವ ನೀರು ಸರಬರಾಜು ವ್ಯವಸ್ಥೆ ಕುರಿತು ಮಹಾರಾಷ್ಟ್ರ ಸರ್ಕಾರ ಸಲ್ಲಿಸುವ ವರದಿಗಳು ಸುಳ್ಳು ಮಾಹಿತಿಯಿಂದ ಕೂಡಿವೆ. ವಾಸ್ತವ ಚಿತ್ರಣವೇ ಬೇರೆ ಎಂದು ಬಾಂಬೆ ಹೈಕೋರ್ಟ್ ಮಂಗಳವಾರ ಚಾಟಿ ಬೀಸಿದೆ.
ನ್ಯಾಯಮೂರ್ತಿಗಳಾದ ಎ.ಎಸ್. ಗಡ್ಕರಿ ಮತ್ತು ಕಮಲ್ ಖಾಟಾ ಅವರಿದ್ದ ಪೀಠವು, ಕುಡಿಯುವ ನೀರಿನ ಕೊರತೆ ಕುರಿತು, ಅದರಲ್ಲೂ ಬುಡಕಟ್ಟು ಸಮುದಾಯದ ಪ್ರಾಬಲ್ಯವಿರುವ ಅಮರಾವತಿ ಜಿಲ್ಲೆಯ ಮೆಲ್ಘಾಟ್ ಪ್ರದೇಶದಲ್ಲಿನ ಸಮಸ್ಯೆಯ ಬಗ್ಗೆ ಸೋಮವಾರವಷ್ಟೇ ಕಳವಳ ವ್ಯಕ್ತಪಡಿಸಿತ್ತು. ಅಂತಹ ಪ್ರದೇಶಗಳಿಗೆ ಹೊಂದುವಂತೆ ನೀತಿ ನಿಯಮಗಳಲ್ಲಿ ಬದಲಾವಣೆಗಳನ್ನು ಮಾಡುವಂತೆ ಸರ್ಕಾರಕ್ಕೆ ಸೂಚಿಸಿತ್ತು.
ಮೆಲ್ಘಾಟ್ ಪ್ರದೇಶದಲ್ಲಿ ಅಪೌಷ್ಟಿಕತೆಯ ಪರಿಣಾಮವಾಗಿ ಗರ್ಭಿಣಿಯರು, ಬಾಣಂತಿಯರು ಮತ್ತು ಶಿಶುಗಳು ಸಾವಿಗೀಡಾದ ಪ್ರಕರಣ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ನಡೆಯುತ್ತಿದೆ. ತಾಪಮಾನ ಏರಿಕೆ ಒಂದೆಡೆಯಾದರೆ, ಶುದ್ಧ ಮತ್ತು ಕುಡಿಯಲು ಯೋಗ್ಯವಾದ ನೀರಿನ ಕೊರತೆಯು ಈ ಪ್ರದೇಶವನ್ನು ತೀವ್ರವಾಗಿ ಬಾಧಿಸುತ್ತಿದೆ. ಕಲುಷಿತ ನೀರಿನ ಸೇವನೆಯಿಂದ 13 ಮಂದಿ ಮೃತಪಟ್ಟಿದ್ದಾರೆ ಎಂದು ಅರ್ಜಿದಾರರು ಈಗಾಗಲೇ ಪೀಠಕ್ಕೆ ತಿಳಿಸಿದ್ದಾರೆ.
ಸರ್ಕಾರದ ಪರ ಹಾಜರಿದ್ದ ವಕೀಲೆ ಪೂಜಾ ಜೋಶಿ ಅವರು, ರಾಜ್ಯದ ಎಲ್ಲ ಗ್ರಾಮಗಳಿಗೆ ಟ್ಯಾಂಕರ್ಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಪೀಠಕ್ಕೆ ತಿಳಿಸಿದರು. ಆದಾಗ್ಯೂ, ಅಮರಾವತಿ ಜಿಲ್ಲೆಯ ಹಲವು ಹಳ್ಳಿಗಳಿಗೆ ಕುಡಿಯಲು ಯೋಗ್ಯವಾದ ನೀರು ಸರಬರಾಜು ಸಿಗುತ್ತಿಲ್ಲ, ಇದರಿಂದಾಗಿ ಹಲವರು ಅನಾರೋಗ್ಯಕ್ಕೆ ತುತ್ತಾಗಿದ್ದಾರೆ ಎಂದು ನ್ಯಾಯಾಲಯ ಹೇಳಿದೆ.
'ಸರ್ಕಾರ ಹೇಳಿದಂತೆ ನೀರಿನ ಪೂರೈಕೆಯಾಗುತ್ತಿದ್ದರೆ, ಇಂತಹ ಪ್ರಕರಣಗಳು ವರದಿಯಾಗುತ್ತಿರುವುದೇಕೆ? ನಿಮ್ಮ ವರದಿಗಳು ಸುಳ್ಳು. ಅವುಗಳನ್ನು ಅಧಿಕಾರಿಗಳು ಕಚೇರಿಯಲ್ಲೇ ಕುಳಿತು ಸಿದ್ಧಪಡಿಸಿದ್ದಾರೆ ಎಂಬುದು ಸ್ಪಷ್ಟವಾಗಿದೆ. ವಾಸ್ತವವೇ ಬೇರೆ ಇದೆ' ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.
ಸ್ಥಳೀಯರು ಹೇಳುವ ಪ್ರಕಾರ, ನೀರಿನ ಟ್ಯಾಂಕರ್ಗಳು ಎಂಟುದಿನಗಳಿಗೆ ಒಮ್ಮೆ ಬರುತ್ತವೆ. ಊರಿನ ಪರಿಸ್ಥಿತಿಯ ಬಗ್ಗೆ ಅವರೇಕೆ ಸುಳ್ಳು ಹೇಳುತ್ತಾರೆ ಎಂದು ಕೇಳಿದೆ.
ಬಳಿಕ ಜೋಶಿ ಅವರು, ನಿಯಮಿತವಾಗಿ ನೀರು ಸರಬರಾಜು ಮಾಡಲಾಗುವುದು ಎಂದು ನ್ಯಾಯಾಲಯಕ್ಕೆ ಭರವಸೆ ನೀಡಿದರು.
ಇದಕ್ಕೆ ಪ್ರತಿಯಾಗಿ, ಹಳ್ಳಿಗಳಲ್ಲಿನ ಬಾವಿಗಳಿಗೆ ಟ್ಯಾಂಕರ್ಗಳ ಮೂಲಕ ನೀರು ಪೂರೈಸುವ ಬದಲು ಮನೆ ಮನೆಗೆ ನೀರು ಪೂರೈಸುವ ಬಗ್ಗೆ ಸರ್ಕಾರ ಆಲೋಚಿಸಬೇಕು ಎಂದು ಸಲಹೆ ನೀಡಿದೆ.

